ADVERTISEMENT

13 ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ

​ಪ್ರಜಾವಾಣಿ ವಾರ್ತೆ
Published 22 ಅಕ್ಟೋಬರ್ 2021, 19:36 IST
Last Updated 22 ಅಕ್ಟೋಬರ್ 2021, 19:36 IST
ಸಾಂಕೇತಿಕ ಚಿತ್ರ
ಸಾಂಕೇತಿಕ ಚಿತ್ರ   

ಬೆಂಗಳೂರು: ರಾಜ್ಯದ ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಅ.23 ಮತ್ತು 24ರಂದು ಗುಡುಗು, ಸಿಡಿಲು ಸಹಿತ ಭಾರಿ ಮಳೆಯಾಗುವ ಮುನ್ಸೂಚನೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ರಾಜ್ಯದಲ್ಲಿ ಮುಂಗಾರು ಮಾರುತಗಳ ಪ್ರಭಾವ ತಗ್ಗಲಿದ್ದು, ಅ.26ರಿಂದ ಹಿಂಗಾರು ಪ್ರವೇಶಿಸುವ ಲಕ್ಷಣಗಳು ಕಂಡುಬಂದಿವೆ. ಆದರೆ, ದಕ್ಷಿಣ ಒಳನಾಡಿನಲ್ಲಿ ಮುಂದಿನ ಎರಡು ದಿನ ಮಳೆಯಾಗುವ ಸಾಧ್ಯತೆಗಳು ಹೆಚ್ಚಾಗಿವೆ ಎಂದು ಇಲಾಖೆ ಮಾಹಿತಿ ನೀಡಿದೆ.

ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಾಮರಾಜನಗರ, ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಗಳು ಇರುವುದರಿಂದ ‘ಯೆಲ್ಲೊ ಅಲರ್ಟ್‌’ ಘೋಷಿಸಲಾಗಿದೆ.

ADVERTISEMENT

ಕರಾವಳಿ ಜಿಲ್ಲೆಗಳಲ್ಲಿ ಗುಡುಗು, ಸಿಡಿಲು ಹೆಚ್ಚಾಗಿ ಇರಲಿದ್ದು, ಕೆಲವೆಡೆ ಸಾಧಾರಣ ಮಳೆಯಾಗಬಹುದು. ರಾಜ್ಯದ ಉಳಿದ ಜಿಲ್ಲೆಗಳಲ್ಲಿ 26ರವರೆಗೆ ಮಳೆ ತಗ್ಗುವ ಸೂಚನೆಗಳಿವೆ ಎಂದೂ ಹೇಳಿದೆ.

ಮಳೆ–ಎಲ್ಲಿ, ಎಷ್ಟು?: ಮಂಡ್ಯ ಜಿಲ್ಲೆಯ ಬೆಳ್ಳೂರು ಭಾಗದಲ್ಲಿ ಶುಕ್ರವಾರ 8 ಸೆಂ.ಮೀ ಗರಿಷ್ಠ ಮಳೆಯಾಗಿದೆ. ಹಿರೇಕೆರೂರು, ಸಕಲೇಶಪುರ 5, ಕುಂದಾಪುರ, ಗುಬ್ಬಿ, ಶಿವಮೊಗ್ಗ, ಚಿಕ್ಕಮಗಳೂರು, ಹೊಸದುರ್ಗ, ನೆಲಮಂಗಲ 4, ಪುತ್ತೂರು, ಮೂಡುಬಿದಿರೆ, ತಿಪಟೂರು, ಕುಣಿಗಲ್, ಬೇಲೂರು, ಹಿರಿಯೂರು, ಹಾಸನ 3, ಕಾರ್ಕಳ, ಗುಂಡ್ಲುಪೇಟೆ, ಶಿಕಾರಿಪುರ, ಮಧುಗಿರಿ, ಕೊಪ್ಪ, ಚಿತ್ರದುರ್ಗ, ತುಮಕೂರು, ದಾವಣಗೆರೆ 2, ಕಾರವಾರ, ಬೆಳ್ತಂಗಡಿ, ಸಾಗರ, ಭದ್ರಾವತಿ, ಅರಕಲಗೂಡು, ತೊಂಡೆಬಾವಿ, ಗೌರಿಬಿದನೂರು, ಕೋಲಾರದಲ್ಲಿ ತಲಾ 1 ಸೆಂ.ಮೀ ಮಳೆಯಾಗಿದೆ.

ಕಲಬುರಗಿಯಲ್ಲಿ 34 ಡಿಗ್ರಿ ಸೆಲ್ಸಿಯಸ್ ಗರಿಷ್ಠ ತಾಪಮಾನ ಹಾಗೂ ಬೀದರ್‌ನಲ್ಲಿ 14 ಡಿಗ್ರಿ ಸೆಲ್ಸಿಯಸ್ ಕನಿಷ್ಠ ತಾಪಮಾನ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.