ಬೆಂಗಳೂರು: ರಾಜ್ಯದಲ್ಲಿ ಕೋವಿಡ್ ಹೊಸ ಪ್ರಕರಣಗಳ ಸಂಖ್ಯೆ ನಿಯಂತ್ರಣಕ್ಕೆ ಬಂದಿದ್ದು, ವಾರದಲ್ಲಿ908 ಮಂದಿ ಕೊರೊನಾ ಸೋಂಕಿತರಾಗಿರುವುದು ದೃಢಪಟ್ಟಿದೆ.
ಈ ಅವಧಿಯಲ್ಲಿ 1,547 ಮಂದಿ ಚೇತರಿಸಿಕೊಂಡಿದ್ದಾರೆ. ಕೊರೊನಾ ಸೋಂಕಿತರಲ್ಲಿ ಏಳು ದಿನಗಳಲ್ಲಿ 19 ಮಂದಿ ಮೃತಪಟ್ಟಿರುವುದು ಖಚಿತಪಟ್ಟಿದೆ. ಹೊಸ ಪ್ರಕರಣಗಳಿಗಿಂತ ಚೇತರಿಕೆ ಹೊಂದುವವರ ಸಂಖ್ಯೆ ಹೆಚ್ಚುತ್ತಿರುವುದರಿಂದ ಸಕ್ರಿಯ ಪ್ರಕರಣಗಳ ಸಂಖ್ಯೆ 1,995ಕ್ಕೆ ಇಳಿಕೆಯಾಗಿದೆ.
ಕೋವಿಡ್ ಮೂರನೇ ಅಲೆಯಲ್ಲಿ ಪ್ರಕರಣಗಳು ಗರಿಷ್ಠ ಸಂಖ್ಯೆಗೆ ತಲುಪಿದಾಗ ಎರಡು ಲಕ್ಷದವರೆಗೆ ಏರಿಕೆ ಕಂಡಿದ್ದ ಪರೀಕ್ಷೆಗಳ ಸಂಖ್ಯೆ ಈಗ 27 ಸಾವಿರಕ್ಕೆ ಇಳಿಕೆಯಾಗಿದೆ. ರಾಜ್ಯದಲ್ಲಿ ಭಾನುವಾರ 109 ಮಂದಿ ಕೋವಿಡ್ ಪೀಡಿತರಾಗಿರುವುದು ದೃಢಪಟ್ಟಿದೆ. ಸೋಂಕು ದೃಢ ಪ್ರಮಾಣ ಶೇ 0.39ಕ್ಕೆ ಇಳಿಕೆಯಾಗಿದೆ.
14 ಜಿಲ್ಲೆಗಳಲ್ಲಿ ಮಾತ್ರ ಹೊಸದಾಗಿ ಪ್ರಕರಣಗಳು ಪತ್ತೆಯಾಗಿದ್ದು, 13 ಜಿಲ್ಲೆಗಳಲ್ಲಿ ಈ ಸಂಖ್ಯೆ ಒಂದಂಕಿಯಲ್ಲಿದೆ. ಈವರೆಗೆ ದೃಢಪಟ್ಟ ಒಟ್ಟು ಪ್ರಕರಣಗಳ ಸಂಖ್ಯೆ 39.44 ಲಕ್ಷಕ್ಕೆ ಏರಿಕೆಯಾಗಿದೆ.
2 ಜಿಲ್ಲೆ ಕೋವಿಡ್ ಮುಕ್ತ:ಸೋಂಕಿತರ ಪೈಕಿ ಬೆಂಗಳೂರಿನಲ್ಲಿ 125 ಮಂದಿ ಸೇರಿದಂತೆ ರಾಜ್ಯದಲ್ಲಿ 143 ಮಂದಿ ಚೇತರಿಸಿಕೊಂಡಿದ್ದಾರೆ. ರಾಜ್ಯದಲ್ಲಿ ಈವರೆಗೆ ಗುಣಮುಖರಾದವರ ಒಟ್ಟು ಸಂಖ್ಯೆ 39.02 ಲಕ್ಷ ದಾಟಿದೆ.ಕೋವಿಡ್ಸಕ್ರಿಯ ಪ್ರಕರಣಗಳ ಸಂಖ್ಯೆ 1,995ಕ್ಕೆ ಇಳಿಕೆಯಾಗಿದೆ. ಕೊಪ್ಪಳ ಹಾಗೂ ಗದಗ ಜಿಲ್ಲೆ ಕೋವಿಡ್ ಮುಕ್ತವಾಗಿದೆ. ಯಾದಗಿರಿ, ವಿಜಯಪುರ ಸೇರಿದಂತೆ 16 ಜಿಲ್ಲೆಗಳಲ್ಲಿ ಸಕ್ರಿಯ ಪ್ರಕರಣಗಳು 10ಕ್ಕಿಂತ ಕಡಿಮೆ ಇವೆ. ಬೆಂಗಳೂರಿನಲ್ಲಿ 1,706 ಸೋಂಕಿತರಿದ್ದಾರೆ.
ಕೊರೊನಾ ಸೋಂಕಿತರಲ್ಲಿ ಬೆಂಗಳೂರು ಹಾಗೂ ಹಾಸನದಲ್ಲಿ ತಲಾ ಒಬ್ಬರುಸಾವಿಗೀಡಾಗಿದ್ದಾರೆ.ರಾಜ್ಯದಲ್ಲಿ ಮರಣ ಪ್ರಮಾಣ ದರವು ಶೇ 1.83 ರಷ್ಟು ವರದಿಯಾಗಿದೆ.ಈವರೆಗೆಕೋವಿಡ್ಗೆ ಮೃತಪಟ್ಟವರ ಒಟ್ಟು ಸಂಖ್ಯೆ40,037ಕ್ಕೆ ಏರಿಕೆಯಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.