ಬೆಂಗಳೂರು: ರಾಮನಗರ ಜಿಲ್ಲೆ ಮಾಗಡಿಯಲ್ಲಿರುವ ಐತಿಹಾಸಿಕ ನಾಡಪ್ರಭು ಕೆಂಪೇಗೌಡರ ಕೋಟೆಯನ್ನು ಸಂರಕ್ಷಿಸುವಂತೆ ಕೋರಿ ಸಲ್ಲಿಸಲಾಗಿರುವ ಅರ್ಜಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಮತ್ತು ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಗೆ ನೋಟಿಸ್ ಜಾರಿಗೊಳಿಸಲು ಹೈಕೋರ್ಟ್ ಆದೇಶಿಸಿದೆ.
ಈ ಸಂಬಂಧ ಕೆಂಪೇಗೌಡ ಅಭಿವೃದ್ಧಿ ಸಮಿತಿ ಅಧ್ಯಕ್ಷ ಮಾಗಡಿಯ ಎಚ್.ಎಂ.ಕೃಷ್ಣಮೂರ್ತಿ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ನೇತೃತ್ವದ ವಿಭಾಗೀಯ ನ್ಯಾಯಪೀಠ ಶುಕ್ರವಾರ ವಿಚಾರಣೆ ನಡೆಸಿತು.
ಅರ್ಜಿದಾರರ ಪರ ಪದಾಂಕಿತ ಹಿರಿಯ ವಕೀಲ ಡಿ.ಆರ್.ರವಿಶಂಕರ್ ಅವರ ವಾದ ಆಲಿಸಿದ ನ್ಯಾಯಪೀಠ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಬೆಂಗಳೂರು ವೃತ್ತದ ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆ, ಪುರಾತತ್ವ ಇಲಾಖೆ ಆಯುಕ್ತರು, ಪುರಾತತ್ವ ಇಲಾಖೆಯ ಉಪ ನಿರ್ದೇಶಕರು, ಮಾಗಡಿ ನಗರಾಭಿವೃದ್ಧಿ ಪ್ರಾಧಿಕಾರ, ಮಾಗಡಿ ಪುರಸಭೆ, ರಾಮನಗರ ಜಿಲ್ಲಾಧಿಕಾರಿಗೆ ನೋಟಿಸ್ ಜಾರಿಗೊಳಿಸಲು ಆದೇಶಿಸಿ ವಿಚಾರಣೆ ಮುಂದೂಡಿತು.
ನಾಡಪ್ರಭು ಕೆಂಪೇಗೌಡರ ಕೋಟೆ, ಕೋಟೆಯ ಕಂದಕ ಮತ್ತು ಅವರಿಂದ ಸ್ಥಾಪಿತವಾದ ದೇವಾಲಯಗಳ ಅಭಿವೃದ್ಧಿ, ಸ್ಮಾರಕ, ಶಿಲ್ಪಗಳು, ಒತ್ತುವರಿಯಾಗಿರುವ ಕೋಟೆಯನ್ನು ಸಂರಕ್ಷಿಸಬೇಕು. ಮೂರು ಕಡೆ ಕೋಟೆಯ ಕಂದಕ ಒತ್ತುವರಿಯಾಗಿದೆ. ಇದೇ ಜಾಗದಲ್ಲಿ ವ್ಯಾಪಾರ ಮಾಡಲು ಬೀದಿಬದಿ ವ್ಯಾಪಾರಿಗಳಿಗೆ ಪುರಸಭೆ ಅವಕಾಶ ಮಾಡಿಕೊಟ್ಟಿದೆ. ವ್ಯಾಪಾರಿಗಳು ಕೋಟೆಯ ಗೋಡೆಗಳಿಗೆ ಮೊಳೆ ಹೊಡೆದು ವಿರೂಪಗೊಳಿಸಿದ್ದಾರೆ. ಕಸ-ಕಡ್ಡಿಗಳನ್ನು ಎಸೆಯುವ ಮೂಲಕ ಕೋಟೆಯನ್ನು ತ್ಯಾಜ್ಯದ ಕೇಂದ್ರವನ್ನಾಗಿಸಲಾಗಿದೆ. ಕೋಟೆಯಲ್ಲಿ ಮಲ-ಮೂತ್ರ ವಿಸರ್ಜನೆ, ಮದ್ಯ ಸೇವನೆ ನಡೆಯುತ್ತಿದೆ. ಇದೆಲ್ಲವನ್ನೂ ನಿರ್ಬಂಧಿಸಿ, ಕೋಟೆಯನ್ನು ರಕ್ಷಿಸಬೇಕು ಎಂದು ಅರ್ಜಿದಾರರು ಕೋರಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.