ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್ಸಿ) ನಡೆಸುತ್ತಿರುವ 2023-24ನೇ 384 ಗೆಜೆಟೆಡ್ ಪ್ರೊಬೇಷನರಿ ಹುದ್ದೆಗಳ ನೇಮಕಾತಿ ಪ್ರಕ್ರಿಯೆ ಮುಂದುವರಿಸಲು ಅನುವು ಮಾಡಿಕೊಟ್ಟಿರುವ ಕರ್ನಾಟಕ ರಾಜ್ಯ ಆಡಳಿತ ನ್ಯಾಯಮಂಡಳಿ (ಕೆಎಸ್ಎಟಿ) ಮುಖ್ಯ ಪರೀಕ್ಷೆಗೆ ಅರ್ಜಿ ಭರ್ತಿ ಮಾಡಲು ಅವಕಾಶ ಕಲ್ಪಿಸಿದೆ.
ಈ ಸಂಬಂಧ ಡಿ.ಪವಿತ್ರಾ ಸೇರಿದಂತೆ ಇತರೆ 51 ಅಭ್ಯರ್ಥಿಗಳು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಕೆಎಸ್ಎಟಿ ನ್ಯಾಯಾಂಗ ಸದಸ್ಯ ಎಸ್.ವೈ.ವಟವಟಿ ಮತ್ತು ಆಡಳಿತ ಸದಸ್ಯೆ ಅಮಿತಾ ಪ್ರಸಾದ್ ಅವರಿದ್ದ ಪೀಠವು ಈ ಕುರಿತಂತೆ ಆದೇಶಿಸಿದೆ.
ಕಳೆದ ವಾರವಷ್ಟೇ ಮುಖ್ಯ ಪರೀಕ್ಷೆಯ ಅಧಿಸೂಚನೆಯನ್ನು ಅಮಾನತಿನಲ್ಲಿರಿಸಿದ್ದ ಕೆಎಸ್ಎಟಿ, ಆ ಆದೇಶವನ್ನು ಮಾರ್ಪಾಡು ಮಾಡಿ ಪ್ರಕ್ರಿಯೆ ಮುಂದುವರಿಸಲು ಅವಕಾಶ ಮಾಡಿಕೊಟ್ಟಿದೆ. ಅಲ್ಲದೆ, ಅರ್ಜಿಯು ಅಂತಿಮ ಆದೇಶಕ್ಕೆ ಒಳಪಟ್ಟಿರಲಿದೆ’ ಎಂದು ತಿಳಿಸಿದ್ದು ವಿಚಾರಣೆಯನ್ನು ಮಾರ್ಚ್ 3ಕ್ಕೆ ಮುಂದೂಡಿದೆ. ಈ ಆದೇಶದಿಂದಾಗಿ ಪೂರ್ವಭಾವಿ ಪರೀಕ್ಷೆಯಲ್ಲಿ 1:15ರಂತೆ ಮುಖ್ಯ ಪರೀಕ್ಷೆಗೆ ಆಯ್ಕೆಯಾದ ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಪ್ರಕ್ರಿಯೆ ಮುಂದುವರಿಸಲು ಅವಕಾಶ ದೊರೆತಂತಾಗಿದೆ.
‘ಪರೀಕ್ಷೆಯಲ್ಲಿ ಸುಮಾರು 59 ಪ್ರಶ್ನೆಗಳ ಅನುವಾದದಲ್ಲಿ ದೋಷ ಕಂಡುಬಂದಿವೆ. ಆದ್ದರಿಂದ, ಪರೀಕ್ಷೆ ರದ್ದುಗೊಳಿಸಬೇಕು’ ಎಂದು ಅಭ್ಯರ್ಥಿಗಳು ಕೆಎಸ್ಎಟಿ ಮೆಟ್ಟಿಲೇರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.