ಬೆಂಗಳೂರು: ಎರಡು ವರ್ಷಗಳ ಹಿಂದೆ ಪರೀಕ್ಷೆ ಬರೆದ ಅಭ್ಯರ್ಥಿಗಳು ಫಲಿತಾಂಶವನ್ನು ಬಿಡುಗಡೆ ಮಾಡಬೇಕೆಂದು ಒತ್ತಾಯಿಸಿ ಉದ್ಯೋಗ ಸೌಧದ ಮುಂದೆ ಪ್ರತಿಭಟನೆ ನಡೆಸಿದರು .
ರಾಜ್ಯ ಸರ್ಕಾರದ ನಾನಾ ಇಲಾಖೆಗಳಲ್ಲಿ ಖಾಲಿ ಇರುವ ವಿವಿಧ ವೃಂದಗಳ 3,000ಕ್ಕೂ ಹೆಚ್ಚು ಹುದ್ದೆಗಳಿಗೆ ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್ಸಿ) ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆ ಬರೆದು ಫಲಿತಾಂಶಕ್ಕಾಗಿ ಕಾಯುತ್ತಿರುವ ಲಕ್ಷಾಂತರ ಅಭ್ಯರ್ಥಿಗಳ ಆಕ್ರೋಶ ಕಟ್ಟೆಯೊಡೆದಿದ್ದು, ಉದ್ಯೋಗಾಕಾಂಕ್ಷಿಗಳು ಕೆಪಿಎಸ್ಸಿ ವಿರುದ್ಧವೇ ತಿರುಗಿ ಬಿದ್ದಿದ್ದಾರೆ.
ಗೆಜೆಟೆಡ್ ಪ್ರೊಬೇಷನರಿ (ಜಿಪಿ) 106 ಹುದ್ದೆಗಳ ನೇಮಕಾತಿಯ ಮುಖ್ಯಪರೀಕ್ಷೆ, ದ್ವಿತೀಯ ದರ್ಜೆ ಸಹಾಯಕ (ಎಸ್ಡಿಎ) 1,323, ಲೋಕೋಪಯೋಗಿ ಇಲಾಖೆಯ (ಪಿಡಬ್ಲ್ಯುಡಿ) ಕಿರಿಯ ಎಂಜಿನಿಯರ್ 330, ಸಹಾಯಕ ಎಂಜಿನಿಯರ್ 660, ಗ್ರೂಪ್ ‘ಸಿ’ (ತಾಂತ್ರಿಕೇತರ) 387, ಸಹಾಯಕ ಅರಣ್ಯ ಸಂರಕ್ಷಾಣಾಧಿಕಾರಿ (ಎಸಿಎಫ್) 16 ಹೀಗೆ ವಿವಿಧ ಹುದ್ದೆಗಳ ನೇಮಕಾತಿಗೆ ಪರೀಕ್ಷೆ ನಡೆದು ಹಲವು ತಿಂಗಳುಗಳೇ ಕಳೆದಿವೆ. ಆದರೆ, ಕೆಪಿಎಸ್ಸಿ ಮಾತ್ರ ಫಲಿತಾಂಶ ಪ್ರಕಟಿಸುವ ಲಕ್ಷಣ ಕಾಣುತ್ತಿಲ್ಲ. ಇದರಿಂದ ಅಭ್ಯರ್ಥಿಗಳು ಕಂಗೆಟ್ಟಿದ್ದಾರೆ.
ಫಲಿತಾಂಶ ವಿಳಂಬದಿಂದ ಹತಾಶೆಗೊಂಡಿರುವ ಅಭ್ಯರ್ಥಿಗಳು ಸೋಮವಾರ (ಜುಲೈ 25) ‘ಉದ್ಯೋಗ ಸೌಧ’ದ (ಕೆಪಿಎಸ್ಸಿ ಪ್ರವೇಶ ದ್ವಾರ) ಮುಂಭಾಗದಲ್ಲಿ ಪ್ರತಿಭಟನೆ ನಡೆಸಲಿದ್ದಾರೆ. ಈಗಾಗಲೇ ನಡೆಸಿರುವ ಪರೀಕ್ಷೆಗಳ ಫಲಿತಾಂಶ ತಕ್ಷಣ ಪ್ರಕಟಿಸಬೇಕು, ಎರಡು ವರ್ಷಗಳಿಂದೀಚೆಗೆ ಸರ್ಕಾರ ವಹಿಸಿದ ಹಲವು ಹುದ್ದೆಗಳ ನೇಮಕಾತಿಗೆ ತ್ವರಿತವಾಗಿ ಅಧಿಸೂಚನೆ ಹೊರಡಿಸಬೇಕು, ಕೆಪಿಎಸ್ಸಿ ಸುಧಾರಣೆಗೆ ರಚಿಸಿದ್ದ ಪಿ.ಸಿ. ಹೋಟಾ ಸಮಿತಿಯ ಶಿಫಾರಸು ಅನುಷ್ಠಾನಗೊಳಿಸಬೇಕು, ಯುಪಿಎಸ್ಸಿ ಮಾದರಿಯಲ್ಲಿ ವಾರ್ಷಿಕ ಪರೀಕ್ಷಾ ವೇಳಾಪಟ್ಟಿ ಬಿಡುಗಡೆ ಮಾಡಬೇಕು ಎಂದು ಉದ್ಯೋಗಾಕಾಂಕ್ಷಿಗಳು ಆಗ್ರಹಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.