ADVERTISEMENT

ಗೋಹತ್ಯೆ ನಿಷೇಧ: ರಾಜ್ಯ ಸರ್ಕಾರದ ವಿರುದ್ಧ ಸಿದ್ದರಾಮಯ್ಯ ಸರಣಿ ಟ್ವೀಟ್‌

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 9 ಡಿಸೆಂಬರ್ 2020, 16:23 IST
Last Updated 9 ಡಿಸೆಂಬರ್ 2020, 16:23 IST
ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ
ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ   

ಬೆಂಗಳೂರು: ರಾಜ್ಯ ಸರ್ಕಾರ ಗೋಹತ್ಯೆ ನಿಷೇಧದಂತಹ ಅನಗತ್ಯ ವಿಷಯಗಳನ್ನು ವಿವಾದವನ್ನಾಗಿ ಮಾಡಲು ಹೊರಟಿದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.

ಈ ಬಗ್ಗೆ ಬುಧವಾರ ಸರಣಿ ಟ್ವೀಟ್‌ ಮಾಡಿರುವ ಅವರು, 'ರಾಜ್ಯದಲ್ಲಿ ಆಡಳಿತ ಸಂಪೂರ್ಣ ಕುಸಿದು ಬಿದ್ದಿದೆ, ಒಂದೆಡೆ ಭ್ರಷ್ಟಾಚಾರ ತಾಂಡವವಾಡುತ್ತಿದೆ, ಇನ್ನೊಂದೆಡೆ ಆಂತರಿಕ ಭಿನ್ನಮತದಿಂದಾಗಿ ಸರ್ಕಾರ ಸಂಪೂರ್ಣ ನಿಷ್ಕ್ರಿಯವಾಗಿದೆ. ಈ ಎಲ್ಲ ವೈಫಲ್ಯಗಳನ್ನು ಮುಚ್ಚಿಹಾಕಿ ಜನರ ಗಮನ ಬೇರೆಡೆ ಸೆಳೆಯಲು ರಾಜ್ಯ ಸರ್ಕಾರ ಗೋಹತ್ಯೆ ನಿಷೇಧದಂತಹ ಅನಗತ್ಯ ವಿಷಯಗಳನ್ನು ವಿವಾದವನ್ನಾಗಿ ಮಾಡಲು ಹೊರಟಿದೆ' ಎಂದು ಹರಿಹಾಯ್ದಿದ್ದಾರೆ.

'ಚರ್ಚೆಗೆ ಅವಕಾಶವನ್ನೇ ಕೊಡದೆ, ಮಸೂದೆಯ ಪ್ರತಿಯನ್ನೂ ವಿರೋಧ ಪಕ್ಷಗಳ ಸದಸ್ಯರಿಗೂ ನೀಡದೆ ಗೋಹತ್ಯೆ ನಿಷೇಧ ಮಸೂದೆಯನ್ನು ಅಂಗೀಕರಿಸಿದ ರಾಜ್ಯ ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ನಡವಳಿಕೆಯನ್ನು ಖಂಡಿಸಿ ನಾಳೆ ಕಾಂಗ್ರೆಸ್ ಪಕ್ಷ ವಿಧಾನಸಭೆಯ ಕಲಾಪವನ್ನು ಬಹಿಷ್ಕರಿಸಲಿದೆ' ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ADVERTISEMENT

'ಮಂಗಳವಾರ ನಡೆದ ಕಲಾಪ ಸಲಹಾ ಸಮಿತಿಯಲ್ಲಿ ಯಾವ ಮಸೂದೆಯನ್ನೂ ಮಂಡಿಸುವುದಿಲ್ಲ ಎಂದು ಬಿಎಸ್‌ವೈ ಹೇಳಿದ್ದರು. ಇಂದಿನ ಕಲಾಪ ಪಟ್ಟಿಯಲ್ಲಿ ಕೂಡಾ ಈ ವಿಷಯ ಉಲ್ಲೇಖಿಸಲಾಗಿಲ್ಲ. ಆದರೆ ಮಧ್ಯಾಹ್ನ ಏಕಾಏಕಿ ಗೋಹತ್ಯೆ ನಿಷೇಧ ಮಸೂದೆಯನ್ನು ಮಂಡಿಸಿ ಅಂಗೀಕರಿಸಲಾಗಿದೆ. ಇದು ಪ್ರಜಾಪ್ರಭುತ್ವದ ಕಗ್ಗೊಲೆ' ಎಂದು ಅವರು ಟ್ವೀಟ್‌ ಮಾಡಿದ್ದಾರೆ.

ಚರ್ಚೆಯನ್ನು ಎದುರಿಸಲು ಧೈರ್ಯ ಇಲ್ಲದ ಹೇಡಿ ಸರ್ಕಾರ ಮಾತ್ರ ಈ ರೀತಿ ವರ್ತಿಸಲು ಸಾಧ್ಯ ಎಂದಿರುವ ಸಿದ್ದರಾಮಯ್ಯ, 'ಈ ರೀತಿಯ ಸರ್ವಾಧಿಕಾರಿ ನಡವಳಿಕೆಯಿಂದ ನಮ್ಮ ಬಾಯಿ ಮುಚ್ಚಿಸಲು ಸಾಧ್ಯವಾಗದು. ಈ ಸರ್ಕಾರದ ಭ್ರಷ್ಟಾಚಾರ ಮತ್ತು ದುಷ್ಟತನವನ್ನು ಬೀದಿಯಲ್ಲಿ ಜನರೊಂದಿಗೆ ನಿಂತು ವಿರೋಧಿಸುತ್ತೇವೆ' ಎಂದು ಎಚ್ಚರಿಕೆ ನೀಡಿದ್ದಾರೆ.

'ಸಂಸದೀಯ ಪ್ರಜಾಪ್ರಭುತ್ವದಲ್ಲಿ ವಿರೋಧ ಪಕ್ಷದ ನಾಯಕನನ್ನು ‘Shadow Chief Minister’ ಎನ್ನುತ್ತಾರೆ. ಆದರೆ ಈ ಸರ್ಕಾರದಲ್ಲಿ ಚುನಾಯಿತ ಪ್ರತಿನಿಧಿಗಳಿಗೆ ಮಾತ್ರವಲ್ಲ, ವಿರೋಧ ಪಕ್ಷದ ನಾಯಕನಿಗೂ ಗೌರವ ಇಲ್ಲ. ಕರ್ನಾಟಕದ ವಿಧಾನಮಂಡಲದ ಇತಿಹಾಸದಲ್ಲಿ ಇದೊಂದು ಕಪ್ಪು ದಿನ' ಎಂದು ಅವರು ಟ್ವೀಟಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.