ಕಲಬುರ್ಗಿ: ಕರ್ನಾಟಕ ಲೋಕಸೇವಾ ಆಯೋಗದ ನೇಮಕಾತಿ ಪಟ್ಟಿಯಲ್ಲಿನ 124 ಅಭ್ಯರ್ಥಿಗಳ ನೇಮಕಾತಿ ಆದೇಶ ನೀಡುವಂತೆ ಕೆಪಿಸಿಸಿ ವಕ್ತಾರ,ಶಾಸಕ ಪ್ರಿಯಾಂಕ್ ಖರ್ಗೆ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ.
2019ರ ನವೆಂಬರ್ 13ರಂದು ಕರ್ನಾಟಕ ಲೋಕಸೇವಾ ಆಯೋಗ ಹೊರಡಿಸಿದ ಅಭ್ಯರ್ಥಿಗಳ ಆಯ್ಕೆಪಟ್ಟಿಯಲ್ಲಿ ಹೆಸರಿರುವ ವಿವಿಧ ಇಲಾಖೆಗಳ 661 ಅಭ್ಯರ್ಥಿಗಳ ಪೈಕಿ ನೇಮಕಾತಿ ಆದೇಶ ಕೊಡದ ಸರ್ಕಾರದ ಬೇರೆ ಬೇರೆ ಇಲಾಖೆಗಳ 124 ಅಭ್ಯರ್ಥಿಗಳಿಗೆ ಈ ಕೂಡಲೇ ನೇಮಕಾತಿ ಆದೇಶ ಕೊಡುವಂತೆ ಅವರು ಕೋರಿದ್ದಾರೆ.
ಈ ಕುರಿತು ಮುಖ್ಯಮಂತ್ರಿಯಡಿಯೂರಪ್ಪ ಅವರಿಗೆ ಹಾಗೂ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆದಿರುವ ಅವರು, ಕರ್ನಾಟಕ ಲೋಕಸೇವಾ ಆಯೋಗ ಶೀಘ್ರ ಲಿಪಿಗಾರರು ಹಾಗೂ ಬೆರಳಚ್ಚುಗಾರರ ಹುದ್ದೆ ನೇಮಕಾತಿಯಲ್ಲಿ ಉತ್ತೀರ್ಣರಾದ 661 ಅಭ್ಯರ್ಥಿಗಳ ಅಂತಿಮ ಆಯ್ಕೆ ಪಟ್ಟಿಯನ್ನು ದಿನಾಂಕ 13-11-2019 ರಂದು ಪ್ರಕಟಿಸಲಾಗಿತ್ತು.
ಆ ನಂತರ ಅಭ್ಯರ್ಥಿಗಳ ಸಿಂಧುತ್ವ ಹಾಗೂ 371(ಜೆ ) ಹಾಗೂ ಇತರೆ ದಾಖಲಾತಿಗಳನ್ನು ಪರಿಶೀಲಿಸಿ ನೇಮಕಾತಿ ಆದೇಶ ನೀಡಲಾಗಿ; 537 ಅಭ್ಯರ್ಥಿಗಳು ಮಾತ್ರ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಆದರೆ, ಸಾರಿಗೆ, ಅಂಗವಿಕಲ, ಸಹಕಾರ, ಪಶುಸಂಗೋಪನೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ, ರೇಷ್ಮೆ ಹಾಗೂ ತಾಂತ್ರಿಕ ಶಿಕ್ಷಣ ಇಲಾಖೆಗಳು ಉಳಿದ 124 ಅಭ್ಯರ್ಥಿಗಳಿಗೆ ಇಲ್ಲಿಯವರೆಗೂ ನೇಮಕಾತಿ ಆದೇಶ ನೀಡಿಲ್ಲ ಎಂದು ಪ್ರಿಯಾಂಕ್ ಖರ್ಗೆ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
ನೇಮಕಾತಿ ಪ್ರಕ್ರಿಯೆ ನಡೆದು 4 ವರ್ಷ ಕಳೆದಿದ್ದು ಯಾವುದೇ ಉದ್ಯೋಗ ಇಲ್ಲದ ಈ 124 ಅಭ್ಯರ್ಥಿಗಳು ತೀವ್ರ ಸಂಕಷ್ಟ ಎದುರಿಸುತ್ತಿದ್ದಾರೆ. ಬಡತನದ ಹಿನ್ನೆಲೆಯಿಂದ ಬಂದಿರುವ ಅಭ್ಯರ್ಥಿಗಳು ಕಷ್ಟಪಟ್ಟು ಅಭ್ಯಾಸ ಮಾಡಿ ಆಯೋಗದ ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದಾರೆ. ಆದರೆ, ನೇಮಕಾತಿ ಆದೇಶದ ವಿಳಂಬದಿಂದಾಗಿ ಕೈಗೆ ಬಂದ ತುತ್ತು ಬಾಯಿಗೆ ಬರದ ಸ್ಥಿತಿ ನಿರ್ಮಾಣವಾಗಿದೆ ಎಂದು ಹೇಳಿದ್ದಾರೆ.
ಸರ್ಕಾರ ಈ ಕೂಡಲೇ ಆ ಎಲ್ಲ ಅಭ್ಯರ್ಥಿಗಳಿಗೆ ನೇಮಕಾತಿ ಆದೇಶ ದೊರಕಿಸಿಕೊಡುವ ಮೂಲಕ ಬಡಕುಟುಂಬದ ಅಭ್ಯರ್ಥಿಗಳ ಬಾಳಿಗೆ ಬೆಳಕಾಗಬೇಕೆಂದು ಅವರು ಆಗ್ರಹಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.