
ನವದೆಹಲಿ: ಕೋಗಿಲು ಬಡಾವಣೆಯಲ್ಲಿ ಅಕ್ರಮ ಒತ್ತುವರಿ ಪ್ರದೇಶ ನೆಲಸಮಗೊಳಿಸಿರುವ ಪ್ರಕರಣದಲ್ಲಿ ಮಾನವೀಯತೆ ದೃಷ್ಟಿಯಿಂದ ಒತ್ತುವರಿದಾರರಿಗೆ ಸೂಕ್ತ ವಸತಿ ವ್ಯವಸ್ಥೆ ಮಾಡಿಕೊಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಕರ್ನಾಟಕ ಭವನದಲ್ಲಿ ಶನಿವಾರ ಸುದ್ದಿಗಾರರ ಜತೆಗೆ ಮಾತನಾಡಿದ ಅವರು, ‘ಕೋಗಿಲು ಬಡಾವಣೆಯ ತ್ಯಾಜ್ಯ ವಿಲೇವಾರಿ ಸ್ಥಳದಲ್ಲಿ ಹಲವರು ಅತಿಕ್ರಮವಾಗಿ ಗುಡಿಸಲು ನಿರ್ಮಿಸಿಕೊಂಡಿದ್ದರು. ಅದು ಜನ ವಸತಿಗೆ ಯೋಗ್ಯವಾದ ಸ್ಥಳವಾಗಿರಲಿಲ್ಲ. ಬೇರೆಡೆಗೆ ಸ್ಥಳಾಂತರ ಆಗುವಂತೆ ಅಲ್ಲಿನ ನಿವಾಸಿಗಳಿಗೆ ಹಲವು ಬಾರಿ ನೋಟಿಸ್ ನೀಡಿದ್ದರೂ ಅವರು ಸ್ಪಂದಿಸಿಲ್ಲ. ಈ ಹಿನ್ನೆಲೆಯಲ್ಲಿ ಅನಿವಾರ್ಯವಾಗಿ ತೆರವುಗೊಳಿಸಲಾಗಿದೆ‘ ಎಂದರು.
‘ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಕಮಿಷನರ್ ಅವರೊಂದಿಗೆ ಮಾತನಾಡಿ ಅವರೆಲ್ಲರಿಗೂ ತಾತ್ಕಾಲಿಕ ಆಶ್ರಯ, ಊಟ ಇನ್ನಿತರೆ ವ್ಯವಸ್ಥೆ ಮಾಡಿಕೊಡುವಂತೆ ಸೂಚನೆ ನೀಡಿದ್ದೇನೆ. ಅಲ್ಲಿ ಅತಿಕ್ರಮವಾಗಿ ವಾಸವಿದ್ದ ಬಹುತೇಕರು ವಲಸೆ ಕಾರ್ಮಿಕರು, ಸ್ಥಳೀಯ ನಿವಾಸಿಗಳಲ್ಲ‘ ಎಂದು ಸ್ಪಷ್ಟಪಡಿಸಿದರು.
ಬುಲ್ಡೋಜರ್ ನ್ಯಾಯಕ್ಕೂ, ಅಕ್ರಮ ಒತ್ತುವರಿ ತೆರವಿಗೂ ಅಜಗಜಾಂತರವಿದೆ. ಪಿಣರಾಯಿ ವಿಜಯನ್ ಅವರು ವಾಸ್ತವ ಸಂಗತಿಗಳ ಅರಿವಿಲ್ಲದೆ ರಾಜಕೀಯ ಕಾರಣಕ್ಕಾಗಿ ಟೀಕೆ ಮಾಡುತ್ತಿದ್ದಾರೆ ಎಂದು ಕಿಡಿಕಾರಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.