ADVERTISEMENT

ನೆರೆ ಪರಿಹಾರ ಕಾರ್ಯಕ್ಕೆ ₹500 ಕೋಟಿ: ಸಿಎಂ ಬೊಮ್ಮಾಯಿ

​ಪ್ರಜಾವಾಣಿ ವಾರ್ತೆ
Published 3 ಆಗಸ್ಟ್ 2022, 21:00 IST
Last Updated 3 ಆಗಸ್ಟ್ 2022, 21:00 IST
ಬಸವರಾಜ ಬೊಮ್ಮಾಯಿ
ಬಸವರಾಜ ಬೊಮ್ಮಾಯಿ   

ಮುಟ್ಟಳ್ಳಿ (ಕಾರವಾರ): ‘ರಾಜ್ಯದಾದ್ಯಂತ ಅತಿವೃಷ್ಟಿಯಿಂದ ಹಾನಿಗೀಡಾದ ಪ್ರದೇಶಗಳಲ್ಲಿ ತುರ್ತು ಪರಿಹಾರ ಕಾರ್ಯಗಳಿಗೆ ತಕ್ಷಣವೇ ₹ 500 ಕೋಟಿ ಬಿಡುಗಡೆ ಮಾಡಲಾಗಿದೆ’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಭಟ್ಕಳ ತಾಲ್ಲೂಕಿನ ಮುಟ್ಟಳ್ಳಿ ಗ್ರಾಮದಲ್ಲಿ ಭೂ ಕುಸಿತದಿಂದ ನಾಲ್ವರು ಮೃತಪಟ್ಟ ಪ್ರದೇಶಕ್ಕೆ ಬುಧವಾರ ಭೇಟಿ ನೀಡಿದ ನಂತರ ಅವರು ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.

‘ಈವರೆಗಿನ ಮಾಹಿತಿಯ ಪ್ರಕಾರ, 14 ಜಿಲ್ಲೆಗಳಲ್ಲಿ ಮಳೆಯಿಂದ ಹಾನಿಯಾದ ವರದಿಯಿದೆ. ಉತ್ತರ ಕನ್ನಡ ಹಾಗೂ ತುಮಕೂರು ಜಿಲ್ಲೆಗಳಲ್ಲಿ ತಲಾ ನಾಲ್ವರು, ವಿಜಯನಗರ ಜಿಲ್ಲೆಯಲ್ಲಿ ಒಬ್ಬರು ಮೃತಪಟ್ಟಿದ್ದಾರೆ. ಸುಮಾರು 600 ಮನೆಗಳು ಸಂಪೂರ್ಣವಾಗಿ ನಾಶವಾಗಿವೆ. 21,471 ಹೆಕ್ಟೇರ್‌ಗಳಷ್ಟು ಕೃಷಿ ಪ್ರದೇಶಕ್ಕೆ ಹಾನಿಯಾಗಿದೆ’ ಎಂದು ತಿಳಿಸಿದರು.

ADVERTISEMENT

‘ಭೂಕುಸಿತವಾದ ಪ್ರದೇಶಗಳ ಭೌಗೋಳಿಕ ಸಮೀಕ್ಷೆ ಮಾಡಿಸಲಾಗುವುದು. ಮುಟ್ಟಳ್ಳಿಯಲ್ಲಿ ಮೃತಪಟ್ಟ ನಾಲ್ವರ ಕುಟುಂಬಕ್ಕೆ ಒಟ್ಟು ₹ 20 ಲಕ್ಷ ಪರಿಹಾರ ವಿತರಿಸಲಾಗಿದೆ. ಮಕ್ಕಳ ಸ್ನಾತಕೋತ್ತರ ವಿದ್ಯಾಭ್ಯಾಸದ ತನಕ ಸರ್ಕಾರವೇ ಸಂಪೂರ್ಣ ಜವಾಬ್ದಾರಿ ವಹಿಸಲಿದೆ. ಭೂಕುಸಿತವಾಗಿ ನೆಲಸಮವಾದ ಮನೆಯ ಕುಟುಂಬದವರ ವಾಸ್ತವ್ಯಕ್ಕೆ ಪರ್ಯಾಯ ವ್ಯವಸ್ಥೆ ಮಾಡಲು ಜಿಲ್ಲಾಧಿಕಾರಿಗೆ ಸೂಚಿಸಲಾಗಿದೆ’ ಎಂದು ಪ್ರಕಟಿಸಿದರು.

‘ಸಂಕಷ್ಟ ಸಮಯದಲ್ಲಿ ವೈಯಕ್ತಿಕ ಉತ್ಸವ ಬೇಕೇ?’

ಸಿದ್ದರಾಮಯ್ಯ ಅವರ 75ನೇ ಜನ್ಮದಿನಾಚರಣೆ ಸಮಾರಂಭದ ಬಗ್ಗೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ‘ಅವರಿಗೆ 75 ವರ್ಷವಾಗಿದ್ದು ವೈಯಕ್ತಿಕವಾಗಿ ನನಗೆ ಸಂತಸ ಕೊಟ್ಟಿದೆ. ದೀರ್ಘ ಕಾಲ ಬಾಳಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ. ರಾಜ್ಯದ ಜನ ಪ್ರವಾಹದಿಂದ ಸಾವು, ನೋವಿನ ಸಂಕಷ್ಟದಲ್ಲಿರುವ ಈ ಸಂದರ್ಭದಲ್ಲಿ ವೈಯಕ್ತಿಕ ಉತ್ಸವಗಳು ಬೇಕೇ ಎಂಬ ಪ್ರಶ್ನೆಗೆ ಅವರೇ ಉತ್ತರಿಸಬೇಕು’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.