ಬಿಜೆಪಿ
ಬೆಂಗಳೂರು: ಪ್ರಸ್ತುತ ಕರ್ನಾಟಕದ ಸಾಲ ₹6.65 ಲಕ್ಷ ಕೋಟಿಗೆ ತಲುಪಿದೆ ಎಂಬ ವರದಿಯ ಕುರಿತು ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ ಮತ್ತು ಬಿಜೆಪಿ ಪಕ್ಷ ವಾಗ್ದಾಳಿ ನಡೆಸಿದೆ.
ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಪೋಸ್ಟ್ ಮಾಡಿರುವ ಅಶೋಕ, ‘ಕರ್ನಾಟಕವನ್ನು ಸಂಪೂರ್ಣ ದಿವಾಳಿ ಮಾಡಬೇಕೆಂಬುದೇ ಕಾಂಗ್ರೆಸ್ ಸರ್ಕಾರದ ಒನ್ ಲೈನ್ ಅಜೆಂಡಾವಾಗಿದೆ’ ಎಂದು ಕಿಡಿಕಾರಿದ್ದಾರೆ.
‘ಸಾಲ ಮಾಡುವುದನ್ನೇ ಫುಲ್ ಟೈಂ ಕಾಯಕವನ್ನಾಗಿಸಿಕೊಂಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಪ್ರಸ್ತುತ ಕರ್ನಾಟಕದ ಒಟ್ಟು ಸಾಲವನ್ನು ₹6 ಲಕ್ಷ 65 ಸಾವಿರ ಕೋಟಿಗೆ ಮುಟ್ಟಿಸಿದ್ದಾರೆ. ಪ್ರತಿ ಕನ್ನಡಿಗನ ಮೇಲೆ ಬರೋಬ್ಬರಿ ₹1 ಲಕ್ಷ ಸಾಲದ ಹೊರೆಯನ್ನು ಭ್ರಷ್ಟ ಕಾಂಗ್ರೆಸ್ ಸರ್ಕಾರ ಹೊರಿಸಿದೆ’ ಎಂದು ಅಶೋಕ ಆಕ್ರೋಶ ವ್ಯಕ್ತಪಡಿಸಿದ್ದಾರೆ.
‘ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಕರ್ನಾಟಕ ನಾವೀನ್ಯತೆಯ ಸೂಚ್ಯಂಕದಲ್ಲಿ, ಬಂಡವಾಳ ಹೂಡಿಕೆಯಲ್ಲಿ ನಂಬರ್ 1 ಆಗಿತ್ತು. ಆದರೆ, ಈಗಿನ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಕರ್ನಾಟಕ ಅತಿ ಹೆಚ್ಚು ಸಾಲ ಮಾಡುವ ರಾಜ್ಯಗಳಲ್ಲಿ ನಂಬರ್ 1 ಆಗುತ್ತಿರುವುದು ಅತ್ಯಂತ ನಾಚಿಕೆಗೇಡು’ ಎಂದು ಅವರು ಟೀಕಿಸಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಹೆಸರನ್ನು ‘ಸಾಲ’ರಾಮಯ್ಯ ಎಂದು ಬದಲಿಸಿಕೊಳ್ಳುವುದು ಒಳಿತು. ಅವರು ಸಿಎಂ ಆದಾಗೆಲ್ಲಾ ಕರ್ನಾಟಕದ ಸಾಲ ರಾಕೆಟ್ ವೇಗದಲ್ಲಿ ವೃದ್ಧಿಯಾಗುತ್ತಿದೆ. ಪ್ರಸ್ತುತ ಕರ್ನಾಟಕದ ಸಾಲ ₹6.65 ಲಕ್ಷ ಕೋಟಿಗೆ ತಲುಪಿದ್ದು, ಭ್ರಷ್ಟ ಕಾಂಗ್ರೆಸ್ ಸರ್ಕಾರದ ಆಡಳಿತ ಹೀಗೆಯೇ ಮುಂದುವರೆದರೆ ₹12 ಲಕ್ಷ ಕೋಟಿಗೆ ತಲುಪಿದರೂ ಅಚ್ಚರಿಯಿಲ್ಲ. ಒಟ್ಟಿನಲ್ಲಿ ತಮ್ಮದಲ್ಲದ ತಪ್ಪಿಗೆ ಕನ್ನಡಿಗರು ಸಾಲದ ಹೊರೆ ಹೊತ್ತುಕೊಳ್ಳುವುದು ಮಾತ್ರ ಖಚಿತ, ನಿಶ್ಚಿತ ಮತ್ತು ಖಂಡಿತ ಎಂದು ಬಿಜೆಪಿ ವಾಗ್ದಾಳಿ ನಡೆಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.