ADVERTISEMENT

ರಾಜ್ಯದಲ್ಲಿ ಮಳೆ ಅಬ್ಬರ; ಸಾವಿರಾರು ಎಕರೆ ಜಲಾವೃತ

​ಪ್ರಜಾವಾಣಿ ವಾರ್ತೆ
Published 5 ಆಗಸ್ಟ್ 2022, 21:00 IST
Last Updated 5 ಆಗಸ್ಟ್ 2022, 21:00 IST
ಕುಕ್ಕೆಯಲ್ಲಿ ಸ್ನಾನ ಘಟ್ಟ ಮುಳುಗಡೆ
ಕುಕ್ಕೆಯಲ್ಲಿ ಸ್ನಾನ ಘಟ್ಟ ಮುಳುಗಡೆ   

ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುರುವಾರ ರಾತ್ರಿ ಮತ್ತು ಶುಕ್ರವಾರ ಮಳೆ ಅಬ್ಬರಿಸಿದೆ.

ಹಾಸನ ಜಿಲ್ಲೆಯಲ್ಲಿ ಮನೆ ಗೋಡೆ ಕುಸಿದು ಬಾಲಕ ಮೃತಪಟ್ಟಿದ್ದರೆ, ತುಮಕೂರು ಜಿಲ್ಲೆಯಲ್ಲಿ ಬುಧವಾರ ರಾತ್ರಿ ನೀರಿನಲ್ಲಿ ಕೊಚ್ಚಿಕೊಂಡು ಹೋದ ಇಬ್ಬರ ಶೋಧ ಕಾರ್ಯ ಮುಂದುವರಿದಿದೆ.

ಸಾವಿರಾರು ಎಕರೆ ಜಮೀನು ಜಲಾವೃತಗೊಂಡಿದ್ದು, ಅಪಾರ ಪ್ರಮಾಣದ ಬೆಳೆ ನಾಶವಾಗಿದೆ. ಹಲವೆಡೆ ಮನೆಗಳ ಗೋಡೆ ಕುಸಿದು ಬಿದ್ದಿವೆ.

ADVERTISEMENT

ಹಾಸನ ಜಿಲ್ಲೆಯ ನುಗ್ಗೇಹಳ್ಳಿ ಹೋಬಳಿಯ ಭೂವನಹಳ್ಳಿಯ ಅಜ್ಜಿಯ ಮನೆಯಲ್ಲಿ ಮಲಗಿದ್ದ ಬಾಲಕ ಪ್ರಜ್ವಲ್ (13) ಶುಕ್ರವಾರ ಬೆಳಗಿನ ಜಾವ ಗೋಡೆ ಕುಸಿದು ಸ್ಥಳದಲ್ಲೇ ಮೃತಪಟ್ಟಿದ್ದಾನೆ.

ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲ್ಲೂಕಿನ ದೊಡ್ಡ ಹರವೇ ಒಂದನೇ ಕ್ಯಾಂಪಿನಲ್ಲಿ ಮನೆಯ ಚಾವಣಿ ಕುಸಿದು ಮೂರು ಹಸುಗಳು ಮೃತಪಟ್ಟಿವೆ.

ವಿಜಯಪುರದಲ್ಲಿ ಡೋಣಿ ನದಿ ಉಕ್ಕಿ ಹಕ್ಕಿ ಹರಿದು, ಸಾವಿರಾರು ಎಕರೆ ಜಮೀನು ಮುಳುಗಡೆಯಾಗಿದೆ.

ಮಂಡ್ಯ ಜಿಲ್ಲೆಯ ಕೆಆರ್‌ಎಸ್‌ ಜಲಾಶಯದಿಂದ 80 ಸಾವಿರ ಕ್ಯುಸೆಕ್‌ ನೀರು ಬಿಡುಗಡೆ ಮಾಡಿರುವುದರಿಂದ ಕಾವೇರಿ ನದಿ ತೀರದಲ್ಲಿ ಪ್ರವಾಹ ಭೀತಿ ಎದುರಾಗಿದ್ದು ಮುಂಜಾಗೃತಾ ಕ್ರಮವಾಗಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.

ಕೊಡಗು ಜಿಲ್ಲೆಯ ಭಾಗಮಂಡಲದಲ್ಲಿ ಕಾವೇರಿ ನದಿ ಉಕ್ಕಿ ಹರಿಯುತ್ತಿದ್ದು, ಭಾಗಮಂಡಲ– ನಾಪೋಕ್ಲು ಸಂಪರ್ಕ ಕಡಿತಗೊಂಡಿದೆ.

ಹಾರಂಗಿ ಜಲಾಶಯದಿಂದ 14 ಸಾವಿರ ಕ್ಯುಸೆಕ್‌ ನೀರನ್ನು ಹರಿಸುತ್ತಿರುವುದರಿಂದ ನದಿಯಂಚಿನ ಗ್ರಾಮಗಳಲ್ಲಿ ಪ್ರವಾಹ ಭೀತಿ ಎದುರಾಗಿದೆ.

ಕಾವೇರಿ ನದಿ ಉಕ್ಕಿ ಹರಿಯುತ್ತಿರುವ ಪರಿಣಾಮ, ಹೊಗೆನಕಲ್‌ ಜಲಪಾತದ ಇಡೀ ಪ್ರದೇಶ ಮುಳುಗಡೆಯಾಗಿದ್ದು, ಪ್ರವಾಸಿಗರನ್ನು ನಿರ್ಬಂಧಿಸಲಾಗಿದೆ.

ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಶುಕ್ರವಾರ ಇಡೀ ದಿನ ಧಾರಾಕಾರ ಮಳೆ ಸುರಿಯಿತು. ಸುಳ್ಯ, ಕಡಬ ತಾಲ್ಲೂಕುಗಳಲ್ಲಿ 58 ಜನರನ್ನು ಕಾಳಜಿ ಕೇಂದ್ರಗಳಿಗೆ ಸ್ಥಳಾಂತರಿಸಲಾಗಿದೆ.

ಸುಬ್ರಹ್ಮಣ್ಯದಲ್ಲಿ ನಿರಂತರ ಮಳೆಯಾಗುತ್ತಿದ್ದು, ಕುಕ್ಕೆ ಕ್ಷೇತ್ರದಲ್ಲಿ ಕುಮಾರಧಾರ ಸ್ನಾನಘಟ್ಟ ಸಂಪೂರ್ಣ ಮುಳುಗಿದೆ. ಹಲವೆಡೆ ತೋಟಗಳು ನದಿ ನೀರಿನಿಂದ ಮುಳುಗಡೆಯಾಗಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.