ADVERTISEMENT

ರಾಜ್ಯದ ಹಲವೆಡೆ ಭಾರಿ ಮಳೆ: ಜಲಾಶಯಗಳಿಗೆ ಒಳಹರಿವು ಹೆಚ್ಚಳ

ಅಪಾಯದಲ್ಲಿ ಮಡಿಕೇರಿ ಆಕಾಶವಾಣಿ ಗೋಪುರ

​ಪ್ರಜಾವಾಣಿ ವಾರ್ತೆ
Published 14 ಜುಲೈ 2021, 20:28 IST
Last Updated 14 ಜುಲೈ 2021, 20:28 IST
ಕಾರವಾರದಲ್ಲಿ ಬುಧವಾರ ಸುರಿದ ಧಾರಾಕಾರ ಮಳೆಯಲ್ಲೇ ಜನರು ಸಾಗಿದರು – ಪ್ರಜಾವಾಣಿ ಚಿತ್ರ/ ದಿಲೀಪ ರೇವಣಕರ್
ಕಾರವಾರದಲ್ಲಿ ಬುಧವಾರ ಸುರಿದ ಧಾರಾಕಾರ ಮಳೆಯಲ್ಲೇ ಜನರು ಸಾಗಿದರು – ಪ್ರಜಾವಾಣಿ ಚಿತ್ರ/ ದಿಲೀಪ ರೇವಣಕರ್   

ಬೆಂಗಳೂರು: ರಾಜ್ಯದ ಹಲವೆಡೆ ಬುಧವಾರ ಭಾರಿ ಮಳೆಯಾಗಿದ್ದು, ಜಲಾಶಯಗಳಿಗೆ ಒಳಹರಿವು ಹೆಚ್ಚಿದೆ. ಕೊಡಗು ಜಿಲ್ಲೆಯಾದ್ಯಂತ ಬಿರುಗಾಳಿ ಸಹಿತ ಧಾರಾಕಾರ ಮಳೆಯಾಗುತ್ತಿದ್ದು, ಈ ವರ್ಷವೂ ಪ್ರವಾಹ ಭೀತಿ ಎದುರಾಗಿದೆ.

ಶಿವಮೊಗ್ಗ ಜಿಲ್ಲೆಯಲ್ಲಿ ಮಂಗಾರು ಬಿರುಸು ಪಡೆದುಕೊಂಡಿದೆ. ಲಿಂಗನಮಕ್ಕಿ ಜಲಾಶಯಕ್ಕೆ 33,331 ಕ್ಯುಸೆಕ್ ನೀರು ಹರಿದುಬಂದಿದ್ದು, ಜಲಾಶಯದ ನೀರಿನ ಮಟ್ಟ 1786.05 ಅಡಿಗಳಿಗೆ ತಲುಪಿದೆ.

ಭದ್ರಾ ಜಲಾಶಯಕ್ಕೆ 7,646 ಕ್ಯುಸೆಕ್ ನೀರು ಹರಿದುಬಂದಿದ್ದು, ಜಲಾಶಯದ ನೀರಿನ ಮಟ್ಟ 157.4 ಅಡಿಗಳಿಗೆ ಹೆಚ್ಚಳವಾಗಿದೆ. ತುಂಗಾ ಜಲಾಶಯಕ್ಕೆ 11,456 ಕ್ಯುಸೆಕ್‌ ನೀರು ಹರಿದುಬರುತ್ತಿದ್ದು, ಅಷ್ಟೇ ಪ್ರಮಾಣದ ನೀರನ್ನು ನದಿಗೆ ಬಿಡಲಾಗುತ್ತಿದೆ. ಮಾಣಿ ಜಲಾಶಯಕ್ಕೆ 4,095 ಕ್ಯುಸೆಕ್ ಒಳಹರಿವು ಇದೆ.

ADVERTISEMENT

ಕಾರವಾರ ತಾಲ್ಲೂಕಿನ ಕದ್ರಾ ಜಲಾಶಯಕ್ಕೆ ಒಳಹರಿವು ಹೆಚ್ಚಿದೆ. ಜಲಾಶಯಕ್ಕೆ 22,111 ಕ್ಯುಸೆಕ್ ಒಳಹರಿವಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ಜಲಾಶಯದ ಮೂರು ಕ್ರೆಸ್ಟ್‌ ಗೇಟ್‌ಗಳಿಂದ ಕಾಳಿ ನದಿಗೆ 10,050 ಕ್ಯುಸೆಕ್ ನೀರನ್ನು ಹರಿಸಲಾಗುತ್ತಿದೆ. ವಿದ್ಯುತ್ ಉತ್ಪಾದನೆಗಾಗಿ 17,848 ಕ್ಯುಸೆಕ್ ಬಿಡಲಾಗುತ್ತಿದೆ.

