ADVERTISEMENT

ಪರಿಷತ್ ಫಲಿತಾಂಶ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ: ಡಿ.ಕೆ.ಶಿವಕುಮಾರ್

​ಪ್ರಜಾವಾಣಿ ವಾರ್ತೆ
Published 14 ಡಿಸೆಂಬರ್ 2021, 15:35 IST
Last Updated 14 ಡಿಸೆಂಬರ್ 2021, 15:35 IST
ಡಿ.ಕೆ.ಶಿವಕುಮಾರ್‌
ಡಿ.ಕೆ.ಶಿವಕುಮಾರ್‌   

ಬೆಳಗಾವಿ:‘ವಿಧಾನಪರಿಷತ್ ಚುನಾವಣೆಯು ಮುಂದಿನ ವಿಧಾನಸಭೆ ಚುನಾವಣೆಗೆ ದಿಕ್ಸೂಚಿಯಾಗಿದೆ’ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಹೇಳಿದರು.

ಇಲ್ಲಿನ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಈ ಹಿಂದೆ ಹಾನಗಲ್‌ ವಿಧಾನಸಭೆ ಉಪಚುನಾವಣೆಯಲ್ಲಿ ಜನರು ಬದಲಾವಣೆ ಬಯಸಿದ್ದರು. ಈಗ ರಾಜ್ಯದಲ್ಲಿ ಸ್ಥಳೀಯ ಸಂಸ್ಥೆಗಳ ಪ್ರತಿನಿಧಿಗಳು ಬದಲಾವಣೆ ಬಯಸಿದ್ದಾರೆ. ಸಾಮೂಹಿಕ ನಾಯಕತ್ವದಲ್ಲಿ ಚುನಾವಣೆ ಎದುರಿಸಿ ಯಶಸ್ವಿಯಾಗಿದ್ದೇವೆ’ ಎಂದು ಪ್ರತಿಕ್ರಿಯಿಸಿದರು.

‘ನಮ್ಮ ನಿರೀಕ್ಷೆ ಪ್ರಕಾರ ರಾಜ್ಯದಲ್ಲಿ 13–14 ಸ್ಥಾನ ಗೆಲ್ಲಬೇಕಿತ್ತು. ಆದರೆ, 11 ಕಡೆ ಗೆದ್ದಿದ್ದೇವೆ. ಕಲಬುರಗಿ, ಕೊಡಗು ಹಾಗೂ ಚಿಕ್ಕಮಗಳೂರಿನಲ್ಲಿ ನಿರೀಕ್ಷೆ ಹುಸಿಯಾಗಿದೆ’ ಎಂದರು.

ರಮೇಶಗೆ ಟಾಂಗ್‌ ಕೊಟ್ಟ ಡಿಕೆಶಿ: ‘ಚುನಾವಣೆ ಫಲಿತಾಂಶ ಬಳಿಕ ಡಿಕೆಶಿ ಜೊತೆಗೆ ಓಪನ್‌ ವಾರ್‌ ಆಗಲಿ’ ಎಂಬ ಶಾಸಕ ರಮೇಶ ಜಾರಕಿಹೊಳಿ ಹೇಳಿಕೆಗೆ ಪ್ರತಿಕ್ರಿಯಿಸಿದ ಡಿಕೆಶಿ, ‘ಯಾರು ಯಾರನ್ನೂ ಸೋಲಿಸಿದರು ಎಂಬುದನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೇ ಹೇಳಬೇಕು. ಬಿಜೆಪಿ ಸ್ವಯಂಕೃತ ಅಪರಾಧ ಮಾಡಿಕೊಂಡಿದೆ’ ಎಂದು ಉತ್ತರಿಸಿದರು.

‘ಈ ಚುನಾವಣೆಯಲ್ಲಿ ರಾಷ್ಟ್ರೀಯ ಪಕ್ಷಗಳು ಹಣ ಬಲದಿಂದ ಗೆದ್ದಿವೆ’ ಎಂಬ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್‌.ಡಿ. ಕುಮಾರಸ್ವಾಮಿ ಹೇಳಿಕೆಗೆ, ‘ಒಟ್ಟಿನಲ್ಲಿ ಒಂದು ಬಲ ಇದೆಯಲ್ಲ’ ಎಂದು ಪ್ರತಿಕ್ರಿಯಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.