ಬೆಳಗಾವಿ (ಸುವರ್ಣ ವಿಧಾನಸೌಧ): ‘ಮೇಕೆದಾಟು ಯೋಜನೆಯ ಸಮಗ್ರ ಯೋಜನಾ ವರದಿ (ಡಿಪಿಆರ್) ಸಿದ್ಧಪಡಿಸಲಾಗಿದ್ದು, ಅದು ಈಗ ಕೇಂದ್ರ ಸರ್ಕಾರದ ವಿವಿಧ ನಿರ್ದೇಶನಾಲಯಗಳಲ್ಲಿ ಪರಿಶೀಲನೆಯಲ್ಲಿದೆ’ ಎಂದು ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ತಿಳಿಸಿದರು.
ಗುರುವಾರ ವಿಧಾನಪರಿಷತ್ತಿನಲ್ಲಿ ಬಿಜೆಪಿಯ ತೇಜಸ್ವಿನಿಗೌಡ ಅವರ ಪ್ರಶ್ನೆಗೆ ಉತ್ತರಿಸಿದ ಅವರು, ‘ಮೇಕೆದಾಟು ಸಮತೋಲನ ಜಲಾಶಯ ಹಾಗೂ ಕುಡಿಯುವ ನೀರಿನ ಯೋಜನೆಯನ್ನು ಕಾವೇರಿ ನದಿಗೆ ಅಡ್ಡಲಾಗಿ ಆರ್ಕಾವತಿ ಹಾಗೂ ಕಾವೇರಿ ನದಿಯ ಸಂಗಮದ ಸಮೀಪದಲ್ಲಿ ನಿರ್ಮಿಸಿ, 67.16 ಟಿಎಂಸಿ ಅಡಿ ನೀರು ಶೇಖರಿಸಲು ₹ 9 ಸಾವಿರ ಕೋಟಿ ಅಂದಾಜು ವೆಚ್ಚದ ಡಿಪಿಆರ್ ತಯಾರಿಸಿ ಕೇಂದ್ರಕ್ಕೆ ಸಲ್ಲಿಸಲಾಗಿದೆ’ ಎಂದರು.
‘ಸುಪ್ರೀಂ ಕೋರ್ಟ್ನಿಂದ ಈ ಯೋಜನೆಯ ಮೂಲಕ ಹಂಚಿಕೆಯಾಗಿರುವ 4.75 ಟಿಎಂಸಿ ಅಡಿ ನೀರನ್ನು ಬೆಂಗಳೂರು ನಗರವೂ ಸೇರಿದಂತೆ ಕುಡಿಯುವ ಹಾಗೂ ಗೃಹೋಪಯೋಗಿ ಉದ್ದೇಶಕ್ಕೆ ಬಳಸಲು ಉದ್ದೇಶಿಸಲಾಗಿದೆ. 400 ಮೆಗಾ ವ್ಯಾಟ್ ವಿದ್ಯುತ್ ಉತ್ಪಾದಿಸಲು ಕೂಡಾ ಈ ಯೋಜನೆ ಕೈಗೆತ್ತಿಕೊಳ್ಳಲಾಗಿದೆ’ ಎಂದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.