ADVERTISEMENT

ಕೆಪಿಸಿಸಿ ಪದಾಧಿಕಾರಿ ನೇಮಕ: ಡಿ.ಕೆ. ಶಿವಕುಮಾರ್‌ ದೆಹಲಿಗೆ

​ಪ್ರಜಾವಾಣಿ ವಾರ್ತೆ
Published 12 ಮಾರ್ಚ್ 2022, 16:32 IST
Last Updated 12 ಮಾರ್ಚ್ 2022, 16:32 IST
ಡಿ.ಕೆ. ಶಿವಕುಮಾರ್‌
ಡಿ.ಕೆ. ಶಿವಕುಮಾರ್‌   

ಬೆಂಗಳೂರು: ಕೆಪಿಸಿಸಿ ಪದಾಧಿಕಾರಿಗಳು ಹಾಗೂ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರ ನೇಮಕದ ಕುರಿತು ಚರ್ಚಿಸಲು ಪಕ್ಷದ ಹೈಕಮಾಂಡ್ ಸೂಚನೆ ಮೇರೆಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಅವರು ಶನಿವಾರ ರಾತ್ರಿ ದೆಹಲಿಗೆ ತೆರಳಿದ್ದಾರೆ.

ಕೆಪಿಸಿಸಿ ಉಪಾಧ್ಯಕ್ಷರು, ಪ್ರಧಾನ ಕಾರ್ಯದರ್ಶಿಗಳು, ಕಾರ್ಯದರ್ಶಿಗಳು ಸೇರಿದಂತೆ ವಿವಿಧ ಹಂತದ ಪದಾಧಿಕಾರಿಗಳ ನೇಮಕಾತಿ ಬಹುದಿನಗಳಿಂದ ಬಾಕಿ ಇದೆ. ಜಿಲ್ಲಾಧ್ಯಕ್ಷರ ನೇಮಕದ ಸಂಬಂಧ ಆಯಾ ಜಿಲ್ಲೆಗಳಿಂದ ಅಭಿಪ್ರಾಯವನ್ನೂ ಪಡೆಯಲಾಗಿತ್ತು. ಎಲ್ಲ ಮಾಹಿತಿಯನ್ನು ಮುಂದಿಟ್ಟುಕೊಂಡು ಪಕ್ಷದ ಸಂಘಟನೆ ಬಲಪಡಿಸಲು ಅವಶ್ಯ ಇರುವವರನ್ನು ನೇಮಕ ಮಾಡುವ ಬಗ್ಗೆ ರಾಜ್ಯದ ನಾಯಕರ ಜತೆ ಹಲವು ಸುತ್ತಿನ ಸಮಾಲೋಚನೆಯನ್ನೂ ಶಿವಕುಮಾರ್ ನಡೆಸಿದ್ದರು.

ಪಟ್ಟಿ ಕುರಿತು ಚರ್ಚಿಸಲು ತಕ್ಷಣವೇ ದೆಹಲಿಗೆ ಬರುವಂತೆ ಹೈಕಮಾಂಡ್ ಸೂಚನೆ ಹಿನ್ನೆಲೆಯಲ್ಲಿ ಶಿವಕುಮಾರ್ ದೆಹಲಿಗೆ ತೆರಳಿದರು ಎಂದು ಮೂಲಗಳು ತಿಳಿಸಿವೆ.

ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್‌, ಕೆಪಿಸಿಸಿ ರಾಜ್ಯ ಉಸ್ತುವಾರಿ ರಣದೀಪ್‌ಸಿಂಗ್ ಸುರ್ಜೇವಾಲ ಅವರನ್ನು ಭೇಟಿಯಾಗಿ ಚರ್ಚಿಸಲಿದ್ದಾರೆ ಎಂದೂ ಮೂಲಗಳು ಹೇಳಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.