ADVERTISEMENT

ಕನ್ನಂಬಾಡಿ ಕಟ್ಟೆ | 'ಟಿಪ್ಪು ಸುಲ್ತಾನ್' ಎಂದು ಮರುನಾಮಕರಣ ಮಾಡುವ ಹುನ್ನಾರ: ಅಶೋಕ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 4 ಆಗಸ್ಟ್ 2025, 7:23 IST
Last Updated 4 ಆಗಸ್ಟ್ 2025, 7:23 IST
ಆರ್‌. ಅಶೋಕ
ಆರ್‌. ಅಶೋಕ   

ಬೆಂಗಳೂರು: 'ಕನ್ನಂಬಾಡಿ ಕಟ್ಟೆ ನಿರ್ಮಾಣಕ್ಕೆ ಮೊದಲು ಅಡಿಗಲ್ಲು ಹಾಕಿದ್ದೇ ಟಿಪ್ಪು ಸುಲ್ತಾನ್‌' ಎಂಬ ಸಮಾಜ ಕಲ್ಯಾಣ ಸಚಿವ ಡಾ.ಎಚ್.ಸಿ.ಮಹದೇವಪ್ಪ ಅವರ ಹೇಳಿಕೆಗೆ ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ ತಿರುಗೇಟು ನೀಡಿದ್ದಾರೆ. ಕೆಆರ್‌ಎಸ್ ಜಲಾಶಯಕ್ಕೆ ಮತಾಂಧ ಟಿಪ್ಪು ಸುಲ್ತಾನನ ಹೆಸರಿಟ್ಟು ಟಿಎಸ್ ಜಲಾಶಯ ಎಂದು ಮರುನಾಮಕರಣ ಮಾಡುವ ಹುನ್ನಾರ ನಡೆಯುತ್ತಿದೆಯೇ ಎಂದು ಅವರು ಪ್ರಶ್ನಿಸಿದ್ದಾರೆ.

ಈ ಕುರಿತು ಸಾಮಾಜಿಕ ಮಾಧ್ಯಮ 'ಎಕ್ಸ್‌'ನಲ್ಲಿ ಸುದೀರ್ಘ ಪೋಸ್ಟ್ ಹಂಚಿಕೊಂಡಿದ್ದಾರೆ.

'ನಾಡದ್ರೋಹಿ, ಮತಾಂಧ ಟಿಪ್ಪು ಸುಲ್ತಾನ್ ಸತ್ತಿದ್ದು 1799ರಲ್ಲಿ. ಮೈಸೂರು ಭಾಗದ ಗ್ರಾಮೀಣ ಜನರ ನಾಲಿಗೆಯ ಮೇಲೆ ಇಂದಿಗೂ ಕನ್ನಂಬಾಡಿ ಕಟ್ಟೆ ಎಂದೇ ಕರೆಸಿಕೊಳ್ಳುವ ಕೆಆರ್‌ಎಸ್ ಜಲಾಶಯದ ಕಾಮಗಾರಿ ಪ್ರಾರಂಭವಾದದ್ದು 1911ರಲ್ಲಿ. 1799ರಲ್ಲಿ ಸತ್ತ ಮತಾಂಧ ಟಿಪ್ಪು ಸುಲ್ತಾನನಿಗೂ, ಅವನು ಸತ್ತ ಮೇಲೆ ಸರಿಸುಮಾರು 112 ವರ್ಷ ಆದಮೇಲೆ ಕಾಮಗಾರಿ ಪ್ರಾರಂಭವಾದ ಕನ್ನಂಬಾಡಿ ಕಟ್ಟೆಗೂ ಏನು ಸಂಬಂಧ ಸಚಿವ ಡಾ.ಎಚ್.ಸಿ.ಮಹದೇವಪ್ಪ ಅವರೇ? ನಿಮ್ಮ ಬಾಲಿಶ ಹೇಳಿಕೆ ಗೋಕುಲಾಷ್ಟಮಿಗೂ ಇಮಾಮ್ ಸಾಬಿಗೂ ಏನು ಸಂಬಂಧ ಎನ್ನುವಂತಾಗಿದೆ' ಎಂದಿದ್ದಾರೆ.

