ಬೆಂಗಳೂರು: ಪರಿಶಿಷ್ಟ ಜಾತಿಯ ಎಡಗೈ ಸಮುದಾಯಕ್ಕೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸ್ಥಾನ ನೀಡುವಂತೆ ಕಾಂಗ್ರೆಸ್ ಮುಖಂಡ ಎಚ್. ಆಂಜನೇಯ ಸೇರಿದಂತೆ ಎಡಗೈ ಸಮುದಾಯದ ನಾಯಕರು, ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಅವರಿಗೆ ಮನವಿ ಸಲ್ಲಿಸಿದರು.
ಕುಮಾರಕೃಪಾ ಅತಿಥಿಗೃಹದಲ್ಲಿ ಸುರ್ಜೆವಾಲ ಅವರನ್ನು ಭೇಟಿಯಾದ ಆಂಜನೇಯ, ರಾಜ್ಯಸಭೆ ಸದಸ್ಯ ಎಲ್. ಹನುಮಂತಯ್ಯ, ವಿಧಾನಪರಿಷತ್ ಸದಸ್ಯ ಆರ್.ಬಿ. ತಿಮ್ಮಾಪೂರ ಈ ಮನವಿ ಮಾಡಿದರು.
ಬಳಿಕ ಮಾತನಾಡಿದ ಆಂಜನೇಯ, ‘ರಾಜ್ಯದಲ್ಲಿ ಪರಿಶಿಷ್ಟ ಜಾತಿಯಲ್ಲಿ ನಮ್ಮದು ಪ್ರಬಲ ಸಮುದಾಯ. ಸುಮಾರು 60 ಲಕ್ಷ ಜನರಿದ್ದೇವೆ. ಹೀಗಾಗಿ ಕಾರ್ಯಾಧ್ಯಕ್ಷ ಸ್ಥಾನ ಕೇಳಿದ್ದೇವೆ. ಎಲ್ಲ ಸಮುದಾಯಗಳಿಗೂ ಅವಕಾಶ ಕೊಟ್ಟಿದ್ದೀರಿ. ನಮಗೂ ಕೊಡಿ. ನಮ್ಮ ಸಮುದಾಯ ಹಿಂದಿನಿಂದಲೂ ಕಾಂಗ್ರೆಸ್ ಬೆಂಬಲಕ್ಕೆ ನಿಂತಿದೆ ಎಂದು ಮನವರಿಕೆ ಮಾಡಿದ್ದೇವೆ’ ಎಂದರು.
‘ಸಮುದಾಯದ ಯಾರಿಗೆ ಬೇಕಾದರೂ ಅವಕಾಶ ಕೊಡಿ. ನಾಲ್ಕೈದು ಮಂದಿ ಆಕಾಂಕ್ಷಿಗಳಿದ್ದೇವೆ. ಅಧಿಕಾರಕ್ಕೆ ತರಲು ಪಕ್ಷವನ್ನು ಸಜ್ಜುಗೊಳಿಸಬೇಕಿದೆ ಎಂಬ ನಮ್ಮ ಮನವಿಗೆ ಸುರ್ಜೇವಾಲ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ’ ಎಂದೂಹೇಳಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.