ಬೆಂಗಳೂರು: 1998 ನೇ ಸಾಲಿನ ಗೆಜೆಟೆಡ್ ಪ್ರೊಬೇಷನರಿ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದ ಪ್ರಮಾದ
ದಲ್ಲಿ, ಪರಿಷ್ಕೃತ ಪಟ್ಟಿ ಪ್ರಕಾರ ಹುದ್ದೆ ಕಳೆದುಕೊಳ್ಳಲಿರುವ 36 ಅಧಿಕಾರಿಗಳಲ್ಲಿ ಏಳು ಜನ ಕೆಎಟಿ ಮೆಟ್ಟಿಲೇರಿದ್ದಾರೆ.
ಈ ಕುರಿತಂತೆ ಮೈಸೂರಿನ ಕೆ.ಬಿ. ಸಿದ್ದಲಿಂಗಸ್ವಾಮಿ ಸೇರಿದಂತೆ ಏಳು ಜನರು ಸಲ್ಲಿಸಿರುವ ಅರ್ಜಿಗಳನ್ನು ನ್ಯಾಯಮೂರ್ತಿ ಕೆ.ಭಕ್ತವತ್ಸಲ ಅವರಿದ್ದ ಏಕಸದಸ್ಯ ನ್ಯಾಯಪೀಠ ಸೋಮವಾರ ವಿಚಾರಣೆ ನಡೆಸಿತು.
‘ಅರ್ಜಿದಾರ ಅಧಿಕಾರಿಗಳ ವಜಾಕ್ಕೆ ಸಂಬಂಧಿಸಿದಂತೆ ಮುಂದಿನ ಎರಡು ವಾರಗಳವರೆಗೆ ಯಥಾಸ್ಥಿತಿ ಕಾಯ್ದುಕೊಳ್ಳುವಂತೆ’ ನ್ಯಾಯಪೀಠ ಸರ್ಕಾರಕ್ಕೆ ನಿರ್ದೇಶಿಸಿತು. ಪ್ರತಿವಾದಿಯಾದ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಮತ್ತು ಕೆಪಿಎಸ್ಸಿ ಕಾರ್ಯದರ್ಶಿಗೆ ನೋಟಿಸ್ ಜಾರಿಗೊಳಿಸಲು ಆದೇಶಿಸಲಾಗಿದ್ದು ಮುಂದಿನ ಎರಡು ವಾರಗಳಲ್ಲಿ ಆಕ್ಷೇಪಣೆ ಸಲ್ಲಿಸುವಂತೆ ಸೂಚಿಸಲಾಗಿದೆ.
ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲ ರಹಮತ್ ಉಲ್ಲಾ ಕೊತ್ವಾಲ್, ‘ಕೆಪಿಎಸ್ಸಿ ಕಾರ್ಯವ್ಯಾಪ್ತಿ ಆಯ್ಕೆ ನಡೆಸಿ ಸರ್ಕಾರಕ್ಕೆ ಪಟ್ಟಿ ಕಳುಹಿಸಿಕೊಡುವುದಷ್ಟೇ. ಅಂತಹ ಪಟ್ಟಿಯನ್ನು ರೀ–ಡೂ ಮಾಡುವ ಅಧಿಕಾರ ವ್ಯಾಪ್ತಿ ಕೆಪಿಎಸ್ಸಿಗೆ ಇಲ್ಲ. ಈಗಾಗಲೇ 13 ವರ್ಷ ಕೆಲಸ ಮಾಡಿರುವ ಅರ್ಜಿದಾರರನ್ನು ಅಮಾನತು ಮಾಡಿರುವುದು ಕಾನೂನು ಬಾಹಿರ’ ಎಂದು ವಾದ ಮಂಡಿಸಿದರು.
ಹೈಕೋರ್ಟ್ 2016ರ ಜೂನ್ 21ರಂದು ನೀಡಿದ್ದ ಆದೇಶದಂತೆ 1998ನೇ ಸಾಲಿನ ಗೆಜೆಟೆಡ್ ಪ್ರೊಬೇಷನರಿಯ 383 ಹುದ್ದೆಗಳ ಆಯ್ಕೆ ಪಟ್ಟಿಯನ್ನು ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್ಸಿ) ಪರಿಷ್ಕರಿಸಿತ್ತು. ಇದೇ ಆ. 22ರಂದು ರಾಜ್ಯಪತ್ರದಲ್ಲಿ ಪರಿಷ್ಕೃತ ಪಟ್ಟಿಯನ್ನು ಪ್ರಕಟಿಸಿತ್ತು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.