ADVERTISEMENT

ಫೆ.19ಕ್ಕೆ ಸಾರಿಗೆ ನಿಗಮಗಳ ನೌಕರರ ‘ಬೆಂಗಳೂರು ಚಲೊ’

​ಪ್ರಜಾವಾಣಿ ವಾರ್ತೆ
Published 17 ಫೆಬ್ರುವರಿ 2026, 15:47 IST
Last Updated 17 ಫೆಬ್ರುವರಿ 2026, 15:47 IST
<div class="paragraphs"><p>ಸಾರಿಗೆ ನಿಗಮಗಳ ನೌಕರರ ಮುಷ್ಕರ</p></div>

ಸಾರಿಗೆ ನಿಗಮಗಳ ನೌಕರರ ಮುಷ್ಕರ

   

ಬೆಂಗಳೂರು: ಕೆಎಸ್‌ಆರ್‌ಟಿಸಿ ಸೇರಿದಂತೆ ನಾಲ್ಕು ನಿಗಮಗಳ ನೌಕರರ ಬೇಡಿಕೆ ಈಡೇರಿಸಲು ಒತ್ತಾಯಿಸಿ ಫೆ.19ರಂದು ‘ಬೆಂಗಳೂರು ಚಲೊ’ ನಡೆಸಲು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ ನಿರ್ಧರಿಸಿದೆ.

‘ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನದಲ್ಲಿ ಫೆ.19ರಂದು ಬೆಳಿಗ್ಗೆ 11 ಗಂಟೆಯಿಂದ ಶಾಂತಿಯುತ ಪ್ರತಿಭಟನಾ ಸಭೆ ನಡೆಸಲು ತೀರ್ಮಾನಿಸಲಾಗಿದೆ’ ಎಂದು ಸಮಿತಿಯ ಸದಸ್ಯರು ಪತ್ರಿಕಾಗೋಷ್ಠಿಯಲ್ಲಿ ಮಂಗಳವಾರ ಮಾಹಿತಿ ನೀಡಿದರು.

ADVERTISEMENT

‘ಪ್ರತಿಭಟನಾ ಸಭೆಯ ತೀರ್ಮಾನವನ್ನು ಸಾರಿಗೆ ಸಚಿವ ರಾಮಲಿಂಗಾರೆಡ್ಡಿಯವರಿಗೆ ಪತ್ರ ಬರೆದು ತಿಳಿಸಲಾಗಿತ್ತು. ಆದರೆ, ಈವರೆಗೆ ಸರ್ಕಾರ ಅಥವಾ ಸಾರಿಗೆ ನಿಗಮಗಳ ಆಡಳಿತ ವರ್ಗದಿಂದ ಸ್ಪಂದನೆ ದೊರೆತಿಲ್ಲ. ಸಾರಿಗೆ ನೌಕರರ ನ್ಯಾಯಯುತ ಬೇಡಿಕೆ ಈಡೇರಿಸುವ ವಿಷಯದಲ್ಲಿ ತೋರುತ್ತಿರುವ ಉದಾಸೀನ ಧೋರಣೆಯಿಂದ ಪ್ರತಿಭಟನಾ ಸಭೆ ನಡೆಸುತ್ತಿದ್ದೇವೆ. ಈ ಸಭೆಯಲ್ಲಿ ಎಲ್ಲರೂ ಸೇರಿ ಮುಂದಿನ ಹೋರಾಟದ ಬಗ್ಗೆ ನಿರ್ಣಯ ಕೈಗೊಳ್ಳುತ್ತೇವೆ’ ಎಂದು ಹೇಳಿದರು.

‘2024ರ ಜನವರಿ 1ರಿಂದ ವೇತನ ಪರಿಷ್ಕರಣೆಯಾಗಬೇಕು. 2020ರ ಜನವರಿ 1ರಿಂದ 2023ರ ಫೆಬ್ರುವರಿ 28ರವರೆಗಿನ 38 ತಿಂಗಳ ಹಿಂದಿನ ವೇತನ ಒಪ್ಪಂದದ ಹಿಂಬಾಕಿ ನೀಡಬೇಕು. ದಿನಭತ್ಯೆ ಹೆಚ್ಚಾಗಬೇಕು. ಫಾರಂ–4 ವೈಜ್ಞಾನಿಕವಾಗಿ ಪರಿಷ್ಕರಣೆಯಾಗಬೇಕು ಎಂಬ ಬೇಡಿಕೆಗಳನ್ನು ಈಡೇರಿಸಬೇಕು’ ಎಂದು ಮುಖಂಡರು ಆಗ್ರಹಿಸಿದರು.

‘ಸ್ವಾತಂತ್ರ್ಯ ಉದ್ಯಾನದಲ್ಲಿ ನಡೆಯುವ ಪ್ರತಿಭಟನಾ ಸಭೆಯಲ್ಲಿ ನಾಲ್ಕೂ ಸಾರಿಗೆ ನಿಗಮಗಳ ನೌಕರರು, ಎಲ್ಲ ಸಂಘಟನೆಗಳ ಪದಾಧಿಕಾರಿಗಳು, ಕಾರ್ಯಕರ್ತರು, ನಿವೃತ್ತ ನೌಕರರು ಭಾಗವಹಿಸಲಿದ್ದಾರೆ’ ಎಂದು ಜಂಟಿ ಕ್ರಿಯಾ ಸಮಿತಿಯ ಡಿ.ಎ. ವಿಜಯಭಾಸ್ಕರ್‌, ಬಿ. ಜಯದೇವರಾಜೇ ಅರಸು, ಎಚ್‌.ಡಿ. ರೇವಪ್ಪ, ವೆಂಕಟರಮಣಪ್ಪ, ಎ. ಸೋಮಣ್ಣ, ಎಚ್‌.ಆರ್‌. ಜಗದೀಶ್‌, ಜಿ.ಕೆ. ರಾಜೇಂದ್ರಗೌಡ  ಮಾಹಿತಿ ನೀಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.