ಬೆಂಗಳೂರು: 2015ನೇ ಸಾಲಿನ 428 ಗೆಜೆಟೆಡ್ ಪ್ರೊಬೇಷನರಿ ಹುದ್ದೆಗಳ ನೇಮಕಾತಿಗೆ ನಡೆದ ಕನ್ನಡ ಕಡ್ಡಾಯ ಪರೀಕ್ಷೆಯ ಉತ್ತರ ಪತ್ರಿಕೆಯಲ್ಲಿ ಪರೀಕ್ಷಾ ನಿಯಮ ಉಲ್ಲಂಘಿಸಿದ 129 ಅಭ್ಯರ್ಥಿಗಳನ್ನು ಮುಖ್ಯಪರೀಕ್ಷೆಯ ಪಟ್ಟಿಯಿಂದ ಕೈ ಬಿಡಲು ಕರ್ನಾಟಕ ಲೋಕ ಸೇವಾ ಆಯೋಗ (ಕೆಪಿಎಸ್ಸಿ) ನಿರ್ಧರಿಸಿದೆ.
ಈ ಅಭ್ಯರ್ಥಿಗಳನ್ನು ಕೈ ಬಿಟ್ಟು 1:5 ಅನುಪಾತದಲ್ಲಿ ವ್ಯಕ್ತಿತ್ವ ಪರೀಕ್ಷೆಗೆ ಆಯ್ಕೆಯಾದವರ ಪರಿಷ್ಕೃತ ಪಟ್ಟಿಯನ್ನು ಇದೇ 9ರ ಒಳಗೆ ಸಿದ್ಧಪಡಿಸಲು ಕೂಡಾ ತೀರ್ಮಾನಿಸಲಾಗಿದೆ. ಅಲ್ಲದೆ, ಅಂತಿಮ ಆಯ್ಕೆಗಾಗಿ ಇದೇ 29ರಿಂದ ವ್ಯಕ್ತಿತ್ವ ಪರೀಕ್ಷೆ (ಸಂದರ್ಶನ) ನಡೆಸಲು ಕೂಡಾ ಕೆಪಿಎಸ್ಸಿ ತಾತ್ಕಾಲಿಕ ದಿನ ನಿಗದಿಪಡಿಸಿದೆ ಎಂದು ಗೊತ್ತಾಗಿದೆ.
ಪರೀಕ್ಷಾ ನಿಯಮ ಉಲ್ಲಂಘಿಸಿದ ಬಗ್ಗೆ ‘ಪ್ರಜಾವಾಣಿ’ ಇತ್ತೀಚೆಗೆ ವರದಿ ಮಾಡಿತ್ತು.
ಈ ಮಧ್ಯೆ, ಮುಖ್ಯ ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡು ಹಲವು ತಿಂಗಳು ಕಳೆದರೂ ವ್ಯಕ್ತಿತ್ವ ಪರೀಕ್ಷೆ ನಡೆಸಲು ವಿಳಂಬ ಮಾಡುತ್ತಿರುವುದನ್ನು ಪ್ರತಿಭಟಿಸಿ ಬುಧವಾರ (ಜು. 3) ಕೆಪಿಎಸ್ಸಿ ಕಚೇರಿ ಎದುರು ಉಪವಾಸ ಸತ್ಯಾಗ್ರಹ ನಡೆಸಲು ಬಿಜೆಪಿ ಶಾಸಕ ಸುರೇಶ್ ಕುಮಾರ್ ನಿರ್ಧರಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.