ADVERTISEMENT

ಕೆಪಿಟಿಸಿಎಲ್, ಎಸ್ಕಾಂ: ಶೇ 20 ವೇತನ ಪರಿಷ್ಕರಣೆಗೆ ಒಪ್ಪಿಗೆ

​ಪ್ರಜಾವಾಣಿ ವಾರ್ತೆ
Published 16 ಮಾರ್ಚ್ 2023, 4:22 IST
Last Updated 16 ಮಾರ್ಚ್ 2023, 4:22 IST
   

ಬೆಂಗಳೂರು: ಕರ್ನಾಟಕ ವಿದ್ಯುತ್‌ ಪ್ರಸರಣ ನಿಗಮ ಮತ್ತು ವಿದ್ಯುತ್‌ ಸರಬರಾಜು ಕಂಪನಿಗಳ ನೌಕರರು ಹಾಗೂ ಅಧಿಕಾರಿಗಳ ವೇತನವನ್ನು ಈಗಿರುವ ವೇತನದ ಮೇಲೆ ಶೇ 20 ರಷ್ಟು ಪರಿಷ್ಕರಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ.

2022 ರ ಏಪ್ರಿಲ್‌ನಿಂದ ಅನ್ವಯವಾಗುವಂತೆ ವೇತನ ಪರಿಷ್ಕರಿಸಲು ಇಂಧನ ಸಚಿವ ವಿ.ಸುನಿಲ್‌ಕುಮಾರ್ ಅವರು ಇಲಾಖೆ ಕಾರ್ಯದರ್ಶಿಯವರಿಗೆ ಸೂಚಿಸಿದ್ದಾರೆ.

ವೇತನವನ್ನು ಶೇ 22 ರಷ್ಟು ಹೆಚ್ಚಳ ಮಾಡುವಂತೆ ಒತ್ತಾಯಿಸಿ ಗುರುವಾರದಿಂದ ರಾಜ್ಯದಾದ್ಯಂತ ಎಲ್ಲ ನೌಕರರು ಕರ್ತವ್ಯಕ್ಕೆ ಗೈರಾಗಿ ಪ್ರತಿಭಟನೆ ನಡೆಸಲು ನಿರ್ಧರಿಸಿದ್ದರು. ಈ ವಿಚಾರವಾಗಿ ಇಂಧನ ಸಚಿವ ವಿ. ಸುನಿಲ್‌ಕುಮಾರ್ ಅವರು ಕೆಪಿಟಿಸಿಎಲ್‌ ಒಕ್ಕೂಟದ ಅಧ್ಯಕ್ಷರು, ಪದಾಧಿಕಾರಿಗಳ ಜತೆಗೆ ಮಂಗಳವಾರ ಚರ್ಚೆ ನಡೆಸಿ, ಬಳಿಕ ಮುಖ್ಯಮಂತ್ರಿ ಯವರೊಂದಿಗೆ ಸಮಾಲೋಚನೆ ನಡೆಸಿ ವೇತನ ಪರಿಷ್ಕರಣೆಗೆ ಒಪ್ಪಿಗೆ
ಸೂಚಿಸಲಾಯಿತು.

ADVERTISEMENT

ಮುಷ್ಕರ ಕೈಬಿಟ್ಟ ಕೆಪಿಟಿಸಿಎಲ್‌ ನೌಕರರು: ನೌಕರರ ಬೇಡಿಕೆಗಳ ಕುರಿತು ಬುಧವಾರ ರಾತ್ರಿ ಕರ್ನಾಟಕ ವಿದ್ಯುತ್‌ ಪ್ರಸರಣ ನಿಗಮದ ನೌಕರರ ಸಂಘದ ಪದಾಧಿಕಾರಿಗಳು ಚರ್ಚೆ
ನಡೆಸಿದರು.

’ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಬೇಡಿಕೆಗಳನ್ನು ಈಡೇರಿಸುವುದಾಗಿ ಭರವಸೆ ನೀಡಿದ್ದಾರೆ. ಹೀಗಾಗಿ, ಗುರುವಾರ ಕರ್ತವ್ಯಕ್ಕೆ ಎಂದಿನಂತೆ ನೌಕರರು ಹಾಜರಾಗಲಿದ್ದಾರೆ‘ ಎಂದು ಸಂಘದ ಅಧ್ಯಕ್ಷ ಲಕ್ಷ್ಮಿಪತಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.