
ಬೆಂಗಳೂರು: ಪ್ರತಿ ವರ್ಷ ಸೆಪ್ಟೆಂಬರ್ 13ರಂದು ಮಹಿಳಾ ನೌಕರರ ದಿನವನ್ನು ಆಚರಿಸಲು ಸರ್ಕಾರ ಘೋಷಣೆ ಹೊರಡಿಸಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದರು.
ಅಖಿಲ ಕರ್ನಾಟಕ ರಾಜ್ಯ ಸರ್ಕಾರಿ ಮಹಿಳಾ ನೌಕರರ ಸಂಘ ಗುರುವಾರ ಹಮ್ಮಿಕೊಂಡಿದ್ದ ಮಹಿಳಾ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದರು.
ಸರ್ಕಾರದ ಆಡಳಿತದಲ್ಲಿ ಮಹಿಳಾ ನೌಕರರೂ ಪುರುಷರಿಗೆ ಸರಿಸಮನಾಗಿ ಸೇವೆ ಸಲ್ಲಿಸುತ್ತಿದ್ದಾರೆ. ರಾಜ್ಯದಲ್ಲಿ ಲಿಂಗತಾರತಮ್ಯ ಹೋಗಲಾಡಿಸಲು ಸರ್ಕಾರ ಬದ್ಧವಾಗಿದೆ. ಸಂಘದ ಕಚೇರಿಯ ಕಾರ್ಯಚಟುವಟಿಕೆಗಳಿಗೆ ಬಾಲಭವನದಲ್ಲಿ ಸ್ಥಳಾವಕಾಶ ನೀಡಲು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವರೊಂದಿಗೆ ಚರ್ಚಿಸಲಾಗಿದೆ ಎಂದರು.
ಮಹಿಳೆಯರು ವೈಚಾರಿಕ, ವೈಜ್ಞಾನಿಕ ಮನೋಭಾವ ಬೆಳೆಸಿಕೊಳ್ಳಬೇಕು. ಮೂಢ ನಂಬಿಕೆಗಳು ಮತ್ತು ಅಂಧ ಶ್ರದ್ಧೆಗಳನ್ನ ದೂರ ಮಾಡುವಂತಹ ಕೆಲಸಗಳನ್ನು ಮಾಡಬೇಕು. ಜಾತಿಯನ್ನು ಮುಂದಿಟ್ಟುಕೊಂಡು ಮಕ್ಕಳಲ್ಲಿ ಜಾತೀಯತೆ ಬಿತ್ತುವ ಕೆಲಸ ಮಾಡಬಾರದು. ಮಕ್ಕಳಲ್ಲೂ ವೈಜ್ಞಾನಿಕ ಮನೋಭಾವ ಬೆಳೆಸಬೇಕು. ಶಿಕ್ಷಣದ ಉದ್ದೇಶವೂ ಅದೇ ಆಗಿದೆ. ಆಗ ಮಾತ್ರ ಆರೋಗ್ಯಕರ, ಸಮಾನತೆಯ ಸಮಾಜ ನಿರ್ಮಾಣ ಸಾಧ್ಯ ಎಂದು ಹೇಳಿದರು.
ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮಾತನಾಡಿ, ‘ಮಹಿಳಾ ನೌಕರರು ಜಾತಿ ಸಂಘಗಳ ಆಧಾರದ ಮೇಲೆ ಸಂಘಟನೆ ಮಾಡಬಾರದು. ಮಹಿಳಾ ಶಕ್ತಿ ಆಧಾರದಲ್ಲೇ ಸಂಘಟನೆ ಮಾಡಬೇಕು. ಅದೂ ಒಂದೇ ಮಹಿಳಾ ಸಂಘವಾಗಿರಬೇಕು ಎಂದು ಸಲಹೆ ನೀಡಿದರು.
ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಸಚಿವರಾದ ಎಚ್.ಕೆ.ಪಾಟೀಲ, ದಿನೇಶ್ ಗುಂಡೂರಾವ್, ಲಕ್ಷ್ಮಿ ಹೆಬ್ಬಾಳಕರ, ಮಾಜಿ ಸಂಸದ ವಿ.ಎಸ್.ಉಗ್ರಪ್ಪ, ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಚೌಧರಿ, ಮಹಿಳಾ ನೌಕರರ ಸಂಘದ ಅಧ್ಯಕ್ಷೆ ರೋಶನಿ ಗೌಡ, ಪ್ರಧಾನ ಕಾರ್ಯದರ್ಶಿ ಕೆ.ಶಶಿಕಲಾ ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.