ಬೆಂಗಳೂರು: ಸಚಿವ ಸ್ಥಾನ ಸಿಗದ ಕಾರಣಕ್ಕೆ ಮುನಿಸಿಕೊಂಡಿರುವ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರನ್ನು ಕರ್ನಾಟಕ ಹಾಲು ಒಕ್ಕೂಟಗಳ ಮಹಾಮಂಡಳ (ಕೆಎಂಎಫ್) ಅಧ್ಯಕ್ಷ ಗಾದಿಯಲ್ಲಿ ಕೂರಿಸಲು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನಿರ್ಧರಿಸಿದ್ದಾರೆ ಎನ್ನಲಾಗಿದೆ.
ಯಡಿಯೂರಪ್ಪ ಅವರನ್ನು ಶನಿವಾರ ಭೇಟಿ ಮಾಡಿದ ಬಳಿಕ ಮಾತನಾಡಿದ ಬಾಲಚಂದ್ರ ಜಾರಕಿಹೊಳಿ ಕೂಡಾ ಇದೇ ಈ ಸುಳಿವು ನೀಡಿದ್ದಾರೆ.
ಇದನ್ನೂ ಓದಿ...ಕೆಎಂಎಫ್ ಅಧ್ಯಕ್ಷರ ಚುನಾವಣೆ 31ಕ್ಕೆ
‘ನೇರವಾಗಿ ಜನರ ಕೆಲಸ ಮಾಡಬೇಕು ಎಂದು ನಿರ್ಧರಿಸಿದ್ದೇನೆ. ಆ ಕಾರಣಕ್ಕೆ ನಾನು ಸಚಿವ ಸ್ಥಾನಕ್ಕೆ ಲಾಬಿ ಮಾಡಿಲ್ಲ. ಕೆಎಂಎಫ್ನ ಎಲ್ಲ 15 ನಿರ್ದೇಶಕರ ವಿಶ್ವಾಸ ಗಳಿಸಿ ಸಂಪೂರ್ಣ ಬೆಂಬಲದಿಂದ ಅಧ್ಯಕ್ಷನಾಗಲು ಬಯಸಿದ್ದೇನೆ’ ಎಂದರು.
‘ಇದೇ ವಿಷಯವನ್ನು ಯಡಿಯೂರಪ್ಪ ಅವರಿಗೂ ತಿಳಿಸಿದ್ದೇನೆ. ಅವರೂ ಒಪ್ಪಿಗೆ ಸೂಚಿಸಿದ್ದು, ಸರ್ಕಾರದಿಂದ ಈಗಾಗಲೇ ನಾಮನಿರ್ದೇಶನ ಮಾಡಿದ್ದಾರೆ’ ಎಂದರು.
ಕೆಎಂಎಫ್ ಅಧ್ಯಕ್ಷ ಸ್ಥಾನಕ್ಕೆ ಇದೇ 31ರಂದು ಚುನಾವಣೆ ನಡೆಯಲಿದೆ. ಈ ಸ್ಥಾನದ ಮೇಲೆ ಜೆಡಿಎಸ್ ಶಾಸಕ ಎಚ್.ಡಿ. ರೇವಣ್ಣ ಮತ್ತು ಕಾಂಗ್ರೆಸ್ ಶಾಸಕ ಭೀಮಾ ನಾಯ್ಕ್ ಕಣ್ಣಿಟ್ಟಿದ್ದಾರೆ.
ಈ ಹಿಂದೆ 15 ವರ್ಷ ಕೆಎಂಎಫ್ ಅಧ್ಯಕ್ಷರಾಗಿದ್ದ ರೇವಣ್ಣ, ಮತ್ತೆ ಅದೇ ಹುದ್ದೆ ಮೇಲೆ ಕಣ್ಣಿಟ್ಟಿದ್ದು, ಇದಕ್ಕಾಗಿ ಈಗಾಗಲೇ ಲಾಬಿ ಆರಂಭಿಸಿದ್ದಾರೆ. ಇದೇ ಉದ್ದೇಶದಿಂದ ಅವರು ಕಾಂಗ್ರೆಸ್ಗೆ ಸೇರಿದ ನಾಲ್ವರು ಕೆಎಂಎಫ್ ನಿರ್ದೇಶಕರನ್ನು ಇತ್ತೀಚೆಗೆ ಹೈದರಾಬಾದಿನ ರೆಸಾರ್ಟ್ಗೆ ಕರೆದುಕೊಂಡು ಹೋಗಿದ್ದರು. ಭೀಮಾ ನಾಯ್ಕ್ ಅವರು ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿದ್ದರು.
*
ನಾನು ಸಚಿವ ಸ್ಥಾನ ಆಕಾಂಕ್ಷಿ ಅಲ್ಲ. ಕೆಎಂಎಫ್ ಅಧ್ಯಕ್ಷ ಆಗಬೇಕೆಂದು ಇದ್ದೇನೆ.
–ಬಾಲಚಂದ್ರ ಜಾರಕಿಹೊಳಿ, ಶಾಸಕ
ಇವನ್ನೂ ಓದಿ...
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.