ADVERTISEMENT

ಕುಮಾರಸ್ವಾಮಿ ಸಿಕ್ಕಿಸಲು ಸಿದ್ದರಾಮಯ್ಯ ಕುತಂತ್ರ

ಆಡಿಯೊ ಪ್ರಕರಣದ ಎಸ್‌ಐಟಿ ತನಿಖೆ

​ಪ್ರಜಾವಾಣಿ ವಾರ್ತೆ
Published 14 ಫೆಬ್ರುವರಿ 2019, 20:45 IST
Last Updated 14 ಫೆಬ್ರುವರಿ 2019, 20:45 IST

ಬೆಂಗಳೂರು: ‘ಆಡಿಯೊ ಪ್ರಕರಣವನ್ನು ವಿಶೇಷ ತನಿಖಾ ತಂಡದಿಂದ (ಎಸ್‌ಐಟಿ) ತನಿಖೆ ನಡೆಸುವ ಮೂಲಕ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರನ್ನು ಸಿಕ್ಕಿಸಲು ಕಾಂಗ್ರೆಸ್‌ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಷಡ್ಯಂತ್ರ ನಡೆಸಿದ್ದಾರೆ’ ಎಂದು ಬಿಜೆಪಿ ಶಾಸಕ ಕೆ.ಎಸ್‌.ಈಶ್ವರಪ್ಪ ಆರೋಪಿಸಿದರು.

ಗುರುವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ತನಿಖಾ ದಳವನ್ನು ಕಾಂಗ್ರೆಸ್‌ ದುರ್ಬಳಕೆ ಮಾಡಿಕೊಳ್ಳಲಿದೆ. ಈ ಪ್ರಕರಣವನ್ನು ಎಸ್‌ಐಟಿಗೆ ಕೊಡಲು ಕುತಂತ್ರಿ ರಾಜಕಾರಣಿಯಾದ ಸಿದ್ದರಾಮಯ್ಯ ಕಾರಣ. ಈ ಮೂಲಕ ಬಿಜೆಪಿ ಜತೆಗೆ ಜೆಡಿಎಸ್‌ ಅನ್ನು ಮುಗಿಸಲು ಸಂಚು ನಡೆಸಿದ್ದಾರೆ. ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸೋಲಿಸಿದ್ದಕ್ಕೆ ಈ ಮೂಲಕ ಪ್ರತಿಕಾರ ತೀರಿಸಿಕೊಳ್ಳುತ್ತಿದ್ದಾರೆ’ ಎಂದು ದೂರಿದರು.

‘ಈ ಪ್ರಕರಣದಲ್ಲಿ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ದೋಷಮುಕ್ತರಾಗಲಿದ್ದಾರೆ’ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.

ADVERTISEMENT

‘ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾ ರಾಷ್ಟ್ರೀಯ ಸಮಾವೇಶ ಬಿಹಾರದ ಪಟ್ನಾದಲ್ಲಿ ಇದೇ 15 ಹಾಗೂ 16ರಂದು ನಡೆಯಲಿದೆ. ಪ್ರಧಾನಿ ನರೇಂದ್ರ ಮೋದಿ ಉದ್ಘಾಟನೆ ಮಾಡಲಿದ್ದು, ರಾಜ್ಯದಿಂದ 65 ಮಂದಿ ಭಾಗವಹಿಸಲಿದ್ದಾರೆ’ ಎಂದು ಮಾಹಿತಿ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.