ADVERTISEMENT

ಎಸ್ಸೆಸ್ಸೆಲ್ಸಿ ಪರೀಕ್ಷೆ ಹಾಲ್‌ ಟಿಕೆಟ್‌: ಬಿಇಒಗಳಿಗೆ ಹೊಣೆ

ಪ್ರಜಾವಾಣಿ ಫಲಶ್ರುತಿ

​ಪ್ರಜಾವಾಣಿ ವಾರ್ತೆ
Published 14 ಜುಲೈ 2021, 20:18 IST
Last Updated 14 ಜುಲೈ 2021, 20:18 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಬೆಂಗಳೂರು: ‘ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ನೋಂದಾಯಿಸಿಕೊಂಡಿರುವ ವಿದ್ಯಾರ್ಥಿಗಳಿಗೆ ಸಕಾಲದಲ್ಲಿ ಹಾಲ್‌ ಟಿಕೆಟ್‌ (ಪ್ರವೇಶ ಪತ್ರ) ಸಿಗದೇ ಇದ್ದರೆ, ತಕ್ಷಣ ಹಾಲ್‌ ಟಿಕೆಟ್‌ ವಿತರಿಸಲು ಕ್ರಮ ತೆಗೆದುಕೊಳ್ಳಬೇಕು’ ಎಂದು ಎಲ್ಲ ಡಿಡಿಪಿಐ ಹಾಗೂ ಬಿಇಒಗಳಿಗೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯ ಅಧ್ಯಕ್ಷರೂ ಆಗಿರುವ ಸಾರ್ವಜನಿಕ ಶಿಕ್ಷಣ ಇಲಾಖೆಯ ಆಯುಕ್ತ ವಿ. ಅನ್ಬುಕುಮಾರ್‌ ಸುತ್ತೋಲೆ ಹೊರಡಿಸಿದ್ದಾರೆ.

ಪೂರ್ಣ ಶುಲ್ಕ ಪಾವತಿಸದಿದ್ದರೆ ಹಾಲ್‌ ಟಿಕೆಟ್‌ ನೀಡುವುದಿಲ್ಲ ಎಂದು ಕೆಲವು ಖಾಸಗಿ ಶಾಲಾ ಆಡಳಿತ ಮಂಡಳಿಗಳು ಷರತ್ತು ವಿಧಿಸುತ್ತಿರುವ ಬಗ್ಗೆ ‘ಪ್ರಜಾವಾಣಿ’ಯ ಜುಲೈ 13ರ ಸಂಚಿಕೆಯಲ್ಲಿ ವರದಿ ಪ್ರಕಟಗೊಂಡಿತ್ತು. ಆ ಬೆನ್ನಲ್ಲೆ ಆಯುಕ್ತರು ಸುತ್ತೋಲೆ ಹೊರಡಿಸಿದ್ದು, ‘ಈ ಬಗ್ಗೆ ಮಾರ್ಗದರ್ಶನ ಅಗತ್ಯವಿದ್ದರೆ ತಕ್ಷಣ ಪರೀಕ್ಷಾ ಮಂಡಳಿಯನ್ನು ಸಂಪರ್ಕಿಸಬೇಕು’ ಎಂದೂ ಸೂಚಿಸಿದ್ದಾರೆ.

‘ಯಾವುದೇ ವಿದ್ಯಾರ್ಥಿ ಹಾಲ್‌ ಟಿಕೆಟ್‌ ಸಿಗದೆ, ಮಾನಸಿಕ ತೊಂದರೆ ಮತ್ತು ಆತಂಕಕ್ಕೆ ಒಳಗಾಗದಂತೆ ಹಾಗೂ ಪರೀಕ್ಷೆಯಿಂದ ವಂಚಿತರಾಗದಂತೆ ಆದ್ಯತೆಯ ಮೇರೆಗೆ ಜಿಲ್ಲಾ ಉಪನಿರ್ದೇಶಕರು (ಆಡಳಿತ), ಕ್ಷೇತ್ರ ಶಿಕ್ಷಣಾಧಿಕಾರಿಗಳು ಹಾಗೂ ಸಂಬಂಧಪಟ್ಟ ಶಾಲೆಗಳ ಮುಖ್ಯಸ್ಥರುಕ್ರಮ ತೆಗೆದುಕೊಳ್ಳಬೇಕು’ ಎಂದೂ ಸುತ್ತೋಲೆಯಲ್ಲಿ ಸ್ಪಷ್ಟವಾಗಿ ತಿಳಿಸಿದ್ದಾರೆ.

ಪೂರ್ಣ ಶುಲ್ಕ ಪಾವತಿಸದೇ ಇರುವುದರಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಪ್ರವೇಶ ಪತ್ರ ನೀಡಲು ನಿರಾಕರಿಸಿರುವ ಪ್ರಕರಣಗಳಿಗೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಶಿಕ್ಷಣ ಸಚಿವ ಸುರೇಶ್‌ ಕಮಾರ್‌, ‘ಯಾವುದೇ ರೀತಿಯಲ್ಲೂ ಮಕ್ಕಳಿಗೆ ತೊಂದರೆ ಆಗದಂತೆ ಬಿಇಒಗಳು ಕ್ರಮ ವಹಿಸಲಿದ್ದಾರೆ’ ಎಂದಿದ್ದಾರೆ.

ಪರೀಕ್ಷಾ ಮಂಡಳಿಯ ಜಾಲತಾಣದಲ್ಲಿ ಹಾಲ್‌ ಟಿಕೆಟ್‌ಗಳನ್ನು ಅಪ್‌ಲೋಡ್ ಮಾಡಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.