ಉಡುಪಿ: ಮಣಿಪಾಲದ ಕಸ್ತೂರಬಾ ಆಸ್ಪತ್ರೆಯಲ್ಲಿ ಏ.15ರವರೆಗೆ ಹೊರರೋಗಿಗಳ ವಿಭಾಗ ಹಾಗೂ ಮಾರ್ಚ್ 27ರಿಂದ ಉಡುಪಿಯ ಡಾ.ಟಿಎಂಎ ಪೈ ಆಸ್ಪತ್ರೆಯ ಹೊರರೋಗಿ, ಒಳರೋಗಿ ಹಾಗೂ ತುರ್ತು ಸೇವೆ ವಿಭಾಗಗಳನ್ನು ಬಂದ್ ಮಾಡಲಾಗುವುದು ಎಂದು ಆಸ್ಪತ್ರೆಯ ಆಡಳಿತ ಮಂಡಳಿ ತಿಳಿಸಿದೆ.
ಕೋವಿಡ್ ಸೋಂಕು ಹರಡುವಿಕೆ ತಡೆಗಟ್ಟಲು ತಕ್ಷಣದಿಂದ ಜಾರಿಗೆ ಬರುವಂತೆ ಏ.15ರವರೆಗೆ ಕೆಎಂಸಿಯ ಹೊರರೋಗ ವಿಭಾಗ ಕಾರ್ಯಾಚರಣೆ ಸ್ಥಗಿತಗೊಳಿಸಿದೆ. ಜ್ವರ, ಕೆಮ್ಮು ಹಾಗೂ ಅಗತ್ಯ ತಪಾಸಣೆಗೆ ಬರುವವರು ಆಸ್ಪತ್ರೆಯ ಹೊರಾಂಗಣದ ತಾತ್ಕಾಲಿಕ ತಪಾಸಣಾ ಕೇಂದ್ರಕ್ಕೆ ಬರಬೇಕು. ತಪಾಸಣೆ ವೇಳೆ ಹೆಚ್ಚಿನ ಚಿಕಿತ್ಸೆ ಅಗತ್ಯವಿದ್ದರೆ ಮಾತ್ರ ಸಂಬಂಧಿತ ವಿಭಾಗದಲ್ಲಿ ಚಿಕಿತ್ಸೆಗೆ ಅವಕಾಶ ಕೊಡಲಾಗುವುದು ಎಂದು ತಿಳಿಸಿದೆ.
ಕಿಮೋಥೆರಪಿ ಮತ್ತು ರೇಡಿಯೋಥೆರಪಿ ರೋಗಿಗಳು ನೇರವಾಗಿ ಶಿರಡಿ ಸಾಯಿಬಾಬಾ ಕ್ಯಾನ್ಸರ್ ಆಸ್ಪತ್ರೆಗೆ, ಗರ್ಭಿಣಿಯರು ಮಹಿಳಾ ಮತ್ತು ಮಕ್ಕಳ ವಿಭಾಗಕ್ಕೆ, ಡಯಾಲಿಸಿಸ್ ಮಾಡಿಸಿಕೊಳ್ಳುವವರು ಡಯಾಲಿಸಿಸ್ ಕೇಂದ್ರಕ್ಕೆ ಬರಬೇಕು. ಮಕ್ಕಳಿಗೆ ಲಸಿಕಾ ಸೌಲಭ್ಯ ಕೂಡಾ 15ರವರೆಗೆ ಇರುವುದಿಲ್ಲ. ಸಾರ್ವಜನಿಕರು ಸಹಕರಿಸಬೇಕು ಎಂದು ವೈದ್ಯಕೀಯ ಅಧೀಕ್ಷಕ ಡಾ.ಅವಿನಾಶ್ ಶೆಟ್ಟಿ ಮನವಿ ಮಾಡಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.