ಬೆಂಗಳೂರು: ಸಾರಿಗೆ ಇಲಾಖೆಯಲ್ಲಿನ ಮೋಟಾರು ವಾಹನ ಇನ್ಸ್ಪೆಕ್ಟರ್ (ಎಂವಿಐ) 129 ಹುದ್ದೆಗಳ ಭರ್ತಿಗೆ 2019ರ ಜುಲೈ 4ರಂದು ಪ್ರಕಟಿಸಿದ್ದ ಆಯ್ಕೆಪಟ್ಟಿಯನ್ನು ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್ಸಿ) ಶುಕ್ರವಾರ ಹಿಂಪಡೆದಿದೆ.
ಒಟ್ಟು 150 ಮೋಟಾರು ವಾಹನ ನಿರೀಕ್ಷಕರ ಹುದ್ದೆಗಳ ಭರ್ತಿಗೆ 2016ರ ಫೆಬ್ರುವರಿಯಲ್ಲಿ ಪ್ರಕ್ರಿಯೆ ಆರಂಭಿಸಲಾಗಿತ್ತು. 129 ಹುದ್ದೆಗಳಿಗೆ 2019ರ ಜುಲೈ 4ರಂದು ತಾತ್ಕಾಲಿಕ ಆಯ್ಕೆಪಟ್ಟಿ ಪ್ರಕಟಿಸಲಾಗಿತ್ತು. ಮರುದಿನವೇ ತಿರಸ್ಕೃತಗೊಂಡ ಅಭ್ಯರ್ಥಿಗಳ ಪಟ್ಟಿಯನ್ನೂ ಪ್ರಕಟಿಸಲಾಗಿತ್ತು.
ಒಂದು ವರ್ಷದ ಸೇವಾ ಅನುಭವ ಕಡ್ಡಾಯಗೊಳಿಸಿ ಆಯ್ಕೆಪಟ್ಟಿ ಪ್ರಕಟಿಸಿರುವುದನ್ನು ಪ್ರಶ್ನಿಸಿ ಕರ್ನಾಟಕ ಆಡಳಿತ ನ್ಯಾಯಮಂಡಳಿ ಹಾಗೂ ಹೈಕೋರ್ಟ್ನಲ್ಲಿ ಹಲವು ಅರ್ಜಿಗಳು ಸಲ್ಲಿಕೆಯಾಗಿದ್ದವು. ಈ ಎಲ್ಲ ಅರ್ಜಿಗಳನ್ನೂ ವಿಲೇವಾರಿ 2021 ಆಗಸ್ಟ್ 25ರಂದು ತೀರ್ಪು ನೀಡಿದ್ದ ಹೈಕೋರ್ಟ್, 2016ರ ಫೆಬ್ರುವರಿ 4ರಂದು ಹೊರಡಿಸಿದ್ದ ಅಧಿಸೂಚನೆಯ ಪ್ರಕಾರವೇ ನೇಮಕಾತಿ ಪ್ರಕ್ರಿಯೆಯನ್ನು ಅಂತಿಮಗೊಳಿಸುವಂತೆ ಆದೇಶಿಸಿತ್ತು.
ಹೈಕೋರ್ಟ್ ಆದೇಶದಂತೆ ಮೋಟಾರು ವಾಹನ ನಿರೀಕ್ಷಕರ ನೇಮಕಾತಿ ಪ್ರಕ್ರಿಯೆ ಕೈಗೊಳ್ಳಬೇಕಿರುವುದರಿಂದ 2019ರ ಜುಲೈ 4ರಂದು ಪ್ರಕಟಿಸಿರುವ ತಾತ್ಕಾಲಿಕ ಆಯ್ಕೆಪಟ್ಟಿ ಹಾಗೂ ಜುಲೈ 5ರಂದು ಹೊರಡಿಸಿದ್ದ ತಿರಸ್ಕೃತ ಅಭ್ಯರ್ಥಿಗಳ ಪಟ್ಟಿಯನ್ನು ಹಿಂಪಡೆಯಲಾಗಿದೆ ಎಂದು ಕೆಪಿಎಸ್ಸಿ ಕಾರ್ಯದರ್ಶಿ ಜಿ. ಸತ್ಯವತಿ ಶುಕ್ರವಾರ ಅಧಿಸೂಚನೆ ಹೊರಡಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.