ಚಿತ್ರದುರ್ಗ: ಬಸವ ಜಯಂತಿಯ ದಿನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಸಿದ್ದರಾಮಯ್ಯ ಅವರು ನುಡಿದಂತೆ ನಡೆದಿದ್ದಾರೆ. ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಘೋಷಿಸಿದ ಶೇ 95ರಷ್ಟು ಭರವಸೆ ಈಡೇರಿಸಿದ್ದಾರೆ. ಈ ಕುರಿತು ಬಿಜೆಪಿ ಬಹಿರಂಗ ಚರ್ಚೆಗೆ ಬರಲಿ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸವಾಲು ಹಾಕಿದರು.
ಸಿದ್ದರಾಮಯ್ಯ ಕುರಿತು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಗುರುವಾರ ಚಿತ್ರದುರ್ಗದಲ್ಲಿ ಪ್ರತಿಕ್ರಿಯೆ ನೀಡಿದ ಶಿವಕುಮಾರ್ ಅವರು ಸಿದ್ದರಾಮಯ್ಯ ಆಡಳಿತದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.
‘ಸಿದ್ದರಾಮಯ್ಯ ಅವರು ಕೊಟ್ಟ ಮಾತಿಗೆ ತಪ್ಪಿಲ್ಲ. ಅವರ ಅಧಿಕಾರವಧಿಯಲ್ಲಿ ಉತ್ತಮ ಆಡಳಿತವನ್ನೇ ನೀಡಿದ್ದಾರೆ. ಬಿಜೆಪಿಯಲ್ಲಿ ಅಧಿಕಾರಕ್ಕೆ ನಡೆಯುತ್ತಿರುವುದು ಮ್ಯೂಸಿಕಲ್ ಚೇರ್ ಅಲ್ಲವೇ’ ಎಂದು ಪ್ರಶ್ನಿಸಿದರು.
‘ಇಂಧನ ಬೆಲೆ ಏರಿಕೆ ವಿರುದ್ಧ ಮೊದಲ ಹಂತದ ಪ್ರತಿಭಟನೆ ನಡೆದಿದೆ. ಬೆಲೆ ಇಳಿಕೆಯಾಗದಿದ್ದರೆ ಜನಸಾಮಾನ್ಯರ ಬದುಕು ಇನ್ನಷ್ಟು ದುರ್ಬರವಾಗಲಿದೆ. ಮುಂದಿನ ಹೋರಾಟದ ರೂಪುರೇಷೆಯ ಬಗ್ಗೆ ರಾಷ್ಟ್ರಮಟ್ಟದಲ್ಲಿಯೂ ಚರ್ಚೆ ನಡೆಯುತ್ತಿದೆ. ರಾಜ್ಯದಲ್ಲಿ ಪಕ್ಷದ ಹಿರಿಯ ಮುಖಂಡರ ಸಭೆ ಕರೆಯಲಾಗಿದೆ. ತಾರ್ಕಿಕ ಅಂತ್ಯ ಕಾಣುವವರೆಗೆ ಹೋರಾಟ ಮುಂದುವರಿಯಲಿದೆ’ ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯೆ ನೀಡಿದರು.
‘ಕೋವಿಡ್ ಬಳಿಕ ಹಲವು ಸಮುದಾಯಗಳು ಸಂಕಷ್ಟಕ್ಕೆ ಸಿಲುಕಿವೆ. ಲಂಬಾಣಿ, ನೇಕಾರ, ಕಾಡುಗೊಲ್ಲ ಸೇರಿ ಹಲವು ಜನಾಂಗದ ಜನರಿಗೆ ಸಂಕಷ್ಟ ಎದುರಾಗಿದೆ. ಈ ಜನರ ಬಗ್ಗೆ ಸರ್ಕಾರಕ್ಕೆ ಕಾಳಜಿ ಇಲ್ಲ. ಗ್ರಾಮೀಣ ಪ್ರದೇಶದ ಜನರ ಸಂಕಷ್ಟ ಆಲಿಸಲು ಹಳ್ಳಿ, ತಾಂಡ, ಹಾಡಿಗಳಿಗೆ ಭೇಟಿ ನೀಡಲಾಗುತ್ತಿದೆ’ ಎಂದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.