ಪ್ರಿಯಾಂಕ್ ಖರ್ಗೆ
ಮಂಗಳೂರು: ‘ಕೆಪಿಎಸ್ಸಿ ಇರುವವರೆಗೆ ರಾಜ್ಯದ ಜನರಿಗೆ ಉದ್ಯೋಗ ಸಿಗುವುದಿಲ್ಲ. ನನಗೆ ಅವಕಾಶ ಕೊಟ್ಟರೆ ಕೆಪಿಎಸ್ಸಿ ವಿಸರ್ಜಿಸಲೂ ಸಿದ್ಧ’ ಎಂದು ಎಲೆಕ್ಟ್ರಾನಿಕ್ಸ್, ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ಬುಧವಾರ ಆಕ್ರೋಶ ವ್ಯಕ್ತಪಡಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಪಂಚಾಯತ್ ರಾಜ್ ಇಲಾಖೆಯ ಸಿಬ್ಬಂದಿ ನೇಮಕಾತಿ ಹೊಣೆಯನ್ನು ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್ಸಿ) ಹಾಗೂ ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೆ (ಕೆಇಎ) ಹಂಚಿಕೆ ಮಾಡಿದ್ದೆವು. ಪ್ರಕ್ರಿಯೆಯನ್ನು ಕೆಇಎ ಪೂರ್ಣಗೊಳಿಸಿದೆ. ಕೆಪಿಎಸ್ಸಿ ಇನ್ನೂ ಪೂರ್ಣಗೊಳಿಸಿಲ್ಲ. ಸಾಂವಿಧಾನಿಕ ಸಂಸ್ಥೆ ಎಂಬ ಕಾರಣಕ್ಕೆ ಅದರ ಪ್ರಕ್ರಿಯೆಯಲ್ಲಿ ಮಧ್ಯಪ್ರವೇಶ ಮಾಡುವುದಕ್ಕೂ ಆಗುತ್ತಿಲ್ಲ’ ಎಂದು ಅಸಮಾಧಾನ ವ್ಯಕ್ತಪಡಿಸಿದರು.
‘ಖಾಲಿ ಇರುವ 2.5 ಲಕ್ಷ ಹುದ್ದೆಗಳ ಭರ್ತಿಗೆ ಸರ್ಕಾರ ಬದ್ಧವಾಗಿದೆ. ಒಳ ಮೀಸಲಾತಿ ಸಲುವಾಗಿ ನೇಮಕಾತಿ ಪ್ರಕ್ರಿಯೆ ತಡವಾಗಿದೆ’ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
ಮಂಗಳೂರಿನಲ್ಲಿ ಟೆಕ್ನೊ ಪಾರ್ಕ್ಗೆ ಅನುಮೋದನೆ: ‘ಮಂಗಳೂರಿನ ಅತಿ ದೊಡ್ಡ ಟೆಕ್ನಾಲಜಿ ಪಾರ್ಕ್ ಸ್ಥಾಪಿಸುವ ಪ್ರಸ್ತಾವವಿದ್ದು, ಇದಕ್ಕೆ ಸಚಿವ ಸಂಪುಟವು ಶೀಘ್ರವೇ ಅನುಮೋದನೆ ನೀಡಲಿದೆ’ ಎಂದು ಪ್ರಿಯಾಂಕ್ ಖರ್ಗೆ ತಿಳಿಸಿದರು.
ಕರ್ನಾಟಕ ಡಿಜಿಟಲ್ ಎಕಾನಮಿ ಮಿಷನ್ನ (ಕೆಡಿಇಎಂ) ‘ಬಿಯಾಂಡ್ ಬೆಂಗಳೂರು’ ಕಾರ್ಯಕ್ರಮದಡಿ ಇಲ್ಲಿ ಏರ್ಪಡಿಸಿದ್ದ ‘ಮಂಗಳೂರು ಟೆಕ್ನೊವಾಂಜಾ’ದ ಐದನೇ ಆವೃತ್ತಿಯಲ್ಲಿ ಪ್ರಿಯಾಂಕ್ ಖರ್ಗೆ ಮಾತನಾಡಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.