ADVERTISEMENT

ಕೃಷ್ಣಾ ಮೇಲ್ದಂಡೆ ಮೂರನೇ ಹಂತದ ಯೋಜನೆ: ಭೂಮಿಗೆ ದರ ನಿಗದಿ?

​ಪ್ರಜಾವಾಣಿ ವಾರ್ತೆ
Published 10 ಸೆಪ್ಟೆಂಬರ್ 2025, 16:13 IST
Last Updated 10 ಸೆಪ್ಟೆಂಬರ್ 2025, 16:13 IST
ಕೃಷ್ಣಾ ಮೇಲ್ದಂಡೆ ಮೂರನೇ ಹಂತದ ಯೋಜನೆ ಅನುಷ್ಠಾನ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಡಿ.ಕೆ.ಶಿವಕುಮಾರ್, ಎಚ್‌.ಕೆ.ಪಾಟೀಲ, ಆರ್.ಬಿ.ತಿಮ್ಮಾಪುರ ಭಾಗಿಯಾಗಿದ್ದರು
ಕೃಷ್ಣಾ ಮೇಲ್ದಂಡೆ ಮೂರನೇ ಹಂತದ ಯೋಜನೆ ಅನುಷ್ಠಾನ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಡಿ.ಕೆ.ಶಿವಕುಮಾರ್, ಎಚ್‌.ಕೆ.ಪಾಟೀಲ, ಆರ್.ಬಿ.ತಿಮ್ಮಾಪುರ ಭಾಗಿಯಾಗಿದ್ದರು   

ಬೆಂಗಳೂರು: ಕೃಷ್ಣಾ ಮೇಲ್ದಂಡೆ ಮೂರನೇ ಹಂತದ ಯೋಜನೆಗಾಗಿ ಸ್ವಾಧೀನಪಡಿಸಿಕೊಳ್ಳುವ ಭೂಮಿಗೆ ಗುರುವಾರ ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ದರ ನಿಗದಿಯಾಗುವ ಸಾಧ್ಯತೆ ಇದೆ.

ವಿಧಾನಸೌಧದ ಸಭಾಂಗಣದಲ್ಲಿ ಬುಧವಾರ ನಡೆದ ಸಭೆಯ ವೇಳೆ ಯೋಜನೆ ಅನುಷ್ಠಾನದ ಸಾಧ್ಯತೆಗಳ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಕಾನೂನು ಸಚಿವ ಎಚ್‌.ಕೆ.ಪಾಟೀಲ, ಅಬಕಾರಿ ಸಚಿವ ಆರ್‌.ಬಿ.ತಿಮ್ಮಾಪುರ ಜತೆಗೆ ಚರ್ಚಿಸಿದರು. ಜಲ ಸಂಪನ್ಮೂಲ ಇಲಾಖೆಯ ಅಧಿಕಾರಿಗಳು ಯೋಜನೆ ಕುರಿತಾದ ಮಾಹಿತಿಗಳನ್ನು ಸಭೆಯ ಮುಂದಿಟ್ಟರು.

ಜಲ ಸಂಪನ್ಮೂಲ ಸಚಿವರೂ ಆಗಿರುವ ಡಿ.ಕೆ.ಶಿವಕುಮಾರ್ ಅವರು, ಸಭೆಯ ನಂತರ ಸುದ್ದಿಗಾರರ ಜತೆ ಮಾತನಾಡಿ ಈ ಮಾಹಿತಿ ನೀಡಿದರು. ‘ದರ ನಿಗದಿ ಮತ್ತು ಭೂಸ್ವಾಧೀನ ಪ್ರಕ್ರಿಯೆ ತಡವಾಗಬಾರದು ಎಂಬುದು ನನ್ನ ಅಭಿಪ್ರಾಯ. ಸಭೆಯಲ್ಲೂ ಇದೇ ಅಭಿಪ್ರಾಯ ವ್ಯಕ್ತವಾಯಿತು’ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ADVERTISEMENT

ಕೃಷ್ಣಾ ಜಲ ವಿವಾದ ನ್ಯಾಯಮಂಡಳಿಯ ತೀರ್ಪಿನ ಅನ್ವಯ ಮೂರನೇ ಹಂತದ ಯೋಜನೆ ಅಡಿ ರಾಜ್ಯಕ್ಕೆ 130 ಟಿಎಂಸಿ ಅಡಿ ನೀರು ಹಂಚಿಕೆಯಾಗಿದೆ. ಈ ನೀರನ್ನು ಬಳಸಿಕೊಳ್ಳಬೇಕು ಅಂದರೆ ಆಲಮಟ್ಟಿ ಅಣೆಕಟ್ಟೆಯ ಎತ್ತರವನ್ನು 519 ಮೀಟರ್‌ನಿಂದ 524 ಮೀಟರ್‌ಗೆ ಹೆಚ್ಚಿಸಬೇಕು ಎಂಬ ಅಭಿಪ್ರಾಯ ಸಭೆಯಲ್ಲಿ ವ್ಯಕ್ತವಾಯಿತು.

