ಬೆಂಗಳೂರು: ಸ್ಕಾಟ್ಲೆಂಡ್ನ ಡಂಡೀ ವಿಶ್ವವಿದ್ಯಾಲಯದಲ್ಲಿ ನಡೆಯುವ ಸಂಶೋಧನೆ ಆಧಾರಿತ ಕಾರ್ಯಕ್ರಮದಲ್ಲಿ ಭಾಗವಹಿಸಲು ರಾಜ್ಯದ ಮೂರು ವಿಶ್ವವಿದ್ಯಾಲಯಗಳ 13 ವಿದ್ಯಾರ್ಥಿಗಳಿಗೆ ಅವಕಾಶ ದೊರೆತಿದೆ.
ಗುಲ್ಬರ್ಗಾ ವಿಶ್ವವಿದ್ಯಾಲಯ, ಕೃಷಿ ವಿಶ್ವವಿದ್ಯಾಲಯ, ವಿಶ್ವೇಶ್ವರಯ್ಯ ಎಂಜಿನಿಯರಿಂಗ್ ಕಾಲೇಜುಗಳ ವಿದ್ಯಾರ್ಥಿಗಳು ಜೂನ್ 25ರಿಂದ ಜುಲೈ 2ರವರೆಗೆ ಡಂಡೀ ವಿಶ್ವವಿದ್ಯಾಲಯಕ್ಕೆ ಭೇಟಿ ನೀಡುವರು. ವಿದ್ಯಾರ್ಥಿಗಳ ಪ್ರಯಾಣ ಹಾಗೂ ವಸತಿಗೆ ಬ್ರಿಟಿಷ್ ಕೌನ್ಸಿಲ್ ವ್ಯವಸ್ಥೆ ಮಾಡಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್ ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು.
ನಾಲ್ಕು ತಿಂಗಳು ವಿವಿಧ ಹಂತಗಳಲ್ಲಿ ಆಯ್ಕೆ ಪ್ರಕ್ರಿಯೆ ನಡೆಸಲಾಗಿದೆ. ವಿದ್ಯಾರ್ಥಿಗಳು ರೂಪಿಸಿದ ನವೀನ ರೀತಿಯ ಸಂಶೋಧನಾ ಯೋಜನೆಗಳ ಆಧಾರದಲ್ಲಿ ತಂಡವನ್ನು ಆಯ್ಕೆ ಮಾಡಲಾಗಿದೆ. ಉನ್ನತ ಶಿಕ್ಷಣ ಪರಿಷತ್ತು, ಸ್ಥಳೀಯ ಹಾಗೂ ಡಂಡೀ ವಿಶ್ವವಿದ್ಯಾಲಯಗಳು ತರಬೇತಿ ನೀಡಿವೆ. ಅಲ್ಲದೇ, ಆಯ್ಕೆಯಾದ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಲ್ಲಿ 12 ತಿಂಗಳ ಸ್ನಾತಕೋತ್ತರ ಕೋರ್ಸ್ಗೆ ಪ್ರವೇಶ ಪಡೆಯಲು ಬ್ರಿಟಷ್ ಕೌನ್ಸಿಲ್ ವಿದ್ಯಾರ್ಥಿವೇತನವನ್ನೂ ನೀಡಿದೆ ಎಂದರು.
ಗುಲ್ಬರ್ಗಾ ವಿಶ್ವವಿದ್ಯಾಲಯದ ಶರಣ ಬಸವೇಶ್ವರ ಕಾಲೇಜಿನ ಐವರು ವಿದ್ಯಾರ್ಥಿಗಳು ‘ಸ್ಥಳೀಯ ಬುಡಕಟ್ಟು ಜನರ ವ್ಯಕ್ತಿಚಿತ್ರಣ ಮತ್ತು ಜೀವನಿರೋಧಕ ಶಕ್ತಿ’ ಕುರಿತು, ವಿಶ್ವವಿದ್ಯಾಲಯ ವಿಶ್ವೇಶ್ವರಯ್ಯ ಎಂಜಿನಿಯರಿಂಗ್ ಕಾಲೇಜಿನ ನಾಲ್ವರು ವಿದ್ಯಾರ್ಥಿಗಳು ‘ಡೀಸೆಲ್ಗೆ ಪರ್ಯಾಯವಾಗಿ ಪ್ಲಾಸ್ಟಿಕ್ ಮತ್ತು ಅಡುಗೆ ಎಣ್ಣೆ ತ್ಯಾಜ್ಯದಿಂದ ಇಂಧನ ಉತ್ಪಾದನೆ’, ಬೆಂಗಳೂರು ಕೃಷಿ ವಿಶ್ವವಿದ್ಯಾಲಯದ ನಾಲ್ವರು ವಿದ್ಯಾರ್ಥಿಗಳು ‘ಸೌರಶಕ್ತಿ ಬಳಸಿ ನೀರಿನ ಸದ್ಬಳಕೆ ಮಾಡುವ ಸ್ವಯಂಚಾಲಿತ ನೀರಾವರಿ ವ್ಯವಸ್ಥೆ’ಯ ಪ್ರಾತ್ಯಕ್ಷಿಕೆಗಳನ್ನು ಸಿದ್ಧಪಡಿಸಿದ್ದಾರೆ ಎಂದು ವಿವರ ನೀಡಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.