ಬೆಂಗಳೂರು: ರಾಜ್ಯದ ಕೊಡಗು ಮತ್ತು ಕರಾವಳಿ ಭಾಗದಲ್ಲಿ ಸೋಮವಾರ ಮಳೆಯ ಅಬ್ಬರ ಕಡಿಮೆಯಾಗಿದೆ. ವಿವಿಧ ಜಿಲ್ಲೆಗಳಲ್ಲಿ ಅಲ್ಲಲ್ಲಿ ಸಾಧಾರಣ ಮಳೆಯಾಗಿದೆ.
ಶಿರಸಿ, ಹುಬ್ಬಳ್ಳಿಯಲ್ಲಿ ಜಿಟಿಜಿಟಿ, ಬೆಳಗಾವಿಯಲ್ಲಿ ಸಾಧಾರಣ ಮಳೆಯಾಗಿದೆ. ಹಾವೇರಿ ಜಿಲ್ಲೆಯ ರಾಣೆಬೆನ್ನೂರು ತಾಲ್ಲೂಕಿನ ತುಮ್ಮಿನಕಟ್ಟಿಯ ಅಯ್ಯನಕೆರೆ ಹಾಗೂ ನಿಟ್ಟೂರು ಬಳಿಯ ಚೆಕ್ಡ್ಯಾಂ ಕೋಡಿ ಬಿದ್ದಿದ್ದು, ಜಮೀನುಗಳಿಗೆ ನೀರು ನುಗ್ಗಿದೆ.
ಮನೆ, ಬೆಳೆ ಹಾನಿ: ಬಳ್ಳಾರಿ ಜಿಲ್ಲೆಯ ಕಂಪ್ಲಿಯಲ್ಲಿ ಸತತ ಮಳೆಯಿಂದಾಗಿ ಎರಡು ಮನೆಗಳಿಗೆ ಹಾನಿಯಾಗಿದೆ. ತಾಲ್ಲೂಕಿನ ಸುಗ್ಗೇನಹಳ್ಳಿ, ಶ್ರೀರಾಮರಂಗಾಪುರ ವ್ಯಾಪ್ತಿಯಲ್ಲಿ ಮೆಣಸಿನಕಾಯಿ ಬೆಳೆಗೆ ನಿರಂತರ ಮಳೆಯಿಂದ ಕೊಳೆರೋಗ ಕಾಣಿಸಿಕೊಂಡಿದೆ. ಕರಾವಳಿ ಮತ್ತು ಕೊಡಗಿನಲ್ಲಿ ಮಳೆಯ ಅಬ್ಬರ ತಗ್ಗಿದೆ. ಬಂಟ್ವಾಳ ತಾಲ್ಲೂಕಿನಲ್ಲಿ ಮನೆಗೆ ಹಾನಿಯಾಗಿದೆ. ಬೀದರ್, ಕಲಬುರ್ಗಿ, ಯಾದಗಿರಿ ಜಿಲ್ಲೆಗಳಲ್ಲಿ ಜಿಟಿಜಿಟಿ ಮಳೆಯಾಯಿತು. ಚಿತ್ರದುರ್ಗ, ದಾವಣಗೆರೆ ಜಿಲ್ಲೆಯಲ್ಲಿ ಸಾಧಾರಣ ಮಳೆಯಾಗಿದೆ.
ಭದ್ರಾ ಜಲಾಶಯ ಭರ್ತಿ: ಶಿವಮೊಗ್ಗ ಜಿಲ್ಲೆಯಲ್ಲಿ ಭದ್ರಾ ಜಲಾಶಯ ಭರ್ತಿಯಾಗಿದ್ದು, ಸೋಮವಾರ ಜಲಾಶಯದಿಂದ 1,751 ಕ್ಯುಸೆಕ್ ನೀರನ್ನು ನದಿಗೆ ಬಿಡಲಾಯಿತು. 186 ಅಡಿ ನೀರು ಸಂಗ್ರಹ ಸಾಮರ್ಥ್ಯದ ಜಲಾಶಯ ಭರ್ತಿಯಾಗಿದ್ದು, ನಾಲ್ಕು ಗೇಟ್ಗಳನ್ನು 3 ಇಂಚು ತೆರೆಯುವ ಮೂಲಕ ನದಿಗೆ ನೀರನ್ನು ಬಿಡಲಾಯಿತು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.