ಬೆಂಗಳೂರು: ‘2017–18ನೇ ಸಾಲಿನಲ್ಲಿ ಗೆಜೆಟೆಡ್ ಪ್ರೊಬೇಷನರಿ ಹುದ್ದೆಗಳ ಪೂರ್ವಭಾವಿ ಪರೀಕ್ಷೆಗೆ ಅರ್ಜಿ ಸಲ್ಲಿಸಿದ ಮತ್ತು ವಯೋಮಿತಿ ಮೀರಿದ ಎಲ್ಲ ವರ್ಗದ ಅಭ್ಯರ್ಥಿಗಳಿಗೆ 2023-24ನೇ ಸಾಲಿನ ಗ್ರೂಪ್ ‘ಎ’ ಮತ್ತು ‘ಬಿ’ ವೃಂದದ ಗೆಜೆಟೆಡ್ ಪ್ರೊಬೇಷನರಿ ಹುದ್ದೆಗಳ ಅಧಿಸೂಚನೆಯಲ್ಲಿ ಪರೀಕ್ಷೆ ಬರೆಯಲು ಒಂದು ಹೆಚ್ಚುವರಿ ಅವಕಾಶ ನೀಡಬೇಕು’ ಎಂದು ರಾಜ್ಯ ದಲಿತ ಪದವೀಧರ ಸಂಘ ಆಗ್ರಹಿಸಿದೆ.
ಸಂಘ ಈಗಾಗಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಈ ಬಗ್ಗೆ ಮನವಿ ಸಲ್ಲಿಸಿ, ಅಹವಾಲು ತೋಡಿಕೊಂಡಿದೆ. ಅಲ್ಲದೆ, ಆರ್ಥಿಕ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಎಲ್.ಕೆ. ಅತೀಕ್ ಅವರನ್ನು ಭೇಟಿ ಮಾಡಿ ಈ ಅವಕಾಶ ಕಲ್ಪಿಸುವಂತೆ ಕೋರಿದೆ.
‘2023–24ನೇ ಸಾಲಿನಲ್ಲಿ ಪರೀಕ್ಷೆ ಬರೆಯುವ ಆಕಾಂಕ್ಷಿಗಳಿಗೆ ರಾಜ್ಯ ಸರ್ಕಾರ ಈಗಾಗಲೇ ಮೂರು ವರ್ಷಗಳ ವಯೋಮಿತಿ ಸಡಿಲಿಸಿ ಅವಕಾಶ ನೀಡಿದೆ. ಇದರಿಂದ ಶೇ 20ರಷ್ಟು ಆಕಾಂಕ್ಷಿಗಳಿಗೆ ಮಾತ್ರ ಅವಕಾಶ ಸಿಕ್ಕಿದೆ. ವಯೋಮಿತಿ ಮೀರಿದ ಶೇ 80ರಷ್ಟು ಆಕಾಂಕ್ಷಿಗಳು ಪರೀಕ್ಷೆ ಬರೆಯುವ ಅವಕಾಶದಿಂದ ವಂಚಿತರಾಗುತ್ತಿದ್ದಾರೆ’ ಎಂದು ಸಂಘದ ಅಧ್ಯಕ್ಷ ವಿ. ಲೋಕೇಶ್ ತಿಳಿಸಿದ್ದಾರೆ.
‘ಒಡಿಶಾ ರಾಜ್ಯದಲ್ಲಿ 2020, 2021 ಮತ್ತು 2022ರಲ್ಲಿ ಗೆಜೆಟೆಡ್ ಪ್ರೊಬೇಷನರಿ ಪರೀಕ್ಷೆ ಬರೆದು ವಯೋಮಿತಿ ಮೀರಿದ ಎಲ್ಲ ವರ್ಗದ ಅಭ್ಯರ್ಥಿಗಳಿಗೆ 2023ರ ಗೆಜೆಟೆಡ್ ಪ್ರೊಬೇಷನರಿ ಪರೀಕ್ಷೆಗೆ ಒಂದು ಹೆಚ್ಚುವರಿ ಅವಕಾಶ ನೀಡಲಾಗಿದೆ. ಕರ್ನಾಟಕ ಸರ್ಕಾರ ಕೂಡಾ 1988–93ರ ಅವಧಿಯಲ್ಲಿ ಕೆಎಎಸ್ ಪರೀಕ್ಷೆ ಬರೆದು ವಯೋಮಿತಿ ಮೀರಿದ ಎಲ್ಲ ವರ್ಗದ ಅಭ್ಯರ್ಥಿಗಳಿಗೆ ನಂತರದ ಅವಧಿಯಲ್ಲಿ ಪರೀಕ್ಷೆ ಬರೆಯಲು ಒಂದು ಹೆಚ್ಚುವರಿ ಅವಕಾಶ ನೀಡಿದೆ’ ಎಂದು ಅವರು ಹೇಳಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.