ಪ್ರಾಧಿನಿಧಿಕ ಚಿತ್ರ
ಐಸ್ಟಾಕ್ ಚಿತ್ರ
ಬೆಂಗಳೂರು: ಸಾಂಪ್ರದಾಯಿಕ ಕುರಿಗಾಹಿಗಳ ಮೇಲಿನ ದೌರ್ಜನ್ಯ, ಶೋಷಣೆ, ಅವಹೇಳನ ತಡೆದು ಹಿತ ಕಾಪಾಡುವ ಜೊತೆಗೆ, ಆ ವರ್ಗಕ್ಕೆ 'ಕಲ್ಯಾಣ ಮಂಡಳಿ' ಸ್ಥಾಪಿಸಿ, ಯೋಜನೆಗಳನ್ನು ಜಾರಿಗೊಳಿಸಲು ಕಾನೂನು ಜಾರಿಗೆ ರಾಜ್ಯ ಸರ್ಕಾರ ಮುಂದಾಗಿದೆ.
ಈ ಉದ್ದೇಶದಿಂದ ‘ಕರ್ನಾಟಕ ಸಾಂಪ್ರದಾಯಿಕ ವಲಸೆ ಕುರಿಗಾಹಿಗಳ (ಕಲ್ಯಾಣ ಕಾರ್ಯಕ್ರಮಗಳು ಮತ್ತು ದೌರ್ಜನ್ಯ ತಡೆ) ಮಸೂದೆ– 2025’ರ ಕರಡನ್ನು ಕಾನೂನು ಮತ್ತು ಸಂಸದೀಯ ಇಲಾಖೆ ಅಂತಿಮಗೊಳಿಸಿದೆ.
ಮಸೂದೆಯನ್ನು ಸಚಿವ ಸಂಪುಟ ಸಭೆಗೆ ಮಂಡಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಿರ್ದೇಶನ ನೀಡಿದ್ದಾರೆ. ಪಶು ಸಂಗೋಪನಾ ಇಲಾಖೆಯು ಮಸೂದೆಯನ್ನು ಮಂಡಿಸಲಿದೆ. ಸದ್ಯ ನಡೆಯುತ್ತಿರುವ ವಿಧಾನಮಂಡಲ ಅಧಿವೇಶನದಲ್ಲಿಯೇ ಮಸೂದೆಗೆ ಅನುಮೋದನೆ ಪಡೆಯಲು ಸರ್ಕಾರ ಉದ್ದೇಶಿಸಿದೆ ಎಂದು ಮೂಲಗಳು ತಿಳಿಸಿವೆ.
ಕುರಿಗಾಹಿಯನ್ನು ಉದ್ದೇಶಪೂರ್ವಕವಾಗಿ ಅವಮಾನಿಸಿದರೆ ಅಥವಾ ನಿಂದಿಸಿದರೆ, ಆರು ತಿಂಗಳಿನಿಂದ ಐದು ವರ್ಷಗಳವರೆಗೆ ವಿಸ್ತರಿಸಬಹುದಾದ ಜೈಲು ಶಿಕ್ಷೆ ಮತ್ತು ₹1 ಲಕ್ಷದವರೆಗೆ ದಂಡ, ಕುರಿಗಾಹಿಯ ಜಾನುವಾರುಗಳಿಗೆ ಹಾನಿ ಉಂಟು ಮಾಡಿದರೆ ಅಥವಾ ಕದ್ದೊಯ್ದರೆ ಎರಡು ವರ್ಷಗಳವರೆಗೆ ವಿಸ್ತರಿಸಬಹುದಾದ ಜೈಲು ಶಿಕ್ಷೆ ಮತ್ತು ₹50 ಸಾವಿರ ದಂಡ ಸೇರಿದಂತೆ ವಿವಿಧ ಅಪರಾಧಗಳಿಗೆ ವಿವಿಧ ಪ್ರಮಾಣದ ಜೈಲು ಶಿಕ್ಷೆ ಮತ್ತು ದಂಡ ವಿಧಿಸುವ ಪ್ರಸ್ತಾವ ಈ ಮಸೂದೆಯಲ್ಲಿದೆ.