ಹಾರಂಗಿ ಜಲಾಶಯದ ಒಳಹರಿವು 12,282 ಕ್ಯುಸೆಕ್‌ಗೆ ಏರಿಕೆಯಾಗಿದೆ. ಭರ್ತಿಗೆ 7 ಅಡಿ ಬಾಕಿಯಿದೆ.

ಚಿಕ್ಕಮಗಳೂರು ಜಿಲ್ಲೆಯಲ್ಲಿ ಮಳೆಯ ಅಬ್ಬರ ಬುಧವಾರ ತುಸು ಹೆಚ್ಚಾಗಿದೆ. ಕುಮಾರಧಾರಾ ನದಿಯಲ್ಲಿ ನೀರಿನ ಹರಿವು ಹೆಚ್ಚಳವಾಗಿದ್ದು, ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದ ಸ್ನಾನಘಟ್ಟ ಮುಳುಗಡೆಯಾಗಿದೆ.

ಕುಮಾರಧಾರಾ ನದಿ ಸೇತುವೆ ಕೆಳಭಾಗದ ಕಿಂಡಿ ಅಣೆಕಟ್ಟೆ ಕೂಡ ಮುಳುಗಡೆಯಾಗಿದೆ. ಆದಿಸುಬ್ರಹ್ಮಣ್ಯ ಬಳಿಯ ದರ್ಪಣತೀರ್ಥ ನದಿಯಲ್ಲಿ ನೀರಿನ ಮಟ್ಟ ಹೆಚ್ಚಳವಾಗಿದೆ. ಸ್ನಾನಘಟ್ಟ ಮುಳುಗಡೆ ಆಗಿರುವುದರಿಂದ ಯಾತ್ರಾರ್ಥಿಗಳು ನದಿ ದಡದಲ್ಲಿ ತೀರ್ಥಸ್ನಾನ ಮಾಡಿದರು. ಸುಬ್ರಹ್ಮಣ್ಯ-ಬಿಸಿಲೆ-ಸಕಲೇಶಪುರ ಹೆದ್ದಾರಿಯಲ್ಲಿ ಬಿಸಿಲೆ ಸಮೀಪ ರಸ್ತೆಗೆ ಮರ ಬಿದ್ದು, ಸಂಚಾರ ಸ್ಥಗಿತಗೊಂಡಿತ್ತು.

ಭಾಗಮಂಡಲ ತ್ರಿವೇಣಿ ಸಂಗಮವು ಜಲಾವೃತಗೊಂಡಿದೆ. ಲಕ್ಷ್ಮಣತೀರ್ಥ ನದಿಯಲ್ಲೂ ನೀರಿನಮಟ್ಟ ಏರಿಕೆಯಾಗಿದ್ದು, ಹಳ್ಳ–ಕೊಳ್ಳಗಳು ತುಂಬಿ ಹರಿಯುತ್ತಿವೆ.

ಭಾಗಮಂಡಲ-ತಲಕಾವೇರಿ ವ್ಯಾಪ್ತಿಯಲ್ಲಿ ನಿರಂತರ ಮಳೆಯಾಗುತ್ತಿದ್ದು, ಬಲಮುರಿಯ ಕಿರುಸೇತುವೆ ಮೇಲೆ ನೀರು ಹರಿಯುತ್ತಿದೆ. ಈ ಮಾರ್ಗದಲ್ಲಿ ವಾಹನ ಸಂಚಾರ ಬಂದ್‌ ಆಗಿದೆ.

ಮಡಿಕೇರಿ–ಮಂಗಳೂರು ರಸ್ತೆಯ ತಾಳತ್ತಮನೆ ಎಂಬಲ್ಲಿ ಸಣ್ಣ ಪ್ರಮಾಣದಲ್ಲಿ ಭೂಕುಸಿತವಾಗಿದ್ದು, 6 ಕುಟುಂಬಗಳನ್ನು ಪರಿಹಾರ ಕೇಂದ್ರಕ್ಕೆ ಸ್ಥಳಾಂತರಿಸಲಾಗಿದೆ. ಇದೇ ಸ್ಥಳದಲ್ಲಿ 2018ರಲ್ಲೂ ಭೂಕುಸಿತವಾಗಿತ್ತು. ಅಲ್ಲಿ ತಡೆಗೋಡೆ ಕಾಮಗಾರಿ ಪ್ರಗತಿಯಲ್ಲಿದ್ದು ಮಣ್ಣು ಸಡಿಲಗೊಂಡು ಮತ್ತೆ ಕುಸಿಯುಲು ಆರಂಭಿಸಿದೆ. ಮಡಿಕೇರಿ ಆಕಾಶವಾಣಿ ಟವರ್‌ ಬಳಿ ಗುಡ್ಡದ ಮಣ್ಣು ಕುಸಿದಿದೆ. ಟವರ್‌ನಿಂದ ಸ್ವಲ್ಪವೇ ದೂರದಲ್ಲಿ ಜನವಸತಿ ಪ್ರದೇಶವಿದ್ದು, ಆತಂಕ ಎದುರಾಗಿದೆ.

