ADVERTISEMENT

ಮಕ್ಕಳ ಮನಸ್ಸು ಒಡೆಯುವ ಮತೀಯ ಸಂಘಟನೆಗಳ ಮೇಲೆ ಕ್ರಮ: ಗೃಹ ಸಚಿವ ಆರಗ ಜ್ಞಾನೇಂದ್ರ

​ಪ್ರಜಾವಾಣಿ ವಾರ್ತೆ
Published 15 ಫೆಬ್ರುವರಿ 2022, 6:46 IST
Last Updated 15 ಫೆಬ್ರುವರಿ 2022, 6:46 IST
   

ಬೆಂಗಳೂರು: ‘ರಾಜ್ಯದಲ್ಲಿ ಪದವಿಪೂರ್ವ ತರಗತಿಗಳೂ ಸೇರಿದಂತೆ ಎಲ್ಲ ಶಾಲಾ ಕಾಲೇಜುಗಳು ಬುಧವಾರದಿಂದ (ಫೆ. 16) ಮತ್ತೆ ಆರಂಭವಾಗುವ ಕಾರಣ ಶಾಂತಿ ಸುವ್ಯವಸ್ಥೆಗೆ ಧಕ್ಕೆ ಆಗದಂತೆ, ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದೆ’ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದರು.

ಸುದ್ದಿಗಾರರರ ಜೊತೆ ಮಂಗಳವಾರ ಮಾತನಾಡಿದ ಅವರು, ‘ಕೆಲವು ಮತೀಯ ಸಂಘಟನೆಗಳು, ಮುಗ್ಧ ವಿದ್ಯಾರ್ಥಿಗಳನ್ನು ಮುಂದಿಟ್ಟುಕೊಂಡು ಸಮಾಜ ಹಾಗೂ ಮನಸ್ಸುಗಳನ್ನು ಒಡೆಯುವ ಪ್ರಯತ್ನ ಮಾಡುತ್ತಿವೆ. ಅಂಥ ಸಂಘಟನೆಗಳಲ್ಲಿ ಇರುವವರನ್ನು ಗುರುತಿಸಿ ಕಾನೂನು ಕ್ರಮ ಕೈಗೊಳ್ಳಲು ಸೂಚಿಸಲಾಗಿದೆ’ ಎಂದರು.

‘ವಿದ್ಯಾರ್ಥಿಗಳು, ಯಾವುದೇ ಆತಂಕ ಅಥವಾ ಅಭದ್ರತೆಯ ಭಯವಿಲ್ಲದೆ ಪಠ್ಯ ಚಟುವಟಿಕೆಯಲ್ಲಿ ತೊಡಗಿಕೊಳ್ಳಬೇಕು’ ಎಂದು ಅವರು ಮನವಿ ಮಾಡಿದರು.

ಪ್ರಶ್ನೆಯೊಂದಕ್ಕೆ ಉತ್ತರಿಸಿದ ಸಚಿವರು, ‘ಕೇವಲ ಬೆರಳೆಣಿಕೆಯಷ್ಟು ವಿದ್ಯಾರ್ಥಿಗಳು ಹಿಜಾಬ್ ಧರಿಸಿಯೇ ಶಾಲೆಗೆ ಬರುತ್ತೇವೆ ಎಂದಿದ್ದಾರೆ. ಅದು ಅವರ ಸ್ವಾಭಾವಿಕವಾದ ಅಭಿಪ್ರಾಯ ಅಲ್ಲ ಎನ್ನುವುದು ನನ್ನ ಅನಿಸಿಕೆ’ ಎಂದರು.

‘ಎಲ್ಲರೂ ಹೈಕೋರ್ಟ್‌ ನೀಡಿರುವ ಮಧ್ಯಂತರ ಆದೇಶಕ್ಕೆ ಗೌರವ ನೀಡಬೇಕು. ಅದರಂತೆ ನಡೆದುಕೊಳ್ಳಬೇಕು’ ಎಂದೂ ಸಚಿವರು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.