
ಬೆಂಗಳೂರು: ‘ಕೋಗಿಲು ಗ್ರಾಮದಲ್ಲಿ ನಡೆಸಲಾದ ಒತ್ತುವರಿ ತೆರವು ಕಾರ್ಯದಲ್ಲಿ ಮನೆ ಕಳೆದುಕೊಂಡವರಿಗೆ ಪರಿಹಾರ ಕಲ್ಪಿಸುವ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೋಮವಾರ ಬೆಳಿಗ್ಗೆ ಸಭೆ ಕರೆದಿದ್ದು, ಎಲ್ಲರಿಗೂ ಒಳ್ಳೆಯದಾಗುವ ನಿರ್ಧಾರ ತೆಗೆದುಕೊಳ್ಳುವ ನಿರೀಕ್ಷೆ ಇದೆ’ ಎಂದು ವಸತಿ ಸಚಿವ ಜಮೀರ್ ಅಹಮದ್ ಖಾನ್ ಹೇಳಿದರು.
ತೆರವು ಕಾರ್ಯಾಚರಣೆ ನಡೆದ ಪ್ರದೇಶದಲ್ಲೇ ಟೆಂಟ್ಗಳನ್ನು ನಿರ್ಮಿಸಿಕೊಂಡಿರುವವರನ್ನು ಭಾನುವಾರ ಭೇಟಿ ಮಾಡಿದ ಜಮೀರ್ ಅಹಮದ್, ಅವರ ಜತೆ ಮಾತುಕತೆ ನಡೆಸಿದರು. ಮುಖ್ಯಮಂತ್ರಿ ಅವರ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್ ಜತೆಗಿದ್ದರು.
‘ಇಲ್ಲಿನ ನಿವಾಸಿಗಳಿಗೆ ಈಗಾಗಲೇ ಹಲವು ಬಾರಿ ನೋಟಿಸ್ ನೀಡಲಾಗಿತ್ತು. ತೆರವು ಕಾರ್ಯಾಚರಣೆ ವೇಳೆ ಇಲ್ಲಿನ ಎಲ್ಲ ನಿವಾಸಿಗಳಿಗೂ ಸುತ್ತಮುತ್ತಲ ಪ್ರದೇಶದಲ್ಲಿರುವ ಐದು ಕಲ್ಯಾಣ ಮಂಟಪಗಳಲ್ಲಿ ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ವಸತಿ ಮತ್ತು ಊಟದ ವ್ಯವಸ್ಥೆ ಮಾಡಿದ್ದರು. ಆದರೆ ನಿವಾಸಿಗಳ್ಯಾರೂ ಅಲ್ಲಿಗೆ ಹೋಗಿಲ್ಲ. ಈ ವಿಚಾರದಲ್ಲಿ ಕೇರಳ ರಾಜಕಾರಣಿಗಳು ಮಾಡುತ್ತಿರುವ ಆರೋಪದಲ್ಲಿ ಹುರುಳಿಲ್ಲ’ ಎಂದು ಜಮೀರ್ ಹೇಳಿದರು.
‘ಈ ಜನರಿಗೆ ಶಾಶ್ವತವಾಗಿ ಮನೆ ಕಟ್ಟಿಕೊಡಲು ನಾಲ್ಕು ಎಕರೆ ಮಂಜೂರು ಮಾಡುವ ಬಗ್ಗೆ ಕಂದಾಯ ಸಚಿವರು ಕ್ರಮ ತೆಗೆದುಕೊಂಡಿದ್ದರು. ಅದಕ್ಕೆ ನಿವಾಸಿಗಳು ಒಪ್ಪಿಕೊಳ್ಳಲಿಲ್ಲ. ಈ ಎಲ್ಲ ಅಂಶಗಳನ್ನು ಗಮನದಲ್ಲಿ ಇರಿಸಿಕೊಂಡು, ಮುಖ್ಯಮಂತ್ರಿ ಅವರ ನೇತೃತ್ವದಲ್ಲಿ ನಡೆಯುವ ಸಭೆಯಲ್ಲಿ ತೀರ್ಮಾನ ತೆಗೆದುಕೊಳ್ಳಲಾಗುತ್ತದೆ’ ಎಂದರು.
‘ಕೇರಳದಲ್ಲಿ ಇನ್ನೇನು ಚುನಾವಣೆ ಬರಲಿದೆ. ಅದಕ್ಕಾಗಿಯೇ ಅಲ್ಲಿನ ಸಚಿವರು, ಶಾಸಕರು, ಸಂಸದರು ಇಲ್ಲಿಗೆ ಬರುತ್ತಿದ್ದಾರೆ. ಕೇರಳದಲ್ಲಿ ಪ್ರವಾಹದಲ್ಲಿ ಜನರು ನಿರ್ಗತಿಕರಾದಾಗ ಕರ್ನಾಟಕ ಸರ್ಕಾರದಿಂದ ನೂರು ಮನೆ ನಿರ್ಮಿಸಿಕೊಟ್ಟಿದ್ದೇವೆ. ಕೇರಳ ಮುಖ್ಯಮಂತ್ರಿಗೆ ಕಾಳಜಿ ಇದ್ದರೆ, ಇಲ್ಲಿ ಅವರು ಮನೆ ನಿರ್ಮಿಸಿಕೊಡಲಿ ಅಥವಾ ಆರ್ಥಿಕ ನೆರವು ನೀಡಲಿ. ಸುಮ್ಮನೆ ಇಲ್ಲಿಗೆ ಬಂದು ಹೋದರೆ ಉಪಯೋಗವಿಲ್ಲ’ ಎಂದು ಸುದ್ದಿಗಾರರ ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
ಸರ್ಕಾರದ ಕ್ರಮ ಸಮರ್ಥಿಸಿಕೊಂಡು ಕೇರಳ ಮುಖ್ಯಮಂತ್ರಿಗೆ ಉತ್ತರ ನೀಡಿರುವ ನೀವು ಎಐಸಿಸಿಯ ನಿಮ್ಮ ಬಾಸ್ ವೇಣುಗೋಪಾಲ್ ಅವರಿಗೆ ಅದೇ ಧಾಟಿಯಲ್ಲಿ ಉತ್ತರ ನೀಡುವ ಧೈರ್ಯ ಇದೆಯಾ?ಬಿ.ವೈ.ವಿಜಯೇಂದ್ರ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.