ADVERTISEMENT

ಈಶ್ವರಪ್ಪ ಬಂಧನಕ್ಕೆ ಒತ್ತಾಯ: ಕಾಂಗ್ರೆಸ್‌ ಪ್ರತಿಭಟನೆ

ಭ್ರಷ್ಟಾಚಾರ ನಿಯಂತ್ರಣ ಕಾಯ್ದೆ ಅಡಿಯೇ ಪ್ರಕರಣ ದಾಖಲಿಸಲು ಆಗ್ರಹ

​ಪ್ರಜಾವಾಣಿ ವಾರ್ತೆ
Published 16 ಏಪ್ರಿಲ್ 2022, 19:46 IST
Last Updated 16 ಏಪ್ರಿಲ್ 2022, 19:46 IST
ರಾಮನಗರದಲ್ಲಿ ಶನಿವಾರ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ನೇತೃತ್ವದಲ್ಲಿ ಪ್ರತಿಭಟನಾ ಸಭೆ ನಡೆಯಿತು
ರಾಮನಗರದಲ್ಲಿ ಶನಿವಾರ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ನೇತೃತ್ವದಲ್ಲಿ ಪ್ರತಿಭಟನಾ ಸಭೆ ನಡೆಯಿತು   

ರಾಮನಗರ: ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ವಿರುದ್ಧ ಭ್ರಷ್ಟಾಚಾರ ನಿಯಂತ್ರಣ ಕಾಯ್ದೆ ಅಡಿ ಪ್ರಕರಣ ದಾಖಲಿಸಬೇಕು. ಪೊಲೀಸರು ಅವರನ್ನು ಬಂಧಿಸಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಒತ್ತಾಯಿಸಿದರು.

ಈಶ್ವರಪ್ಪ ಬಂಧನಕ್ಕೆ ಆಗ್ರಹಿಸಿ ನಗರದಲ್ಲಿ ಶನಿವಾರ ನಡೆದ ಪ್ರತಿಭಟನಾ ಮೆರವಣಿಗೆ ವೇಳೆ ಅವರು ಪತ್ರಕರ್ತರ ಜೊತೆ ಮಾತನಾಡಿದರು.

‘ಶೇ 40ರಷ್ಟು ಕಮಿಷನ್ ಕೇಳಿದ್ದಕ್ಕೆ ಸಂತೋಷ್ ಪಾಟೀಲ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದೇ ದೂರಿನಲ್ಲಿ ದಾಖಲಾಗಿದೆ. ಹೀಗಾಗಿ, ಭ್ರಷ್ಟಾಚಾರ ನಿಯಂತ್ರಣ ಕಾಯ್ದೆ ಅಡಿಯೇ ಪ್ರಕರಣ ದಾಖಲಾಗಬೇಕು’ ಎಂದು ಒತ್ತಾಯಿಸಿದರು.

ADVERTISEMENT

‘ಮುಖ್ಯಮಂತ್ರಿ, ಗೃಹ ಸಚಿವರೇ ಈಶ್ವರಪ್ಪ ಏನು ತಪ್ಪು ಮಾಡಿಲ್ಲ ಎಂದು ಸರ್ಟಿಫಿಕೆಟ್ ಕೊಡುತ್ತಿದ್ದಾರೆ. ಹೀಗಿರುವಾಗ ನ್ಯಾಯ ಸಿಗುತ್ತದೆಯೇ’ ಎಂದು ಪ್ರಶ್ನಿಸಿದ ಡಿಕೆಶಿ, ಪ್ರಕರಣದ ವಿಚಾರಣೆಗೆ ಆಯೋಗ ನೇಮಿಸಬೇಕು. ಇಲ್ಲವೇ ಸಿಬಿಐಗೆ ಪ್ರಕರಣ ವಹಿಸಬೇಕು ಎಂದು ಒತ್ತಾಯಿಸಿದರು.

‘ಸಂತೋಷ್ ಪಾಟೀಲ ಆತ್ಮಹತ್ಯೆ ಪ್ರಕರಣದಲ್ಲಿ ಡಿಕೆಶಿ ಕೈವಾಡ ಇದೆ’ ಎಂಬ ರಮೇಶ್ ಜಾರಕಿಹೊಳಿ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ‘ಯಾರೋ ಮೆಂಟಲ್ ಕೇಸ್‌ಗೆ ನಾನು ಉತ್ತರ ಕೊಡುವುದಿಲ್ಲ’ ಎಂದರು.

‘ಕಾಂಗ್ರೆಸ್‌ನವರನ್ನು ಜೈಲಿಗೆ ಕಳಿಸಬೇಕು’ ಎಂಬ ನಳಿನ್‌ಕುಮಾರ್ ಕಟೀಲ್ ಹೇಳಿಕೆಗೆ ಪ್ರತಿಕ್ರಿಯೆ ನೀಡಿ, ‘ಅಮಿತ್ ಶಾ, ಯಡಿಯೂರಪ್ಪ ಎಲ್ಲರೂ ಜೈಲಿಗೆ ಹೋಗಿದ್ದಾರೆ ಅಲ್ವಾ? ನಾನೂ ಹೋಗ್ತೀನಿ ಬಿಡಿ. ಅಲ್ಲೂ ಚೆನ್ನಾಗಿ ಊಟ ಕೊಡುತ್ತಾರೆ’ ಎಂದು ಲೇವಡಿ ಮಾಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.