ADVERTISEMENT

ಕಾಂಗ್ರೆಸ್‌ನವರು ಗೂಬೆ ಕೂರಿಸುವ ಕೆಲಸ ಮಾಡುತ್ತಿದ್ದಾರೆ: ಸಚಿವ ಸೋಮಶೇಖರ್‌ ಟೀಕೆ

​ಪ್ರಜಾವಾಣಿ ವಾರ್ತೆ
Published 26 ಜನವರಿ 2022, 8:11 IST
Last Updated 26 ಜನವರಿ 2022, 8:11 IST
ಎಸ್‌.ಟಿ.ಸೋಮಶೇಖರ್‌
ಎಸ್‌.ಟಿ.ಸೋಮಶೇಖರ್‌    

ಮೈಸೂರು: ‘ಕಾಂಗ್ರೆಸ್‌ನವರಿಗೆ ಮಾಡಲು ಬೇರೆ ಕೆಲಸ ಇಲ್ಲ. ಅದಕ್ಕೆ ಅವರು ಏನೇನೋ ಮಾತನಾಡುತ್ತಾರೆ. ರಾಜಕೀಯ ಕೆಸರೆರಚಾಟ, ಒಬ್ಬರ ಮೇಲೊಬ್ಬರು ಗೂಬೆ ಕೂರಿಸುವ ಕೆಲಸ ಮಾಡುತ್ತಿದ್ದಾರೆ’ ಎಂದು ಸಹಕಾರ ಸಚಿವ ಎಸ್‌.ಟಿ.ಸೋಮಶೇಖರ್‌ ತಿರುಗೇಟು ನೀಡಿದರು.

‘ಬಿಜೆಪಿ ಶಾಸಕರು ನಮ್ಮ ಸಂಪರ್ಕದಲ್ಲಿದ್ದಾರೆ’ ಎಂಬ ಡಿ.ಕೆ.ಶಿವಕುಮಾರ್, ಸಿದ್ದರಾಮಯ್ಯ ಹೇಳಿಕೆಗೆ ಬುಧವಾರ ಇಲ್ಲಿ ಮಾಧ್ಯಮದವರಿಗೆ ಪ್ರತಿಕ್ರಿಯಿಸಿ, ’ಹಾವಿನ ಬುಟ್ಟಿ ಇಟ್ಟುಕೊಂಡು ಹಾವು ಬಿಡ್ತೇನೆ, ಬಿಡ್ತೇನೆ ಎಂದು ಹೇಳುತ್ತಾ ಇರುತ್ತಾರೆ. ಹಾವಿನ ಬುಟ್ಟಿ ತೆರೆದರೆ ತಾನೇ ಗೊತ್ತಾಗೋದು, ಅದು ಬುಸ್‌ ಅನ್ನುತ್ತಾ ಅಥವಾ ಠುಸ್ ಅನ್ನುತ್ತಾ ಅಂತ’ ಎಂದು ಲೇವಡಿ ಮಾಡಿದರು.

‘ಕಾಂಗ್ರೆಸ್ ಶಾಸಕರು ತಮ್ಮ ಸಂಪರ್ಕದಲ್ಲಿದ್ದಾರೆ ಎಂದು ರಮೇಶ ಜಾರಕಿಹೊಳಿ ಅವರೂ ಹೇಳಿದ್ದಾರೆ. ಬಿಜೆಪಿಯವರು ಸಂಪರ್ಕದಲ್ಲಿದ್ದಾರೆ ಎಂದು ಕಾಂಗ್ರೆಸ್‌ನವರು ಹೇಳುತ್ತಿದ್ದಾರೆ. ಈ ರೀತಿಯ ಹೇಳಿಕೆ ಕೊಡುವುದು ಇತ್ತೀಚೆಗೆ ಎಲ್ಲರಿಗೂ ಚಟ ಆಗಿದೆ. ಅದನ್ನು ಗಂಭೀರವಾಗಿ ಪರಿಗಣಿಸಬೇಕಿಲ್ಲ’ ಎಂದರು.

ADVERTISEMENT

‘ಕೋವಿಡ್‌ ನಿಯಂತ್ರಣ, ರಾಜ್ಯದ ಅಭಿವೃದ್ಧಿಯತ್ತ ಮಾತ್ರ ನಾವು ಗಮನ ಹರಿಸಿದ್ದೇವೆ. ಕಾಂಗ್ರೆಸ್‌ ನಾಯಕರು ಇಲ್ಲಸಲ್ಲದ ಹೇಳಿಕೆ ಕೊಡುವ ಬದಲು ಬದಲು ಅಭಿವೃದ್ಧಿ ಕೆಲಸದಲ್ಲಿ ಮುಖ್ಯಮಂತ್ರಿ ಜತೆ ಕೈಜೋಡಿಸಲಿ’ ಎಂದು ಸಲಹೆ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.