ಬೆಂಗಳೂರು: ವೀರಶೈವ–ಲಿಂಗಾಯತ ಸಮುದಾಯಕ್ಕೆ ಕಾಂಗ್ರೆಸ್ ಪಕ್ಷ ಅನ್ಯಾಯವೆಸಗುತ್ತಿದೆ ಎಂದು ಬಿಜೆಪಿ ಆರೋಪಿಸಿದೆ.
ಈ ವಿಚಾರವಾಗಿ ಸರಣಿ ಟ್ವೀಟ್ ಮಾಡಿರುವ ಬಿಜೆಪಿ, ‘ವೀರೇಂದ್ರ ಪಾಟೀಲ್ ಅವರನ್ನು ಅತ್ಯಂತ ಅವಮಾನಕರ ರೀತಿಯಲ್ಲಿ ಮುಖ್ಯಮಂತ್ರಿ ಸ್ಥಾನದಿಂದ ಕಾಂಗ್ರೆಸ್ ಪದಚ್ಯುತಿಗೊಳಿಸಿತ್ತು. ವೀರಶೈವ–ಲಿಂಗಾಯತ ಸಮುದಾಯಕ್ಕೆ ಕಾಂಗ್ರೆಸ್ ನಾಯಕರು ಮಾಡಿದ ಅತಿದೊಡ್ಡ ಅವಮಾನ ಇದಾಗಿತ್ತು. ಈಗ ಎರಡನೇ ಹಂತದಲ್ಲಿ ಬೆಳೆಯುತ್ತಿರುವ ರಾಜಕೀಯ ಕುಡಿಗಳಿಗೂ ಕಾಂಗ್ರೆಸ್ ಪಕ್ಷ ಅನ್ಯಾಯವೆಸಗುತ್ತಿದೆ’ ಎಂದು ವಾಗ್ದಾಳಿ ನಡೆಸಿದೆ.
‘ವೀರಶೈವ ಲಿಂಗಾಯತರನ್ನು ಧರ್ಮದ ಹೆಸರಿನಲ್ಲಿ ಒಡೆಯಲು ಯತ್ನಿಸಿದ್ದ ಕಾಂಗ್ರೆಸ್ ಪಕ್ಷ ಈಗ ಜಾತಿಯ ಹೆಸರಿನಲ್ಲಿ ಸಭೆ ಮಾಡುತ್ತಿದೆ. ಲಿಂಗಾಯತ ನಾಯಕರನ್ನು ಕಾಂಗ್ರೆಸ್ ಪಕ್ಷ ಕಡೆಗಣಿಸುತ್ತಿದೆ ಎಂದು ಸ್ವಪಕ್ಷದ ನಾಯಕರೇ ಆರೋಪಿಸುತ್ತಿದ್ದಾರೆ’ ಎಂದು ಬಿಜೆಪಿ ಟೀಕಿಸಿದೆ.
‘ವೀರಶೈವ–ಲಿಂಗಾಯತರ ವಿಭಜನೆ ಹಾಗೂ ಪ್ರತ್ಯೇಕ ಧರ್ಮ ಸ್ಥಾಪನೆಗೆ ಮುನ್ನುಡಿ ಬರೆದ ಕಾಂಗ್ರೆಸ್ ಪಕ್ಷ ರಾಜ್ಯದ ಪ್ರಬಲ ಸಮುದಾಯವೊಂದರ ಭಾವನೆಗೆ ಘಾಸಿ ಮಾಡಿದೆ. ಈ ಐತಿಹಾಸಿಕ ಪ್ರಮಾದದ ಜತೆಗೆ ಈಗ ತಮ್ಮ ಪಕ್ಷದ ಲಿಂಗಾಯತ ನಾಯಕರಿಗೂ ಕಾಂಗ್ರೆಸ್ ಅನ್ಯಾಯ ಮಾಡುತ್ತಿದೆ’ ಎಂದು ಬಿಜೆಪಿ ದೂರಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.