ಕರ್ನಾಟಕ ಪರೀಕ್ಷಾ ಪ್ರಾಧಿಕಾರ
ಬೆಂಗಳೂರು: ಕರ್ನಾಟಕ ವಿದ್ಯುತ್ ನಿಗಮ ನಿಯಮಿತದ (ಕೆಪಿಸಿಎಲ್) 404 ಸಹಾಯಕ ಎಂಜಿನಿಯರ್ (ಎ.ಇ) ಮತ್ತು ಕಿರಿಯ ಎಂಜಿನಿಯರ್ (ಜೆ.ಇ) ನೇಮಕಾತಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ 2024ರ ಮೇ 8ರಂದು ಪ್ರಕಟಿಸಿದ್ದ ಆಯ್ಕೆ ಪಟ್ಟಿ ರದ್ದುಗೊಳಿಸಿರುವ ಹೈಕೋರ್ಟ್, ಶೀಘ್ರವೇ ಮರು ಪರೀಕ್ಷೆ ನಡೆಸುವಂತೆ ಕೆಪಿಸಿಎಲ್ ಹಾಗೂ ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೆ (ಕೆಇಎ) ನಿರ್ದೇಶಿಸಿದೆ.
ಉತ್ತರ ಪತ್ರಿಕೆಗಳ ಮೌಲ್ಯಮಾಪನದಲ್ಲಿನ ಋಣಾತ್ಮಕ ಅಂಕಗಳ ಕುರಿತಂತೆ ಹೊರಡಿಸಲಾದ ಆದೇಶವನ್ನು ಪ್ರಶ್ನಿಸಿ ಅಭ್ಯರ್ಥಿಗಳು ಹೈಕೋರ್ಟ್ನಲ್ಲಿ ರಿಟ್ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯನ್ನು ಏಕಸದಸ್ಯ ನ್ಯಾಯಪೀಠ ತಿರಸ್ಕರಿಸಿತ್ತು.
ಏಕಸದಸ್ಯ ನ್ಯಾಯಪೀಠದ ಈ ಆದೇಶ ಪ್ರಶ್ನಿಸಿ ಬೆಂಗಳೂರಿನ ಎನ್.ನವೀನ್ ಕುಮಾರ್ ಸೇರಿದಂತೆ ನಾಲ್ವರು ಸಲ್ಲಿಸಿದ್ದ ರಿಟ್ ಮೇಲ್ಮನವಿ ವಿಚಾರಣೆ ನಡೆಸಿ ಕಾಯ್ದಿರಿಸಿದ್ದ ತೀರ್ಪನ್ನು ಮುಖ್ಯ ನ್ಯಾಯಮೂರ್ತಿ ಎನ್.ವಿ.ಅಂಜಾರಿಯಾ ನೇತೃತ್ವದ ವಿಭಾಗೀಯ ನ್ಯಾಯಪೀಠ ಬುಧವಾರ ಪ್ರಕಟಿಸಿದೆ.
‘2024ರ ಫೆಬ್ರುವರಿ 18ರಂದು ನಡೆಸಲಾದ ಪರೀಕ್ಷೆಗೆ ಹಾಜರಾದ ಎಲ್ಲ ಅಭ್ಯರ್ಥಿಗಳಿಗೆ ಮರು ಪರೀಕ್ಷೆ ನಡೆಸಬೇಕು ಮತ್ತು ಒಂದು ವೇಳೆ ಋಣಾತ್ಮಕ ಅಂಕ ಪದ್ಧತಿ ಇದ್ದರೆ ಈ ಬಗ್ಗೆ ಅಭ್ಯರ್ಥಿಗಳಿಗೆ ಮುಂಚಿತವಾಗಿಯೇ ಮಾಹಿತಿ ನೀಡಬೇಕು’ ಎಂದು ನ್ಯಾಯಪೀಠ, ಕೆಪಿಸಿಎಲ್ ಹಾಗೂ ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೆ ಸೂಚಿಸಿದೆ.
ಪ್ರಕರಣವೇನು?: ಸಿವಿಲ್, ಮೆಕ್ಯಾನಿಕಲ್ ಹಾಗೂ ಎಲೆಕ್ಟ್ರಿಕಲ್ ಎಂಜಿನಿಯರಿಂಗ್ ವಿಭಾಗಗಳಲ್ಲಿನ ಎ.ಇ ಹಾಗೂ ಜೆ.ಇ ಸೇರಿದಂತೆ 404 ಹುದ್ದೆಗಳ ಭರ್ತಿಗೆ ಕೆಪಿಸಿಎಲ್ 2017ರ ಆಗಸ್ಟ್ 3ರಂದು ಅಧಿಸೂಚನೆ ಹೊರಡಿಸಿತ್ತು. ಇದಕ್ಕಾಗಿ ತಾಂತ್ರಿಕ ಹಾಗೂ ಕನ್ನಡ ಪತ್ರಿಕೆಗಳ ಪರೀಕ್ಷೆಯನ್ನು 2018ರ ಜನವರಿಯಲ್ಲಿ ನಡೆಸಲಾಗಿತ್ತು.
ಏತನ್ಮಧ್ಯೆ, ಕೆಪಿಸಿಎಲ್ 2018ರಲ್ಲಿ ನಡೆಸಿದ ಎಲ್ಲ ಪರೀಕ್ಷೆಗಳನ್ನು ರದ್ದುಗೊಳಿಸಿ ಹೊಸದಾಗಿ ನೇಮಕಾತಿ ಪರೀಕ್ಷೆಗಳನ್ನು ನಡೆಸುವ ಹೊಣೆಯನ್ನು ಕೆಇಎ ಹೆಗಲಿಗೆ ವಹಿಸಲಾಗಿತ್ತು.