ಕುರಿಗಾಹಿಗಳಿಗೆ ಸಂಬಂಧಿಸಿದಂತೆ ದೌರ್ಜನ್ಯ ತಡೆ ಕಾಯ್ದೆ ರೂಪಿಸಲಾಗುವುದು ಎಂದು 2024-25ನೇ ಸಾಲಿನ ಬಜೆಟ್ನಲ್ಲಿ ಸರ್ಕಾರ ಘೋಷಿಸಿತ್ತು. ಈ ಕಾಯ್ದೆಯನ್ನು ಜಾರಿಗೆ ತರಬೇಕು ಎಂದು ಆಗ್ರಹಿಸಿ ಸಾಂಪ್ರದಾಯಿಕ ಕುರಿಗಾಹಿಗಳ ಹಿತರಕ್ಷಣಾ ಕಾಯ್ದೆ ಹೋರಾಟ ಸಮಿತಿಯೂ ಸೇರಿದಂತೆ ವಿವಿಧ ಸಂಘಟನೆಗಳು ಆಗಸ್ಟ್ 19ರಂದು ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನದಲ್ಲಿ ‘ಕುರಿಗಾಹಿಗಳ ನಡೆಗೆ, ವಿಧಾನಸೌಧದ ಕಡೆಗೆ’ ಎಂಬ ಬೃಹತ್ ಪ್ರತಿಭಟನೆ ಹಮ್ಮಿಕೊಂಡಿವೆ.
ಕರಡು ಮಸೂದೆಯಲ್ಲಿ ಏನಿದೆ?:
ಸಾಂಪ್ರದಾಯಿಕವಾಗಿ ವಲಸೆ ಹೋಗುವ ಕುರಿಗಾಹಿಗಳ ಮೇಲಿನ ದೌರ್ಜನ್ಯ ತಡೆಯುವ ಮತ್ತು ಆ ವರ್ಗ ಅಭಿವೃದ್ಧಿಗಾಗಿ ಯೋಜನೆಗಳನ್ನು ರೂಪಿಸುವ ಜೊತೆಗೆ, ದೌರ್ಜನ್ಯ, ಲೈಂಗಿಕ ಶೋಷಣೆ, ಅವಮಾನಿಸುವವರ ಮೇಲೆ ಕಠಿಣ ಕಾನೂನು ಕ್ರಮ ಕೈಗೊಳ್ಳಲು ಉದ್ದೇಶಿತ ಮಸೂದೆಯಲ್ಲಿ ಅವಕಾಶ ಕಲ್ಪಿಸಲಾಗಿದೆ.
ಉದ್ದೇಶಿತ ಕಾಯ್ದೆಯಡಿ ಸೌಲಭ್ಯಗಳನ್ನು ಪಡೆಯಲು ಎಲ್ಲ ಕುರಿಗಾಹಿಗಳು ನೋಂದಣಿ ಮಾಡಿಕೊಳ್ಳುವುದು ಕಡ್ಡಾಯವಾಗಿದ್ದು, ಅವರಿಗೆ ಭಾವಚಿತ್ರ ಇರುವ ಗುರುತಿನಚೀಟಿಯನ್ನು ಸರ್ಕಾರ ನೀಡಬೇಕು. ರಾಜ್ಯ ಸರ್ಕಾರ ಕುರಿಗಾಹಿಗಳಿಗೆ ಯೋಜನೆಗಳನ್ನು ರೂಪಿಸಬೇಕು. ಸೂಕ್ತವಾದ ವಸತಿ ಯೋಜನೆ, ವಿಮೆ ಸೌಲಭ್ಯ, ಆರೋಗ್ಯ ಮತ್ತು ಶಿಕ್ಷಣ ಸವಲತ್ತುಗಳು, ಕೌಶಲ ಅಭಿವೃದ್ಧಿ, ಆಹಾರ ಭದ್ರತೆ, ಚುಚ್ಚುಮದ್ದು ಮತ್ತು ಸೂಕ್ತ ಚಿಕಿತ್ಸೆ ನೀಡಬೇಕು. ಜೊತೆಗೆ, ಕುರಿಗಾಹಿಗಳ ಉತ್ಪನ್ನಗಳಿಗೆ ಮಾರುಕಟ್ಟೆ ಬೆಂಬಲ ನೀಡಬೇಕು. ಜಾನುವಾರುಗಳಿಗೆ ಜೀವಹಾನಿಯಾದರೆ ನಷ್ಟ ಪರಿಹಾರ ನೀಡಬೇಕು ಎಂದು ಈ ಮಸೂದೆಯಲ್ಲಿದೆ.
ಸಾಂಪ್ರದಾಯಿಕ ವಲಸೆ ಕುರಿಗಾಹಿಗಳು ನೀಡುವ ದೂರು ದಾಖಲಿಸಿಕೊಂಡು, ಕ್ರಮ ತೆಗೆದುಕೊಳ್ಳಲು ನಿರಾಕರಿಸುವ ಪೊಲೀಸ್ ಅಧಿಕಾರಿಯ ವಿರುದ್ಧ ಕ್ರಮ ತೆಗೆದುಕೊಳ್ಳುವುದಕ್ಕೂ ಮಸೂದೆ ಅವಕಾಶ ಕಲ್ಪಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.