ಬೆಂಗಳೂರು:ಎರಡನೇ ಅಲೆ ಮುಗಿದ ಬಳಿಕ ರಾಜ್ಯದಲ್ಲಿ ಇಳಿಕೆಯ ಹಾದಿ ಕಂಡಿದ್ದ ಕೋವಿಡ್ ಪ್ರಕರಣಗಳ ಸಂಖ್ಯೆ, ಮತ್ತೆ ಏರುಗತಿ ಕಂಡಿದ್ದು ಇದೇ ಮೊದಲ ಬಾರಿ ಪ್ರಕರಣಗಳ ಸಂಖ್ಯೆ ಒಂದು ಸಾವಿರ ದಾಟಿದೆ.
ಶನಿವಾರ 1033 ಪ್ರಕರಣಗಳು ದೃಢಪಟ್ಟಿದೆ. ಐವರು ಮೃತಪಟ್ಟಿದ್ದಾರೆ ಎಂದು ಆರೋಗ್ಯ ಇಲಾಖೆ ವರದಿ ಹೇಳಿದೆ.ಶುಕ್ರವಾರ 832 ಪ್ರಕರಣಗಳು ದೃಢಪಟ್ಟಿದ್ದವು.
ಈವರೆಗೆ ವರದಿಯಾದ ಒಟ್ಟು ಪ್ರಕರಣಗಳ ಸಂಖ್ಯೆ 30.08 ಲಕ್ಷ ದಾಟಿದೆ. ಸೋಂಕಿತರಲ್ಲಿ 354 ಮಂದಿ ಚೇತರಿಸಿಕೊಂಡಿದ್ದಾರೆ. ಇದರಿಂದ, ಗುಣಮುಖರಾದವರ ಒಟ್ಟು ಸಂಖ್ಯೆ 29.60 ಲಕ್ಷ ದಾಟಿದೆ.
ಸಕ್ರಿಯ ಪ್ರಕರಣಗಳ ಸಂಖ್ಯೆಯೂ 9 ಸಾವಿರದ ಗಡಿ (9,386) ದಾಟಿದೆ. ಕೋವಿಡ್ ಪರೀಕ್ಷೆಗಳ ಸಂಖ್ಯೆಯೂ ಏರಿಕೆ ಕಂಡಿದ್ದು, ಒಂದು ದಿನದ ಅವಧಿಯಲ್ಲಿ 1.19 ಲಕ್ಷ ಮಾದರಿಗಳನ್ನು ಪರೀಕ್ಷೆ ಮಾಡಲಾಗಿದೆ. ಸೋಂಕು ದೃಢ ಪ್ರಮಾಣ ಶೇ 0.86ರಷ್ಟಿದೆ. ಏಳು ಜಿಲ್ಲೆಗಳಲ್ಲಿ ಹೊಸ ಪ್ರಕರಣಗಳ ಸಂಖ್ಯೆ ಎರಡಂಕಿ ಮತ್ತು 13 ಜಿಲ್ಲೆಗಳಲ್ಲಿ ಒಂದಂಕಿಯಲ್ಲಿದೆ. ಯಾದಗಿರಿ, ಬಾಗಲಕೋಟೆ, ಚಿಕ್ಕಬಳ್ಳಾಪುರ ಸೇರಿದಂತೆ ಒಂಬತ್ತು ಜಿಲ್ಲೆಗಳಲ್ಲಿ ಹೊಸ ಪ್ರಕರಣಗಳು ವರದಿಯಾಗಿಲ್ಲ. ಬೆಂಗಳೂರಿನಲ್ಲೇ 810 ಹೊಸ ಪ್ರಕರಣಗಳು ಪತ್ತೆಯಾಗಿವೆ.
ದಕ್ಷಿಣ ಕನ್ನಡದಲ್ಲಿ 48, ಮೈಸೂರಿನಲ್ಲಿ 29, ಉಡುಪಿಯಲ್ಲಿ 28, ಮಂಡ್ಯದಲ್ಲಿ 23, ಕೊಡಗಿನಲ್ಲಿ 13, ಬೆಳಗಾವಿ ಮತ್ತು ಚಿಕ್ಕಮಗಳೂರಿನಲ್ಲಿ ತಲಾ 10 ಹೊಸ ಪ್ರಕರಣಗಳು ವರದಿಯಾಗಿವೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.