ಬೆಂಗಳೂರು: ‘ಸುಪ್ರೀಂಕೋರ್ಟ್ ತೀರ್ಪಿನ ಅನ್ವಯ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಇತರ ಹಿಂದುಳಿದ ವರ್ಗಗಳಲ್ಲಿ (ಒಬಿಸಿ) ಒಳಮೀಸಲಾತಿ ನೀಡುವ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಲಾಗುವುದು’ ಎಂದು ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಹೇಳಿದ್ದಾರೆ.
ಈ ವರ್ಗಗಳಲ್ಲಿನ ಒಳಜಾತಿಗಳಿಗೆ ಒಳಮೀಸಲಾತಿ ನೀಡಲು ರಾಜ್ಯಗಳು ವ್ಯವಸ್ಥೆ ಮಾಡಿಕೊಳ್ಳಬಹುದು. ಸಮಾನತೆ ತರುವುದಕ್ಕಾಗಿ ಎಲ್ಲರಿಗೂ ಮೀಸಲಾತಿ ನೀಡಲು ಒಳವರ್ಗೀಕರಣ ಮಾಡಿ ಎಂದು ಸುಪ್ರೀಂಕೋರ್ಟ್ ಗುರುವಾರ ಸೂಚಿಸಿದೆ.
‘ಈ ಕುರಿತು ನನ್ನ ಸ್ಪಷ್ಟ ಅಭಿಪ್ರಾಯವೆಂದರೆ, ತುಳಿತಕ್ಕೆ ಒಳಗಾದ ಸಮುದಾಯಗಳಿಗೆ ನ್ಯಾಯ ಒದಗಿಸಲು ಮೀಸಲಾತಿ ಕಲ್ಪಿಸಲಾಗಿದೆ. ಇದರ ಲಾಭ ಈ ಸಮುದಾಯಗಳ ಎಲ್ಲ ಸದಸ್ಯರಿಗೂ ಸಿಗಬೇಕು. ಒಂದೇ ವರ್ಗ ಎಂಬ ಕಾರಣಕ್ಕೆ ಹಣ್ಣುಗಳ ಬುಟ್ಟಿಯನ್ನು ಬಲಶಾಲಿ ಜಾತಿಗೆ ಮಾತ್ರ ನೀಡಲಾಗದು. ಇದರಿಂದ ಇತರ ಜಾತಿಗಳಿಗೆ ಅನ್ಯಾಯವಾಗುತ್ತದೆ ಎಂದು ಸುಪ್ರೀಂಕೋರ್ಟ್ ಹೇಳಿದೆ. ಇದರ ಅರ್ಥ ತುಳಿತಕ್ಕೆ ಒಳಗಾದ ಸಮುದಾಯದ ಎಲ್ಲ ಒಳ ಜಾತಿಗಳಿಗೂ ಇದರ ಲಾಭ ಸಿಗಬೇಕು ಎಂಬುದೇ ಆಗಿದೆ. ಈ ವಿಷಯವನ್ನು ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸುತ್ತೇನೆ’ ಎಂದು ‘ಪ್ರಜಾವಾಣಿ’ಗೆ ತಿಳಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.