ಬೆಂಗಳೂರು: ಕರ್ನಾಟಕ ರಾಜ್ಯ ಸರ್ಕಾರವು ಕಾಸರಗೋಡು ವ್ಯಾಪ್ತಿಯಲ್ಲಿ ಕೇರಳದ ಗಡಿ ರಸ್ತೆ ಮುಚ್ಚಿರುವುದನ್ನು ಪ್ರಶ್ನಿಸಿ ಕೇರಳ ಹೈಕೋರ್ಟ್ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಲಾಗಿದೆ.
ಈ ಕುರಿತಂತೆ ಕೇರಳ ಹೈಕೋರ್ಟ್ ವಕೀಲರ ಸಂಘ ಸಲ್ಲಿಸಿರುವ ಈ ಅರ್ಜಿಯನ್ನು ಕೇರಳ ಹೈಕೋರ್ಟ್ ಮಂಗಳವಾರ ವಿಡಿಯೊ ಕಾನ್ಫರೆನ್ಸ್ ಮುಖಾಂತರ
ವಿಚಾರಣೆ ನಡೆಸಿತು.
ವಿಚಾರಣೆ ವೇಳೆ ರಾಜ್ಯದ ಅಡ್ವೊಕೇಟ್ ಜನರಲ್ ಪ್ರಭುಲಿಂಗ ಕೆ.ನಾವದಗಿ ಅವರು, ‘ರಸ್ತೆ ತಡೆಯಿಂದ ರೋಗಿಗಳ ಹಕ್ಕಿಗೆ ಧಕ್ಕೆ ಆಗಿದೆ ಎಂಬ ಅರ್ಜಿದಾರರ ಆರೋಪವನ್ನು ಅಲ್ಲಗಳೆದರು. ಅಂತೆಯೇ ಕನಿಷ್ಠ ಆ್ಯಂಬುಲೆನ್ಸ್ಗಳ ಸಂಚಾರಕ್ಕಾಗಿ ರಸ್ತೆ ತೆರವಿಗೆ ನಿರ್ದೇಶಿಸಬೇಕು’ ಎಂಬ ಮನವಿಗೆ ಆಕ್ಷೇಪ ವ್ಯಕ್ತಪಡಿಸಿದರು.
‘ಮಂಗಳೂರಿನಲ್ಲೇ ಕೊರೊನಾ ವೈರಸ್ ಪ್ರಕರಣಗಳು ಹೆಚ್ಚಾಗಿವೆ. ಒಂದು ವೇಳೆ ಸಂಚಾರಕ್ಕೆ ಅವಕಾಶ ನೀಡಿದರೆ ಸಮಸ್ಯೆ ಉಲ್ಬಣಿಸಲಿದೆ. ಕಾಸರಗೋಡಿನಲ್ಲಿ ಕೊರೋನಾ ವೈರಸ್ ಬಾಧಿತರ ಸಂಖ್ಯೆಯೂ ಹೆಚ್ಚಿದೆ’ ಎಂದು ಆತಂಕ ವ್ಯಕ್ತಪಡಿಸಿದರು.
‘ಆ್ಯಂಬುಲೆನ್ಸ್ಗಳ ಸಂಚಾರಕ್ಕೆ ಅವಕಾಶ ನೀಡಿದರೆ ಮಂಗಳೂರಿನ ಆಸ್ಪತ್ರೆಗಳಿಗೆ ಒತ್ತಡ ಹೆಚ್ಚಾಗುತ್ತದೆ. ಹೀಗಾಗಿ ಅಂತರರಾಜ್ಯ ರಸ್ತೆಯಲ್ಲಿ ಸಂಚಾರ ಸಾಧ್ಯವಿಲ್ಲವೆಂದು’ ಪ್ರತಿಪಾದಿಸಿದರು.
ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಪೀಠ, ‘ಮಾನವೀಯ ನೆಲೆಯಲ್ಲಿ ಅರ್ಜಿದಾರರ ಕೋರಿಕೆ ಪರಿಗಣಿಸುವ ದಿಸೆಯಲ್ಲಿ ಮರುಪರಿಶೀಲನೆ ನಡೆಸಿ’ ಎಂದು ಸೂಚಿಸಿ ವಿಚಾರಣೆಯನ್ನು ಬುಧವಾರಕ್ಕೆ (ಏ.1) ಮುಂದೂಡಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.