ADVERTISEMENT

'ಇತಿಹಾಸ ಸ್ವಲ್ಪ ಓದಿಕೊಳ್ಳಿ. ಮದ್ರಾಸ್‌ನ ಬ್ರಿಟಿಷ್ ಪ್ರಾಂತೀಯ ಸರ್ಕಾರ ಒಪ್ಪಿಗೆ ನೀಡಿದ್ದು 80 ಅಡಿ ಎತ್ತರದ ಅಣೆಕಟ್ಟೆಗೆ. ಆದರೆ ಮಹಾರಾಜರು 124 ಅಡಿ ಎತ್ತರದ ಅಣೆಕಟ್ಟೆ ನಿರ್ಮಿಸುವ ಯೋಜನೆ ರೂಪಿಸಿದರು. ಪ್ರಾರಂಭಿಕ ಅಂದಾಜು ವೆಚ್ಚ 2 ಕೋಟಿ 35 ಲಕ್ಷ ರೂ. ಅಂದಿನ ರಾಜ್ಯದ ಆದಾಯವನ್ನೆಲ್ಲ ಇದೊಂದಕ್ಕೇ ಬಳಸುವುದು ಸಾಧ್ಯವಿರಲಿಲ್ಲ. ಆಗ ಕೃಷ್ಣರಾಜ ಒಡೆಯರ್ ಮತ್ತು ರಾಜಮಾತೆಯವರು ತೆಗೆದುಕೊಂಡ ತೀರ್ಮಾನ ಅಪೂರ್ವವಾದದ್ದು. ಅರಮನೆಯ ಖಾಸಗಿ ಭಂಡಾರದಲ್ಲಿದ್ದ ನಾಲ್ಕು ಮೂಟೆಗಳಷ್ಟು ವಜ್ರ, ವೈಢೂರ್ಯ, ಚಿನ್ನಾಭರಣಗಳು ಮತ್ತು ಬೆಳ್ಳಿ ನಾಣ್ಯಗಳನ್ನು ಮುಂಬೈಗೆ ತೆಗೆದುಕೊಂಡು ಹೋಗಿ ಮಾರಾಟ ಮಾಡಿ ಬಂದ ಹಣವನ್ನು ಕನ್ನಂಬಾಡಿಯ ಕಟ್ಟೆ ನಿರ್ಮಾಣಕ್ಕೆ ವಿನಿಯೋಗಿಸಿದರು' ಎಂದು ಹೇಳಿದ್ದಾರೆ.

'ಕನ್ನಂಬಾಡಿ ಕಟ್ಟೆ ಎಂದೊಡನೆ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರು ನೆನಪಾಗುತ್ತಾರೆ. ಆದ್ದರಿಂದಲೇ ಕನ್ನಂಬಾಡಿ ಕಟ್ಟೆಗೆ 'ಕೃಷ್ಣರಾಜ ಸಾಗರ' ಎಂಬ ಹೆಸರು ಇಡುವ ಮೂಲಕ ಅವರ ಹೆಸರನ್ನು ಸ್ಮರಿಸಲಾಗಿದೆ. ಈಗ ಕಾಂಗ್ರೆಸ್ ಸರ್ಕಾರದ ವರಸೆ ನೋಡುತ್ತಿದ್ದರೆ ಕೆಆರ್‌ಎಸ್ ಜಲಾಶಯಕ್ಕೆ ಟಿಪ್ಪು ಸುಲ್ತಾನ್ ಹೆಸರಿಡುವ ಹುನ್ನಾರ ನಡೆಯುತ್ತಿದೆ ಎನ್ನಿಸುತ್ತಿದೆ' ಎಂದಿದ್ದಾರೆ.

