ಬೆಂಗಳೂರು: ಕೆಎಎಸ್ ಅಧಿಕಾರಿ ಡಾ.ಬಿ.ಸುಧಾ ವಿರುದ್ಧ ದಾಖಲಿಸಿರುವ ಪ್ರಕರಣದಲ್ಲಿ ವಶಕ್ಕೆ ಪಡೆದಿರುವ 200ಕ್ಕೂ ಹೆಚ್ಚು ಸ್ಥಿರಾಸ್ತಿ ದಾಖಲೆಗಳ ನೈಜತೆ ಪರಿಶೀಲನೆಯನ್ನು ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಆರಂಭಿಸಿದೆ. ಇದಕ್ಕಾಗಿ ಹಲವು ತಂಡಗಳನ್ನು ನಿಯೋಜಿಸಲಾಗಿದೆ.
ಸುಧಾ ಮತ್ತು ಅವರ ಬೇನಾಮಿಗಳು ಎಂದು ಶಂಕಿಸಲಾಗಿರುವ ವ್ಯಕ್ತಿಗಳ ಮನೆ ಮೇಲೆ ಶನಿವಾರ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದರು. ಶೋಧ ಕಾರ್ಯಾಚರಣೆಯಲ್ಲಿ 200ಕ್ಕೂ ಹೆಚ್ಚು ಸ್ಥಿರಾಸ್ತಿ ದಾಖಲೆಗಳನ್ನು ವಶಪಡಿಸಿಕೊಳ್ಳಲಾಗಿದೆ.
ಬೆಂಗಳೂರು, ಮೈಸೂರು, ಉಡುಪಿ ಸೇರಿದಂತೆ ಹಲವು ಜಿಲ್ಲೆಗಳಲ್ಲಿರುವ ಸ್ಥಿರಾಸ್ತಿಗಳಿಗೆ ಸಂಬಂಧಿಸಿದ ದಾಖಲೆಗಳು ದಾಳಿ ವೇಳೆ ದೊರಕಿವೆ. ಕ್ರಯ ಪತ್ರಗಳು, ಜಿಪಿಎ ಕರಾರುಗಳು, ಮಾರಾಟ ಮತ್ತು ಖರೀದಿ ಒಪ್ಪಂದಗಳು ನೋಂದಣಿಯಾಗಿರುವ ಉಪ ನೋಂದಣಿ ಕಚೇರಿಗೆ ಖುದ್ದಾಗಿ ಭೇಟಿನೀಡುತ್ತಿರುವ ಎಸಿಬಿ ಅಧಿಕಾರಿಗಳು, ದಾಖಲೆಗಳಲ್ಲಿನ ಸಾಮ್ಯತೆ ಕುರಿತು ಪರಿಶೀಲಿಸುತ್ತಿದ್ದಾರೆ.
ಈ ಕುರಿತು ‘ಪ್ರಜಾವಾಣಿ’ಗೆ ಪ್ರತಿಕ್ರಿಯಿಸಿದ ಎಸಿಬಿ ಬೆಂಗಳೂರು ನಗರ ಎಸ್ಪಿ ಕುಲದೀಪ್ ಕುಮಾರ್ ಆರ್. ಜೈನ್, ‘ಮೊದಲು ದಾಖಲೆಗಳ ನೈಜತೆ ಖಚಿತವಾಗಬೇಕು. ಆ ಬಳಿಕ ಸ್ಥಿರಾಸ್ತಿಗಳ ಮೌಲ್ಯವನ್ನು ಅಂದಾಜಿಸಲಾಗುವುದು. ಎರಡು ದಿನಗಳಲ್ಲಿ ಈ ಪ್ರಕ್ರಿಯೆ ಒಂದು ಹಂತಕ್ಕೆ ತಲುಪಲಿದೆ’ ಎಂದರು.
ಸುಧಾ ಮತ್ತು ಅವರ ಆಪ್ತರಾದ ರೇಣುಕಾ ಮನೆಯಲ್ಲಿ ಪತ್ತೆಯಾಗಿರುವ 50 ಬ್ಯಾಂಕ್ ಖಾತೆಗಳು ಹಾಗೂ 50 ಚೆಕ್ಗಳ ಬಗ್ಗೆಯೂ ಇದೇ ಮಾದರಿಯಲ್ಲಿ ತನಿಖಾ ತಂಡ ಪರಿಶೀಲನೆ ಆರಂಭಿಸಿದೆ.
Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.