ಇದರನ್ವಯ ಕೆಇಎ, 2024ರ ಫೆಬ್ರುವರಿಯಲ್ಲಿ ಪರೀಕ್ಷೆಗಳನ್ನು ನಡೆಸಿತ್ತು. ಆಗ ಕನ್ನಡ ಪ್ರಶ್ನೆಪತ್ರಿಕೆಗೆ 150 ಅಂಕಗಳನ್ನು ನಿಗದಿಪಡಿಸಲಾಗಿತ್ತು. ಇದನ್ನು ಪ್ರಶ್ನಿಸಿ ಕೆಲವರು ಹೈಕೋರ್ಟ್ ಮೆಟ್ಟಿಲೇರಿದ್ದರು. ಆಗ ಹೊಸದಾಗಿ ಪರೀಕ್ಷೆ ನಡೆಸಿ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟಿಸಲಾಗಿತ್ತು. ಮತ್ತೊಂದು ಸುತ್ತಿನ ಕಾನೂನು ಹೋರಾಟದ ಬಳಿಕ ಪರಿಷ್ಕೃತ ಆಯ್ಕೆಪಟ್ಟಿ ಪ್ರಕಟಿಸಲಾಗಿತ್ತು.
‘ನೇಮಕಾತಿ ಹಲವು ವರ್ಷಗಳಿಂದ ನನೆಗುದಿಗೆ ಬಿದ್ದಿದೆ’ ಎನ್ನುವ ಕಾರಣಕ್ಕೆ ವಿಭಾಗೀಯ ನ್ಯಾಯಪೀಠ 2023ರಲ್ಲಿ, ತಾತ್ಕಾಲಿಕ ನೇಮಕಾತಿ ಆದೇಶ ನೀಡುವಂತೆ ಮಧ್ಯಂತರ ಆದೇಶ ಹೊರಡಿಸಿದ್ದನ್ನು ಇಲ್ಲಿ ಸ್ಮರಿಸಬಹುದು.
ಕೆಪಿಸಿಎಲ್ನ ಖಾಲಿ ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಬಿದ್ದು ಎಂಟು ವರ್ಷಗಳಾಗಿವೆ. ಕೆಪಿಸಿಎಲ್ನಲ್ಲಿ ಖಾಲಿ ಇದ್ದ ಸಿವಿಲ್, ಎಲೆಕ್ಟ್ರಿಕಲ್, ಎಲೆಕ್ಟ್ರಾನಿಕ್ಸ್, ಆಟೊಮೊಬೈಲ್, ಮೆಕ್ಯಾನಿಕಲ್ ವಿಭಾಗಗಳ ಸಹಾಯಕ ಎಂಜಿನಿಯರ್, ಕಿರಿಯ ಎಂಜಿನಿಯರ್ ಹಾಗೂ ರಸಾಯನಶಾಸ್ತ್ರಜ್ಞ, ರಾಸಾಯನಿಕ ಮೇಲ್ವಿಚಾರಕರ ಹುದ್ದೆಗಳ ಭರ್ತಿಗೆ 2018ರಲ್ಲಿ ನಡೆದಿದ್ದ ಪರೀಕ್ಷೆಯನ್ನು ಪರೀಕ್ಷಾ ಅಕ್ರಮ, ಪ್ರಶ್ನೆಪತ್ರಿಕೆ ಸೋರಿಕೆ ಮೊದಲಾದ ವಿಚಾರಕ್ಕೆ ಕೋರ್ಟ್ ರದ್ದು ಮಾಡಿತ್ತು. ಕೋರ್ಟ್ ಆದೇಶದಂತೆ ಮರು ಪರೀಕ್ಷೆ ನಡೆಸುವುದಾಗಿ 2018ರ ಜೂನ್ನಲ್ಲೇ ಕೆಪಿಸಿಎಲ್ ಅಭ್ಯರ್ಥಿಗಳಿಗೆ ಭರವಸೆ ನೀಡಿದರೂ ಆರು ವರ್ಷಗಳ ಕಾಲಹರಣ ಮಾಡಿತ್ತು. ಅಂತಿಮವಾಗಿ 2024ರ ಫೆಬ್ರುವರಿಯಲ್ಲಿ 622 ಹುದ್ದೆಗಳ ನೇಮಕಾತಿಗೆ ಮರು ಪರೀಕ್ಷೆ ನಡೆಸಲಾಗಿತ್ತು.
ಅಧಿಸೂಚನೆಯಲ್ಲಿ ಇಲ್ಲದಿದ್ದರೂ ಮರು ಪರೀಕ್ಷೆಯಲ್ಲಿ ಋಣಾತ್ಮಕ ಅಂಕಗಳನ್ನು ಅನುಸರಿಸಿದ್ದನ್ನು ಪ್ರಶ್ನಿಸಿ ಕೆಲವರು ಮತ್ತೆ ಕೋರ್ಟ್ ಮೊರೆ ಹೋಗಿದ್ದರು. ಈಗ 404 ಸಹಾಯಕ ಎಂಜಿನಿಯರ್ (ಎ.ಇ) ಮತ್ತು ಕಿರಿಯ ಎಂಜಿನಿಯರ್ (ಜೆ.ಇ) ನೇಮಕಾತಿ ಪಟ್ಟಿ ರದ್ದಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.