'ಇತ್ತೀಚೆಗಷ್ಟೇ ಸಿಎಂ ಸಿದ್ದರಾಮಯ್ಯ ಅವರ ಪುತ್ರ ಡಾಕ್ಟರ್ ಯತೀಂದ್ರ ಅವರು ಸಿದ್ದರಾಮಯ್ಯನವರು ನಾಲ್ವಡಿ ಅವರಿಗಿಂತ ದೊಡ್ಡವರು ಎನ್ನುವಂತೆ ಮಾತನಾಡಿ ನಾಲ್ವಡಿ ಅವರಿಗೆ ಅಪಮಾನ ಮಾಡಿದರು. ಈಗ ಸಿದ್ದರಾಮಯ್ಯನವರ ಆಪ್ತ ಸಚಿವ ಮಹದೇವಪ್ಪನವರು ಕನ್ನಂಬಾಡಿ ಕಟ್ಟೆಗೆ ಅಡಿಗಲ್ಲು ಹಾಕಿದ್ದು ಮತಾಂಧ ಟಿಪ್ಪು ಸುಲ್ತಾನ್ ಎಂದು ನಾಲ್ವಡಿ ಕೃಷ್ಣರಾಜ ಒಡೆಯರಿಗೆ ಮತ್ತೊಮ್ಮೆ ಅಪಮಾನ ಮಾಡಿದ್ದಾರೆ. ಸಿದ್ದರಾಮಯ್ಯ ಅವರ ಆಪ್ತ ವಲಯದಿಂದ ಕೇಳಿಬರುತ್ತಿರುವ ಈ ಹೇಳಿಕೆಗಳನ್ನು ಗಮನಿಸಿದರೆ ಮೈಸೂರು ರಾಜಮನೆತನದ ತೇಜೋವಧೆ ಮಾಡುವ, ಆ ಮನೆತನದ ಗೌರವಕ್ಕೆ ಮಸಿ ಬಳಿಯುವ ವ್ಯವಸ್ಥಿತ ಹುನ್ನಾರ ನಡೆಯುತ್ತಿದೆ ಅನ್ನಿಸುತ್ತಿದೆ' ಎಂದು ಆರೋಪಿಸಿದ್ದಾರೆ.

'ನಾಲ್ವಡಿ ಕೃಷ್ಣರಾಜ ಒಡೆಯರು ಆಧುನಿಕ ಮೈಸೂರಿನ ಮಹಾಶಿಲ್ಪಿ ಎಂದೇ ಅವರ ಹೆಸರು ಇತಿಹಾಸದಲ್ಲಿ ದಾಖಲಾಗಿದೆ. ಮೈಸೂರು ಸೀಮೆಯ ಜನರಿಗೆ ಅವರು ಇಂದಿಗೂ ಪ್ರಾತಃಸ್ಮರಣೀಯರು. ಹಿಂದುಳಿದ ಜನಾಂಗಗಳು, ದಲಿತರು, ಬಡಬಗ್ಗರ ಬಗ್ಗೆ ಅಪಾರ ಕಾಳಜಿ ಇದ್ದ ಅವರ ಬಗ್ಗೆ ಮೈಸೂರು ಪ್ರಾಂತ್ಯದ ಜನರಿಗೆ ಈಗಲೂ ಅಪಾರ ಗೌರವ. ರೈತರ ಪಾಲಿಗೆ ಅವರು ಅನ್ನದಾತ. ಇಂತಹ ಮೇರು ವ್ಯಕ್ತಿತ್ವದ ನಾಲ್ವಡಿ ಅವರಿಗೆ ಮಸಿ ಬಳಿಯುವ ಕೆಲಸ ಯಾರಿಗೂ ಶೋಭೆ ತರುವುದಿಲ್ಲ. ಮೈಸೂರು ರಾಜಮನೆತನದ ತಂಟೆಗೆ ಬಂದ ಯಾರೂ ಇದುವರೆಗೂ ಉದ್ಧಾರ ಆಗಿಲ್ಲ. ಕಾಂಗ್ರೆಸ್ ನಾಯಕರು ಇದನ್ನ ನೆನಪಿಟ್ಟುಕೊಳ್ಳಬೇಕು. ತಮ್ಮ ಕ್ಷುಲ್ಲಕ ರಾಜಕೀಯಕ್ಕೆ ಮೈಸೂರು ರಾಜಮನೆತನದ ಹೆಸರನ್ನು ಪದೇ ಪದೇ ಎಳೆದು ತಂದು ಅಪಮಾನ ಮಾಡಿದರೆ ಈ ನಾಡಿನ ಜನತೆ ಸಹಿಸುವುದಿಲ್ಲ. ಬಿಜೆಪಿ ಸುಮ್ಮನೆ ಕೂರುವುದಿಲ್ಲ' ಎಂದು ಎಚ್ಚರಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.