ಮಳೆ
(ಪ್ರಾತಿನಿಧಿಕ ಚಿತ್ರ)
ಮಂಗಳೂರು/ಹುಬ್ಬಳ್ಳಿ: ರಾಜ್ಯದ ವಿವಿಧ ಭಾಗಗಳಲ್ಲಿ ಸೋಮವಾರವೂ ಮಳೆಯ ಅಬ್ಬರ ಮುಂದುವರಿದಿದೆ. ಕೆಲವೆಡೆ ಅಂಗನವಾಡಿಗಳಿಗೆ ರಜೆ ಘೋಷಿಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ದಿನವಿಡೀ ಧಾರಾಕಾರ ಮಳೆಯಾಗಿದೆ. ಗಾಳಿಯೂ ಜೋರಾಗಿತ್ತು.
ಪಶ್ಚಿಮ ಘಟ್ಟ ಹಾಗೂ ಘಟ್ಟದ ಮೇಲ್ಭಾಗದಲ್ಲೂ ಭಾರಿ ಮಳೆಯಾಗಿದ್ದರಿಂದ ಕುಮಾರಧಾರಾ ನದಿ ತುಂಬಿ ಹರಿಯುತ್ತಿದೆ. ಕುಕ್ಕೆ ಸುಬ್ರಹ್ಮಣ್ಯದ ಸ್ನಾನಘಟ್ಟ ಮುಳುಗಡೆಯಾಗಿದೆ. ಕ್ಷೇತ್ರಕ್ಕೆ ಭೇಟಿ ನೀಡಿರುವ ಭಕ್ತರು ಸ್ನಾನಘಟ್ಟದ ಬಳಿ ನದಿಯ ನೀರಿಗೆ ಇಳಿಯದಂತೆ ಸೂಚನೆ ನೀಡಲಾಗಿದೆ.
ಭಾಗಮಂಡಲದಲ್ಲಿ 22.50 ಸೆಂ.ಮೀ ಮಳೆ ಸುರಿದಿದ್ದು, ಕಾವೇರಿ ನದಿ ಉಕ್ಕಿ ಹರಿದಿದೆ. ಹಾಸನದ ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಭೂಕುಸಿತವಾಗಿದ್ದು, ಮಣ್ಣು ತೆರವುಗೊಳಿಸಿ ವಾಹನ ಸಂಚಾರಕ್ಕೆ ಅನುವು ಮಾಡಿಕೊಡಲಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಣೆಯಾಗಿರುವುದರಿಂದ, ಅಂಗನವಾಡಿಯಿಂದ ಹಿಡಿದು ಪಿಯುಸಿ ವರೆಗಿನ ಸರ್ಕಾರಿ, ಅನುದಾನಿತ ಮತ್ತು ಖಾಸಗಿ ವಿದ್ಯಾ ಸಂಸ್ಥೆಗಳಿಗೆ ಮಂಗಳವಾರ ಮತ್ತು ಬುಧವಾರ ರಜೆ ನೀಡಿ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ.
ಮೂವರ ಸಾವು: ಮಳೆಗೆ ಸಂಬಂಧಿಸಿದ ವಿವಿಧ ಪ್ರಕರಣಗಳಲ್ಲಿ ಮೂವರು ಮೃತಪಟ್ಟಿದ್ದಾರೆ. ಮೈಸೂರು ಜಿಲ್ಲೆ ನಂಜನಗೂಡು ತಾಲ್ಲೂಕಿನ ಏಚಗಳ್ಳಿಯಲ್ಲಿ ವಿದ್ಯುತ್ ತಂತಿ ತುಳಿದು ಸಿದ್ದರಾಜು (55), ಬೆಳಗಾವಿ ಜಿಲ್ಲೆಯ ಗೋಕಾಕದ ಮಹಾಲಿಂಗೇಶ್ವರ ಕಾಲೊನಿಯಲ್ಲಿ ಸೋಮವಾರ ನಸುಕಿನಲ್ಲಿ ಮನೆ ಗೋಡೆ ಕುಸಿದು, ಮೂರು ವರ್ಷದ ಬಾಲಕಿ ಕೃತಿಕಾ ನಾಗೇಶ ಪೂಜಾರಿ ಹಾಗೂ ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಕಂಕಣವಾಡಿ ಗ್ರಾಮದ ರೈತ ಕಲ್ಲಪ್ಪ ಧರೆಪ್ಪ ಅಂಬಿ (65) ಭಾನುವಾರ ಕೃಷ್ಣಾ ನದಿಯಲ್ಲಿ ಈಜುತ್ತ ತಮ್ಮ ಜಮೀನಿಗೆ ಹೋಗುವಾಗ, ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.