ಉಡುಪಿ: ‘ರಾಜ್ಯದಲ್ಲಿ ಆರು ಮಂದಿ ನಕ್ಸಲರ ಶರಣಾಗತಿ ಪ್ರಕ್ರಿಯೆ ಹಾಗೂ ನಕ್ಸಲ್ ವಿಕ್ರಂ ಗೌಡ ಎನ್ಕೌಂಟರ್ ಸಂಶಯಾಸ್ಪದವಾಗಿದೆ. ಶರಣಾಗತಿ ಬಗ್ಗೆ ರಾಜ್ಯದ ಗೃಹ ಸಚಿವರಿಗೇ ಮಾಹಿತಿ ಕೊರತೆ ಇದ್ದಂತಿದೆ. ಅವರೇ ಈ ಬಗ್ಗೆ ಉಲ್ಟಾ ಪಲ್ವಾ ಹೇಳಿಕೆ ನೀಡಿದ್ದಾರೆ’ ಎಂದು ಬಿಜೆಪಿಯ ತಮಿಳುನಾಡು ರಾಜ್ಯ ಘಟಕದ ಅಧ್ಯಕ್ಷ ಅಣ್ಣಾಮಲೈ ಟೀಕಿಸಿದರು.
ಸುದ್ದಿಗಾರರೊಂದಿಗೆ ಶನಿವಾರ ಮಾತನಾಡಿದ ಅವರು, ‘ರಾಜ್ಯದಲ್ಲಿ ಈ ಹಿಂದೆ ನಾನು ಚಿಕ್ಕಮಗಳೂರು ಜಿಲ್ಲೆಯ ಪೊಲೀಸ್ ವರಿಷ್ಠಾಧಿಕಾರಿ ಯಾಗಿದ್ದಾಗ ನಕ್ಸಲರ ಶರಣಾಗತಿ ಪ್ರಕ್ರಿಯೆಯ ಭಾಗವಾಗಿದ್ದೆ. ನಿಯಮ ಪ್ರಕಾರ ಜಿಲ್ಲಾಧಿಕಾರಿ ಮತ್ತು ಜಿಲ್ಲೆಯ ಪೊಲೀಸ್ ವರಿಷ್ಠಾಧಿಕಾರಿ ಸಮ್ಮುಖದಲ್ಲಿ ನಕ್ಸಲರು ಶರಣಾಗಬೇಕು. ನಂತರ ಅವರು ಗೃಹ ಸಚಿವರು ಮತ್ತು ಮುಖ್ಯಮಂತ್ರಿ ಎದುರು ಹಾಜರಾಗುತ್ತಾರೆ. ಇಲ್ಲಿ ರಾಜಕೀಯ ಲಾಭಕ್ಕಾಗಿ ನಕ್ಸಲರ ಶರಣಾಗತಿ ಪ್ರಕ್ರಿಯೆ ನಡೆಸಿದಂತಿದೆ. ಇಡೀ ಶರಣಾಗತಿ ಪ್ರಕ್ರಿಯೆ ಸರಿಯಾಗಿ ನಡೆದಿಲ್ಲ’ ಎಂದರು.
‘ಈ ಪ್ರಕ್ರಿಯೆಯಲ್ಲಿ ನಕ್ಸಲ್ ಬೆಂಬಲಿಗರು ಸರ್ಕಾರದ ಮೇಲೆ ಪ್ರಭಾವ ಬೀರಿದ್ದಾರೆ. ಶರಣಾದ ನಕ್ಸಲರು ನಾಗರಿಕ ಸಮಾಜದ ಮೇಲೆ ಪ್ರಭಾವ ಬೀರುವ ಅಪಾಯವಿದೆ’ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.