ಹಾಸನದಲ್ಲೂ ಮಳೆ: ಹಾಸನ ನಗರ ಸೇರಿದಂತೆ ಜಿಲ್ಲೆಯ ವಿವಿಧೆಡೆ ಉತ್ತಮ ಮಳೆಯಾಗಿದೆ. ಬಿಸಿಲೆ ಸಮೀಪ ರಸ್ತೆಗೆ ಮರ ಉರುಳಿ ಬಿದ್ದ ಪರಿಣಾಮ ಬಿಸಿಲೆ-ಸುಬ್ರಹ್ಮಣ್ಯ ಸಂಚಾರ ಕೆಲ ಕಾಲ ಬಂದ್‌ ಆಗಿತ್ತು. ಮೈಸೂರು ಜಿಲ್ಲೆಯಲ್ಲಿ ಬಹುತೇಕ ಕಡೆ ಜಿಟಿಜಿಟಿ ಮಳೆಯಾಗಿದೆ.

ದಕ್ಷಿಣ ಕನ್ನಡ ಜಿಲ್ಲೆಯ ಕಡಬ, ಸುಳ್ಯ, ಬಂಟ್ವಾಳ, ಪುತ್ತೂರು, ಮಂಗಳೂರು, ಬೆಳ್ತಂಗಡಿ ತಾಲ್ಲೂಕುಗಳಲ್ಲಿ ನಿರಂತರ ಮಳೆಯಾಗುತ್ತಿದೆ. ಸುಳ್ಯ ತಾಲ್ಲೂಕಿನಲ್ಲಿ ಗರಿಷ್ಠ 8 ಸೆಂ.ಮೀ. ಮಳೆ ದಾಖಲಾಗಿದೆ. ಜಿಲ್ಲೆಯಲ್ಲಿ ಒಂದು ಮನೆಗೆ ಪೂರ್ಣ, 8 ಮನೆಗಳಿಗೆ ಭಾಗಶಃ ಹಾನಿಯಾಗಿದೆ.

ಉಡುಪಿ ಜಿಲ್ಲೆಯ ನಿಟ್ಟೆ, ಗುಲ್ವಾಡಿ, ಕೆದೂರು, ಉಳ್ಳೂರು, ತಲ್ಲೂರು, ಶಿರೂರು, ಕಾರ್ಕಳ, ಹೊಸಾಳ, ಶಿವಳ್ಳಿ, ಉದ್ಯಾವರ, ಮೂಡನಿಡಂಬೂರು ಗ್ರಾಮದಲ್ಲಿ ಮನೆಗಳಿಗೆ ಭಾಗಶಃ ಹಾನಿಯಾಗಿದೆ.

ಚಿಕ್ಕಮಗಳೂರು ಜಿಲ್ಲೆಯ ಗಿರಿಶ್ರೇಣಿ ಭಾಗದಲ್ಲಿಮಳೆಯಿಂದಾಗಿ ಹಳ್ಳ, ಹೊಳೆಗಳ ಹರಿವಿನ ಪ್ರಮಾಣ ಹೆಚ್ಚಾಗಿದೆ. ಹೊಸನಗರದಲ್ಲಿ 14.24 ಸೆಂ.ಮೀ ಮಳೆಯಾಗಿದ್ದು, ತೀರ್ಥಹಳ್ಳಿಯಲ್ಲಿ 79.68 ಮಿ.ಮೀ, ಸಾಗರದಲ್ಲಿ 70.80 ಮಿ.ಮೀ ಮಳೆ ದಾಖಲಾಗಿದೆ. ದಾವಣಗೆರೆ ಜಿಲ್ಲೆಯಲ್ಲೂ ಉತ್ತಮ
ಮಳೆಯಾಗಿದೆ.

ಪರಿಹಾರ ವಿತರಣೆ: ಶಿರಸಿಯ ಗುಡ್ನಾಪುರ ಗ್ರಾಮದ ಮುಂಡಿಗೆಹಳ್ಳಿಯಲ್ಲಿ ಮಂಗಳವಾರ ಮನೆ ಬಿದ್ದು ಮೃತಪಟ್ಟ ಯಶೋಧಾ ಬಂಗಾರ್ಯ ಗೌಡ (31) ಕುಟುಂಬಕ್ಕೆ ಸರ್ಕಾರವು ₹ 5 ಲಕ್ಷ ಪರಿಹಾರ ವಿತರಣೆ ಮಾಡಿದೆ. ಘಟನೆ ನಡೆದು 16 ಗಂಟೆಗಳಲ್ಲೇ ಪರಿಹಾರ ದೊರೆತಂತಾಗಿದೆ.

ಶಿರಸಿ, ಸಿದ್ದಾಪುರ, ಯಲ್ಲಾಪುರ, ದಾಂಡೇಲಿ, ಹಳಿಯಾಳದಲ್ಲೂ ಉತ್ತಮ ಮಳೆಯಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.