ಹುಬ್ಬಳ್ಳಿ: ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯಲ್ಲಿ ಖಾಲಿ ಇರುವ 2500 ಚಾಲಕ, ನಿರ್ವಾಹಕರ ಹುದ್ದೆಗಳ ನೇಮಕಕ್ಕೆ ರಾಜ್ಯ ಸರ್ಕಾರದಿಂದ ಅನುಮತಿ ದೊರೆತಿದ್ದು, ಶೀಘ್ರದಲ್ಲೇ ನೇಮಕ ಮಾಡಿಕೊಳ್ಳಲಾಗುವುದು ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಜಗದೀಶ ಶೆಟ್ಟರ್ ಹೇಳಿದರು.
ಸಂಸ್ಥೆಯ 23ನೇ ಸಂಸ್ಥಾಪನಾ ದಿನಾಚರಣೆಯನ್ನು ಭಾನುವಾರ ಉದ್ಘಾಟಿಸಿ ಮಾತನಾಡಿದ ಅವರು, ತೀವ್ರ ನಷ್ಟದಲ್ಲಿರುವ ಸಂಸ್ಥೆಯ ಹಿತದೃಷ್ಟಿಯಿಂದ ಮುಂದಿನ ಐದು ವರ್ಷಗಳ ಕಾಲ ವಾಹನ ತೆರಿಗೆ ವಿನಾಯ್ತಿ ನೀಡುವಂತೆ ಹಾಗೂ ವಿದ್ಯಾರ್ಥಿ ಬಸ್ಪಾಸ್ಗೆ ಸಂಬಂಧಿಸಿದಂತೆ ಬಾಕಿ ಇರುವ ₹ 722 ಕೋಟಿಯನ್ನು ಸರ್ಕಾರ ಮರುಪಾವತಿಸುವಂತೆ ಮುಖ್ಯಮಂತ್ರಿ ಅವರಿಗೆ ಮನವಿ ಮಾಡಲಾಗುವುದು ಎಂದರು.
ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಅಧ್ಯಕ್ಷ ವಿ.ಎಸ್.ಪಾಟೀಲ ಮಾತನಾಡಿ, ವಾಹನ ತೆರಿಗೆ, ಡೀಸೆಲ್ ತೆರಿಗೆ ಮತ್ತು ಟೋಲ್ ಶುಲ್ಕದಿಂದ ಸಂಸ್ಥೆಯ ಬಸ್ಗಳಿಗೆ ವಿನಾಯ್ತಿ ನೀಡಬೇಕು ಎಂದು ರಾಜ್ಯ ಸರ್ಕಾರಕ್ಕೆ ಮನವಿ ಮಾಡಿದರು.
ವಿಧಾನ ಪರಿಷತ್ ಸದಸ್ಯ ಬಸವರಾಜ ಹೊರಟ್ಟಿ ಮಾತನಾಡಿ, ಪ್ರಯಾಣಿಕರ ಸಂಖ್ಯೆ ವಿರಳವಾಗಿರುವ ಮಾರ್ಗಗಳಲ್ಲಿ ಬಸ್ ಓಡಿಸುತ್ತಿರುವುದರಿಂದ ಸಂಸ್ಥೆ ನಷ್ಠ ಅನುಭವಿಸುತ್ತಿದ್ದು, ಇಂತಹ ಮಾರ್ಗಗಳಲ್ಲಿ ಬಸ್ ಸಂಚಾರವನ್ನು ರದ್ದುಪಡಿಸಬೇಕು. ಅಗತ್ಯವಿರುವ ಮಾರ್ಗಗಳಲ್ಲಿ ಮಾತ್ರ ಸಮಯಕ್ಕೆ ಸರಿಯಾಗಿ ಬಸ್ ಓಡಿಸಬೇಕು ಎಂದು ಹೇಳಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.