ಅಣೆಕಟ್ಟೆಯ ಎತ್ತರವನ್ನು ಹೆಚ್ಚಿಸಲು ಮಹಾರಾಷ್ಟ್ರ ಸರ್ಕಾರವು ಅಡ್ಡಗಾಲು ಹಾಕುತ್ತಿದ್ದು, ಅದನ್ನು ಪರಿಹರಿಸಿಕೊಂಡು ಯೋಜನೆಯನ್ನು ಕಾರ್ಯರೂಪಕ್ಕೆ ತರುವ ಸಾಧ್ಯತೆಗಳನ್ನು ಪರಿಶೀಲಿಸಿ ಎಂದು ಸಿದ್ದರಾಮಯ್ಯ ಅವರು ಅಧಿಕಾರಿಗಳಿಗೆ ಸೂಚಿಸಿದರು. 

ಯೋಜನೆ ಅನುಷ್ಠಾನಕ್ಕೆ 1.33 ಲಕ್ಷ ಎಕರೆ ಜಮೀನು ಅಗತ್ಯವಿದೆ. ಇದರಲ್ಲಿ 75,563 ಎಕರೆ ಮುಳುಗಡೆಯಾಗಲಿದೆ. ಮುಳುಗಡೆಯಾಗುವ ಜಮೀನನ್ನು ಎರಡು ಹಂತದಲ್ಲಿ ಸ್ವಾಧೀನಕ್ಕೆ ತೆಗೆದುಕೊಳ್ಳಲು ಯೋಜಿಸಲಾಗಿತ್ತು. ಆದರೆ ಈಗಾಗಲೇ ಯೋಜನಾ ವೆಚ್ಚ ವಿಪರೀತ ಹೆಚ್ಚಾಗಿರುವ ಕಾರಣಕ್ಕೆ, ಒಂದೇ ಹಂತದಲ್ಲಿ ಸ್ವಾಧೀನ ಪ್ರಕ್ರಿಯೆ ನಡೆಸಲು ನಿರ್ಧರಿಸಲಾಗಿದೆ. ಈ ನಿರ್ಧಾರಕ್ಕೆ ಬದ್ಧವಾಗಿದ್ದುಕೊಂಡು, ತ್ವರಿತವಾಗಿ ಭೂಸ್ವಾಧೀನ ನಡೆಸಬೇಕು ಎಂದು ಅವರು ಸೂಚಿಸಿದರು.

Quote - ಯೋಜನೆಗೆ ಭೂಮಿ ನೀಡುವ ರೈತರಿಗೆ ನ್ಯಾಯಯುತವಾದ ಪರಿಹಾರ ನೀಡುವುದಕ್ಕೆ ಸರ್ಕಾರ ಬದ್ಧವಾಗಿದೆ. ಯಾರಿಗೂ ಅನ್ಯಾಯವಾಗಲು ಅವಕಾಶ ನೀಡುವುದಿಲ್ಲ ಸಿದ್ದರಾಮಯ್ಯ ಮುಖ್ಯಮಂತ್ರಿ

Cut-off box - ವೆಚ್ಚ ಅಂದಾಜು ₹51148 ಕೋಟಿಯೋಜನೆಯ ಆರಂಭಿಕ ಅಂದಾಜು ವೆಚ್ಚ ₹87818 ಕೋಟಿಈಗಿನ ಅಂದಾಜು ವೆಚ್ಚ ₹17627 ಕೋಟಿಭೂಸ್ವಾಧೀನಕ್ಕೆ ಮೊದಲು ಅಂದಾಜಿಸಲಾಗಿದ್ದ ಮೊತ್ತ ₹40557 ಕೋಟಿಭೂಸ್ವಾಧೀನಕ್ಕೆ ಈಗ ಅಂದಾಜಿಸಲಾಗಿರುವ ಮೊತ್ತ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.