ADVERTISEMENT

ಖೇಲೋ ಇಂಡಿಯಾ: ರಾಜ್ಯಕ್ಕೆ ₹19.50 ಕೋಟಿ ಬಿಡುಗಡೆ

​ಪ್ರಜಾವಾಣಿ ವಾರ್ತೆ
Published 5 ನವೆಂಬರ್ 2020, 15:13 IST
Last Updated 5 ನವೆಂಬರ್ 2020, 15:13 IST

ಬೆಂಗಳೂರು: ಕೇಂದ್ರ ಸರ್ಕಾರ ‘ಖೇಲೋ ಇಂಡಿಯಾ’ ಯೋಜನೆಯಡಿ ರಾಜ್ಯದ ನಾಲ್ಕು ಕಡೆಗಳಲ್ಲಿ ಕ್ರೀಡಾಂಗಣ ನಿರ್ಮಾಣಕ್ಕಾಗಿ ₹19.50 ಕೋಟಿ ಬಿಡುಗಡೆ ಮಾಡಿದೆ.

ಈ ಯೋಜನೆಯಡಿ ಉಡುಪಿ ಜಿಲ್ಲೆಯ ಕಾರ್ಕಳ, ಚಿಕ್ಕಮಗಳೂರು ಹಾಗೂ ಕೊಪ್ಪಳದಲ್ಲಿ ಅತ್ಯಾಧುನಿಕ ಸೌಲಭ್ಯಗಳನ್ನು ಹೊಂದಿದ ಒಳಾಂಗಣ ಮತ್ತು ವಿವಿಧೋದ್ದೇಶಗಳ ಕ್ರೀಡಾಂಗಣಗಳು ನಿರ್ಮಾಣವಾಗಲಿವೆ.

ಯುವ ಜನ ಮತ್ತು ಸಬಲೀಕರಣ ಸಚಿವರಾದ ಸಿ.ಟಿ.ರವಿ ಅವರು ಕೇಂದ್ರ ಯುವಜನ ಸೇವಾ ಮತ್ತು ಕ್ರೀಡಾ ಸಚಿವ ಕಿರಣ್‌ ರಿಜಿಜು ಅವರನ್ನು ಭೇಟಿ ಮಾಡಿ ಕರ್ನಾಟಕಕ್ಕೆ ಅನುದಾನ ನೀಡುವಂತೆ ಒತ್ತಡ ಹೇರಿದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಒಳಾಂಗಣ ಮತ್ತು ವಿವಿಧೋದ್ದೇಶಗಳ ಕ್ರೀಡಾಂಗಣನ್ನು ನಿರ್ಮಾಣ ಮಾಡಲು ಸಮ್ಮತಿಸಿದ್ದಾರೆ.

ADVERTISEMENT

ಉಡುಪಿ ಜಿಲ್ಲೆಯ ಕಾರ್ಕಳದಲ್ಲಿ ಸುಮಾರು ₹3.50 ಕೋಟಿ ವೆಚ್ಚದಲ್ಲಿ ಒಳಾಂಗಣ ಕ್ರೀಡಾಂಗಣ, ಚಿಕ್ಕಮಗಳೂರಿನ ಜಿಲ್ಲಾ ಕ್ರೀಡಾಂಗಣದಲ್ಲಿ ₹.4.50 ಕೋಟಿ ವೆಚ್ಚದಲ್ಲಿ ವಿವಿಧೋದ್ದೇಶ ಬಳಕೆಯ ಒಳಾಂಗಣ ಸಭಾಂಗಣ, ಚಿಕ್ಕಮಗಳೂರಿನಲ್ಲಿ ₹ 7 ಕೋಟಿ ವೆಚ್ಚದಲ್ಲಿ ಸಿಂಥೆಟಿಕ್‌ ಅಥ್ಲೆಟಿಕ್‌ ಟ್ರಾಕ್‌ ನಿರ್ಮಾಣ, ಕೊಪ್ಪಳದ ಜಿಲ್ಲಾ ಕ್ರೀಡಾಂಗಣದಲ್ಲಿ ₹4.50 ಕೋಟಿ ವೆಚ್ಚದಲ್ಲಿ ವಿವಿಧೋದ್ದೇಶ ಹಾಲ್‌ ನಿರ್ಮಾಣ ಮಾಡಲಾಗುವುದು ಎಂದು ಕೇಂದ್ರ ಕ್ರೀಡಾ ಸಚಿವಾಲಯ ಅಧೀನ ಕಾರ್ಯದರ್ಶಿ ಒ.ಪಿ.ಚಂಚಕ್‌ ಅವರು ಆದೇಶದಲ್ಲಿ ತಿಳಿಸಿದ್ದಾರೆ.

ರಾಜ್ಯದಲ್ಲಿ ಕ್ರೀಡೆಗಳನ್ನು ಉತ್ತೇಜಿಸಲು ಮೂಲಭೂತ ಸೌಕರ್ಯ, ಕ್ರೀಡಾಂಗಣ ನಿರ್ಮಾಣ, ಆಧುನಿಕ ಸೌಲಭ್ಯಗಳನ್ನು ಒದಗಿಸುವುದೂ ಸೇರಿದಂತೆ ಇತರ ವಿಷಯಗಳ ಬಗ್ಗೆ ಸಚಿವ ರವಿ ಅವರು ಕೇಂದ್ರ ಸಚಿವರಿಗೆ ಮನವರಿಕೆ ಮಾಡಿಕೊಟ್ಟಿದ್ದರು.

ಕರ್ನಾಟಕದಲ್ಲಿ ಅನೇಕ ಪ್ರತಿಭಾವಂತ ಕ್ರೀಡಾಪಟುಗಳಿದ್ದಾರೆ. ಕೆಲವು ಕಡೆ ಸೌಲಭ್ಯಗಳ ಕೊರತೆ ಇರುವುದರಿಂದ ಪ್ರತಿಭಾವಂತರು ಸೌಲಭ್ಯಗಳಿಂದ ವಂಚಿತರಾಗಿದ್ದಾರೆ. ಅಗತ್ಯವಿರುವ ಕಡೆ ಕ್ರೀಡಾಂಗಣಗಳಿಗೆ ಅಂತರರಾಷ್ಟ್ರೀಯ ಮಟ್ಟದ ಮತ್ತು ಆಧುನಿಕ ಸೌಲಭ್ಯಗಳನ್ನು ಕಲ್ಪಿಸಿಕೊಟ್ಟರೆ ಕ್ರೀಡಾಪಟುಗಳನ್ನು ಉತ್ತೇಜಿಸಲು ಅನುಕೂಲವಾಗುತ್ತದೆ ಎಂದು ರವಿ ತಿಳಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.