ADVERTISEMENT

ವಿದ್ಯಾರ್ಥಿಗಳಿಗೆ ಸೆ. 21ರಿಂದ ಶಾಲೆಗಳಿಗೆ ಹೋಗಲು ಅವಕಾಶ ಇಲ್ಲ

​ಪ್ರಜಾವಾಣಿ ವಾರ್ತೆ
Published 19 ಸೆಪ್ಟೆಂಬರ್ 2020, 16:23 IST
Last Updated 19 ಸೆಪ್ಟೆಂಬರ್ 2020, 16:23 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಬೆಂಗಳೂರು: ಒಂಬತ್ತನೇ ತರಗತಿಯಿಂದ 12ನೇ ತರಗತಿವರೆಗಿನ ವಿದ್ಯಾರ್ಥಿಗಳಿಗೆ ಇದೇ 21ರಿಂದ ಶಾಲೆಗಳನ್ನು ತೆರೆದು, ಸಂದೇಹ ಪರಿಹರಿಸಿಕೊಳ್ಳಲು ಅವಕಾಶ ಕಲ್ಪಿಸಬಹುದೆಂದು ಕೇಂದ್ರ ಸರ್ಕಾರ ಸೂಚಿಸಿದ್ದರೂ, ರಾಜ್ಯದಲ್ಲಿ ಈ ತಿಂಗಳ ಅಂತ್ಯದವರೆಗೆ ಅನುಮತಿ ನೀಡದಿರಲು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆ ತೀರ್ಮಾನಿಸಿದೆ.

‘ರಾಜ್ಯದಲ್ಲಿ ಕೋವಿಡ್‌ ಹರಡುತ್ತಿರುವ ಕಾರಣ, ಸದ್ಯದ ಪರಿಸ್ಥಿತಿಯಲ್ಲಿ ವಿದ್ಯಾರ್ಥಿಗಳು ಶಾಲೆಗಳಿಗೆ ಬರುವುದು ಕ್ಷೇಮಕರ ಅಲ್ಲ ಎಂಬ ಕಾರಣಕ್ಕೆ ಈ ತೀರ್ಮಾನ ಕೈಗೊಳ್ಳಲಾಗಿದೆ’ ಎಂದು ಇಲಾಖೆಯ ಪ್ರಧಾನ ಕಾರ್ಯದರ್ಶಿ ಎಸ್‌.ಆರ್‌. ಉಮಾಶಂಕರ್‌ ತಿಳಿಸಿದ್ದಾರೆ.

‘ಮುಂದಿನ ದಿನಗಳಲ್ಲಿ ಪರಿಸ್ಥಿತಿಯನ್ನು ಅವಲೋಕಿಸಿ ಈ ಬಗ್ಗೆ ತೀರ್ಮಾನಕ್ಕೆ ಬರಲಾಗುವುದು’ ಎಂದೂ ಅವರು ತಿಳಿಸಿದ್ದಾರೆ.

ಕೇಂದ್ರ ಸರ್ಕಾರ ಆ. 29ರಂದು ಹೊರಡಿಸಿದ್ದ ಮಾರ್ಗಸೂಚಿಯಲ್ಲಿ, ರಾಜ್ಯಗಳು ಕಂಟೈನ್‌ಮೆಂಟ್‌ ಪ್ರದೇಶ ಹೊರತುಪಡಿಸಿ 9ನೇ ತರಗತಿಯಿಂದ 12ನೇ ತರಗತಿಯ ವರೆಗಿನ ವಿದ್ಯಾರ್ಥಿಗಳಿಗೆ ಸೆ. 21ರಿಂದ ಶಾಲೆಗಳನ್ನು ತೆರೆದು ಸಂದೇಹ ‍ಪರಿಹರಿಸಲು ಅನುಮತಿ ನೀಡಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.