ಬೆಂಗಳೂರು: ಲಾಕ್ಡೌನ್ ನಿರ್ಬಂಧ ಸಡಿಲಿಕೆಯ ಸುಳಿವು ಸಿಗುತ್ತಿದ್ದಂತೆ ಪಕ್ಷ ಸಂಘಟನೆ ಮತ್ತು ಬಲವರ್ಧನೆಗೆ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಸಿದ್ಧತೆ ನಡೆಸಿದೆ.
ಇದೇ 31ರಂದು ಕೆಪಿಸಿಸಿ ಅಧ್ಯಕ್ಷರಾಗಿ ಡಿ.ಕೆ. ಶಿವಕುಮಾರ್ ಅಧಿಕಾರ ಸ್ವೀಕರಿಸುವ ಸಾಧ್ಯತೆ ಇದೆ.
‘ಮಂಗಳವಾರದಿಂದ (ಮೇ 19) ಶನಿವಾರದವರೆಗೆ (ಮೇ 23ರವರೆಗೆ) ಪಕ್ಷದ ವಿವಿಧ ಘಟಕಗಳ ಸಭೆಯನ್ನು ಕೆಪಿಸಿಸಿ ಕಚೇರಿ
ಯಲ್ಲಿ ನಿಯೋಜಿತ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಆಯೋಜಿಸಿದ್ದಾರೆ’ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹಮದ್ ತಿಳಿಸಿದ್ದಾರೆ.
ಅಧಿಕಾರ ಸ್ವೀಕಾರಕ್ಕೆ ಪೂರ್ವಭಾವಿಯಾಗಿ ಎಲ್ಲ ಮುಖಂಡರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಲು ಮತ್ತು ಪಕ್ಷವನ್ನು ಪುನರ್ ಸಂಘಟಿಸುವ ನಿಟ್ಟಿನಲ್ಲಿ ಅಭಿಪ್ರಾಯ ಪಡೆದು ಮುಂದಿನ ಹೆಜ್ಜೆ ಇಡಲು ಶಿವಕುಮಾರ್ ನಿರ್ಧರಿಸಿದ್ದಾರೆ.
ಯಾವಾಗ, ಯಾರ ಸಭೆ: ಮೊದಲ ದಿನ ಬೆಳಿಗ್ಗೆ ವಿಧಾನಸಭಾ ಕ್ಷೇತ್ರಗಳ ವೀಕ್ಷಕರ ಮತ್ತು ಮಧ್ಯಾಹ್ನ ಕೆಪಿಸಿಸಿ ವತಿಯಿಂದ ನೇಮಕಗೊಂಡ ವಿಧಾನಸಭಾ ಕ್ಷೇತ್ರಗಳ ಸಂಯೋಜಕರ ಸಭೆ ನಡೆಯಲಿದೆ. ಮರುದಿನ ಬೆಳಿಗ್ಗೆ 2018ರ ವಿಧಾನಸಭಾ ಚುನಾವಣೆಯಲ್ಲಿ ಸೋಲು ಕಂಡ ಪಕ್ಷದ ಅಭ್ಯರ್ಥಿಗಳ ಮತ್ತು ಮಧ್ಯಾಹ್ನ ಎಲ್ಲ ಜಿಲ್ಲಾ ಘಟಕಗಳ ಅಧ್ಯಕ್ಷರು, ಮಾಜಿ ಸಂಸದರು,
2019ರ ಲೋಕಸಭೆ ಚುನಾವಣೆಯಲ್ಲಿ ಕಣಕ್ಕಿಳಿದ ಅಭ್ಯರ್ಥಿಗಳ ಸಭೆ ನಡೆಯಲಿದೆ. ಇದೇ 21 ರಂದು ಬೆಳಿಗ್ಗೆ ರಾಜ್ಯ ಮಹಿಳಾ ಕಾಂಗ್ರೆಸ್ ಘಟಕದ ಸಭೆ ನಡೆಯಲಿದೆ ಎಂದು ಸಲೀಂ ಅಹಮದ್ ತಿಳಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.